ಕರಾಚಿ, ಫೆಬ್ರವರಿ, 25: ಭಾರತದಲ್ಲಿ ನಡೆಯಲಿರುವ ವಿಶ್ವ ಕಪ್ ಟಿ 20 ಯಲ್ಲಿ ಭಾಗವಹಿಸಲು ಪಾಕಿಸ್ತಾನ ಸರ್ಕಾರ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಹಸಿರು ನಿಶಾನೆ ನೀಡಿದೆ. ಅಲ್ಲದೆ ವಿಶೇಷ ಭದ್ರತೆಯನ್ನು ವ್ಯವಸ್ಥೆ ಮಾಡಬೇಕು ಎಂದು ಕೇಳಿಕೊಂಡಿದೆ.
ವಾರಗಳ ಕಾಲ ಈ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಸರ್ಕಾರದ ನಡುವೆ ಮಾತುಕತೆ ನಡೆದು ಸರ್ಕಾರ ಅಂತಿಮವಾಗಿ ಒಪ್ಪಿಗೆ ನೀಡಿದೆ. ಈ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಅಧ್ಯಕ್ಷ ಶಹರ್ ಯಾರ್ ಖಾನ್ ಹೇಳಿಕೆ ನೀಡಿದ್ದಾರೆ.[ಟಿ20 ವಿಶ್ವ ಕಪ್ ಟೂರ್ನಿಗೆ ಭಾರತದ 6 ಅಂಪೈರ್ ಗಳು]

ನಾವು ಈ ವಿಷಯವನ್ನು ಸ್ವಾಗತ ಮಾಡುತ್ತಿದ್ದೇವೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೂ ಪರಿಸ್ಥಿತಿಯ ಮನವರಿಕೆ ಮಾಡಿಕೊಡಲಾಗಿದೆ. ತಂಡಕ್ಕೆ ಹೆಚ್ಚಿನ ಭದ್ರತೆ ನೀಡುವಂತೆ ಕೋರಲಾಗಿದೆ ಎಂದು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದ ಧರ್ಮಶಾಲಾ ಮೈದಾನದಲ್ಲಿ ಮಾರ್ಚ್ 19 ರಂದು ಪಂದ್ಯ ನಡೆಯಲಿದ್ದು ಅನೇಕ ತಿಂಗಳುಗಳ ನಂತರ ಭಾರತ ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ.[ಇಂಡಿಯಾ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ರೆಫ್ರಿಗಳು ಯಾರು?]
ದಕ್ಷಿಣ ಆಫ್ರಿಕಾದ ಮರಾಯಿಸ್ ಎರಾಸ್ಮಸ್ ಮತ್ತು ಶ್ರೀಲಂಕಾದ ಕುಮಾರ್ ಧರ್ಮಸೇನ ಅವರನ್ನು ಫೀಲ್ಡ್ ಅಂಪೈರ್ ಗಳನ್ನಾಗಿ ನೇಮಕ ಮಾಡಲಾಗಿದೆ. ಶ್ರೀಲಂಕಾದ ರಂಜನ್ ಮದುಗಲೆ ಮ್ಯಾಚ್ ರೆಫ್ರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇಂಗ್ಲೆಂಡಿನ ನಿಜೆಲ್ ಲಾಂಗ್ ಟಿವಿ ಅಂಪೈರ್ ಆಗಿ ಕೆಲಸ ಮಾಡಲಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಒಂದೊಂದು ಸಾರಿ ಟಿ20 ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿವೆ. ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನವನ್ನು ಬಗ್ಗು ಬಡಿದಿದ್ದ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಶ್ರೀಲಂಕಾವನ್ನು ಸೋಲಿಸಿದ್ದ ಪಾಕಿಸ್ತಾನ 2009 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.