ಏಷ್ಯಾ ಕಪ್ ಟಿ20 ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಪ್ರಕಟಿತ ತಂಡದಲ್ಲಿ ಮೂವರು ಆರಂಭಿಕ ಆಟಗಾರರು ಸ್ಥಾನ ಪಡೆದಿದ್ದಾರೆ. ಕಳೆದ ಒಂದು ವರ್ಷದಿಂದ ಅಭಿಷೇಕ್ ಶರ್ಮಾ ಅವರೊಂದಿಗೆ ಇನಿಂಗ್ಸ್ ಆರಂಭಿಸುತ್ತಿದ್ದ ಸಂಜು ಸ್ಯಾಮ್ಸನ್ ಅವರ ಸ್ಥಾನದ ಮೇಲೆ ಅಪಾಯದ ತೂಗುಗತ್ತಿ ನೇತಾಡುತ್ತಿದೆ. ಈ ನಡುವೆ ತಮಗೆ ತಂಡದಲ್ಲಿ ಸ್ಥಾನ ನೀಡುವಂತೆ ಸಂಜು ಸ್ಯಾಮ್ಸನ್ ತಮ್ಮ ಧಮಾಕೆದಾರ್ ಬ್ಯಾಟಿಂಗ್ನಿಂದ ಅಭಿಮಾನಿಗಳಿಗೆ ಒತ್ತಾಯಿಸುತ್ತಿದ್ದಾರೆ.
ಮೊದಲೆರೆಡು ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದ ಸಂಜು ಸ್ಯಾಮ್ಸನ್, ಬಳಿಕ ಮತ್ತೆ ಆರಂಭಿಕರಾಗಿ ಕಣಕ್ಕೆ ಇಳಿದರು. ಮೂರನೇ ಪಂದ್ಯದಲ್ಲಿ ಆರಂಭಿಕನಾಗಿ ಬಂದು ಅದ್ಭುತ ಪ್ರದರ್ಶನ ನೀಡಿದರು. ಈ ಪಂದ್ಯದಲ್ಲಿ ಸಂಜು 51 ಎಸೆತಗಳಲ್ಲಿ 121 ರನ್ಗಳ ಇನ್ನಿಂಗ್ಸ್ ಆಡಿದರು. ಈ ವೇಳೆ ಅವರು 14 ಬೌಂಡರಿ ಮತ್ತು 7 ಸಿಕ್ಸರ್ ಬಾರಿಸಿದರು. ಮಂಗಳವಾರ ನಡೆದ ಪಂದ್ಯದಲ್ಲೂ ಸಂಜು ಆರಂಭಿಕರಾಗಿ ಕಣಕ್ಕೆ ಇಳಿದು ಆರ್ಭಟ ನಡೆಸಿದರು.

ಸಂಜು ಸ್ಯಾಮ್ಸನ್ ಕೇರಳದಲ್ಲಿ ನಡೆಯುತ್ತಿರುವ ದೇಶೀಯ ಟಿ20 ಲೀಗ್ನಲ್ಲಿ ಅಬ್ಬರಿಸಿ ಬೊಬ್ಬೆರೆದಿದ್ದಾರೆ. ಇವರ ಆಟವನ್ನು ಕಂಡು ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಕೇರಳ ಲೀಗ್ನಲ್ಲಿ ಮಂಗಳವಾರ ಕೊಚ್ಚಿ ಬ್ಲ್ಯೂ ಟೈಗರ್ಸ್, ತ್ರಿಸುರಾ ಟೈಟನ್ಸ್ ವಿರುದ್ಧ ಕಣಕ್ಕೆ ಇಳಿಯಿತು. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಕೊಚ್ಚಿ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ವಿ ಮನೋಹರ್ (5) ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದರು. ಎರಡನೇ ವಿಕೆಟ್ಗೆ ಸಂಜು ಸ್ಯಾಮ್ಸನ್ ಹಾಗೂ ಮೊಹಮ್ಮದ್ ಶಾನು (24) ತಂಡಕ್ಕೆ 76 ರನ್ಗಳ ಜೊತೆಯಾಟದ ಕಾಣಿಕೆ ನೀಡಿದರು.

ಮಂಗಳವಾರದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಮೈಚಳಿ ಬಿಟ್ಟು ಬ್ಯಾಟ್ ಮಾಡಿದರು. ಇವರು 46 ಎಸೆತಗಳಲ್ಲಿ 89 ರನ್ ಸಿಡಿಸಿದರು. ಈ ವೇಳೆ 4 ಬೌಂಡರಿ, 9 ಸಿಕ್ಸರ್ ಸಿಡಿಸಿ ತಂಡಕ್ಕೆ ಆಧಾರವಾದರು. ಈ ವೇಳೆ ಇವರ ಸ್ಟ್ರೈಕ್ ರೇಟ್ 193 ಆಗಿತ್ತು. ಇವರ ಅಮೋಘ ಬ್ಯಾಟಿಂಗ್ ನೆರವಿನಿಂದ ಕೊಚ್ಚಿ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಸೇರಿಸಿತು.