ಭಾರತ ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದೆ. ಈ ವೇಳೆ ಭಾರತ ತನ್ನ ಪಂದ್ಯಗಳನ್ನು ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಡುತ್ತಿದೆ. ಈಗಾಗಲೇ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿರುವ ಭಾರತ, ಟೂರ್ನಿಯ ಸೆಮಿಫೈನಲ್ ಹಂತವನ್ನು ಪ್ರವೇಶಿಸಿದೆ. ಭಾನುವಾರ ಪಾಕ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಆರು ವಿಕೆಟ್ಗಳ ಜಯ ದಾಖಲಿಸಿದೆ. ಮಾರ್ಚ್ 2 ರಂದು ಭಾರತ ತನ್ನ ಲೀಗ್ ಹಂತದ ಕೊನೆಯ ಪಂದ್ಯವನ್ನು ಆಡಲಿದೆ.
ಭಾರತ, ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಲು ನಿರಾಕರಿಸಿದ್ದರಿಂದ ದುಬೈನಲ್ಲಿ ಆಡುತ್ತಿದೆ. ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಹೈಬ್ರೀಡ್ ಮಾದರಿಯಲ್ಲಿ ನಡೆಯುತ್ತಿದೆ. ಹೀಗಾಗಿ ಭಾರತ ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡುತ್ತಿದೆ. ಈ ಬಗ್ಗೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ದೊಡ್ಡ ಹೇಳಿಕೆ ನೀಡಿದ್ದಾರೆ.

ಭಾರತದ ಒಂದೇ ಅಂಗಳದಲ್ಲಿ ಆಡುತ್ತಿರುವುದು ಅದಕ್ಕೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ಪ್ಯಾಟ್ ಕಮಿನ್ಸ್ ತಿಳಿಸಿದ್ದಾರೆ. ಪ್ಯಾಟ್ ಕಮಿನ್ಸ್ ಕೌಟುಂಬಿಕ ಕಾರಣ ಹಾಗೂ ಗಾಯದಿಂದ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುತ್ತಿಲ್ಲ. ಇವರ ಬದಲಿಗೆ ಅನುಭವಿ ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
"ಚಾಂಪಿಯನ್ಸ್ ಟ್ರೋಫಿಯ ಪಂದ್ಯಗಳನ್ನು ನೋಡುತ್ತಿದೆ. ಒಂದೇ ಮೈದಾನದಲ್ಲಿ ಆಡುತ್ತಿರುವುದು ಭಾರತಕ್ಕೆ ಅಡ್ವಾಂಟೇಜ್ ಆಗಿದೆ. ಅವರು ನಿಶ್ಚಿತವಾಗಿ ಬಲಿಷ್ಠರಾಗಿದ್ದಾರೆ. ಅವರಿಗೆ ಒಂದೇ ಅಂಗಳದಲ್ಲಿ ಆಡುವ ಲಾಭ ಸಹ ಸಿಗುತ್ತಿದೆ ಎಂದು ಯಾಹು ಸ್ಪೋರ್ಟ್ಸ್ ಆಸ್ಟ್ರೇಲಿಯಾಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಪ್ಯಾಟ್ ಕಮಿನ್ಸ್ ಅವರು ಮಾರ್ಚ್ 22 ರಿಂದ ಮತ್ತೆ ಅಂಗಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರು ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿ ಕಣಕ್ಕೆ ಇಳಿಯಲಿದ್ದಾರೆ. ಇದೇ ವಿಚಾರವಾಗಿ ಮಾತನಾಡಿರುವ ಅವರು, ನಾನು ಈ ವಾರ ಅಭ್ಯಾಸವನ್ನು ಆರಂಭಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಸಾಲು ಸಾಲು ಪಂದ್ಯಗಳಿವೆ. ಐಪಿಎಲ್ ಮುಗಿಯುತ್ತಿದ್ದಂತೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಡೆಯಲಿದೆ. ಈ ಪಂದ್ಯದ ಬಳಿಕ ನಾವು ವೆಸ್ಟ್ ಇಂಡೀಸ್ ಪ್ರವಾಸವನ್ನು ಬೆಳೆಸಲಿದ್ದೇವೆ ಎಂದು ಕಮಿನ್ಸ್ ತಿಳಿಸಿದ್ದಾರೆ.
ಕಮಿನ್ಸ್ ಅವರ ಅನುಪಸ್ಥಿತಿಯಲ್ಲಿ ಆಸೀಸ್ ತಂಡವನ್ನು ಸ್ಟೀವ್ ಸ್ಮಿತ್ ಮುನ್ನಡೆಸುತ್ತಿದ್ದಾರೆ. ಇವರ ಮುಂದಾಳತ್ವದಲ್ಲಿ ಆಸೀಸ್ ಅಮೋಘ ಪ್ರದರ್ಶನ ನೀಡಿದೆ. ಚಾಂಪಿಯನ್ಸ್ ಟ್ರೋಫಿಯಲ್ಲೇ ದಾಖಲೆಯ ಮೊತ್ತವನ್ನು ಚೇಜ್ ಮಾಡಿದ ಹೆಗ್ಗಳಿಕೆ ಆಸೀಸ್ ತನ್ನದಾಗಿಸಿಕೊಂಡಿದೆ. ಇಂಗ್ಲೆಂಡ್ ವಿರುದ್ದ ಪಂದ್ಯದಲ್ಲಿ 352 ರನ್ ಬಾರಿಸಿ ಇತಿಹಾಸ ನಿರ್ಮಿಸಿದೆ.
ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ "ಬಿ" ಗುಂಪಿನ ಪಂದ್ಯ ರಾವಲ್ಪಿಂಡಿಯಲ್ಲಿ ನಡೆಯಲಿದೆ, ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದೆ. ಈ ಪಂದ್ಯದಲ್ಲಿ ಗೆದ್ದು ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ಗೆ ಅರ್ಹತೆ ಪಡೆಯಲು ಎರಡೂ ತಂಡಗಳು ಪ್ಲ್ಯಾನ್ ಮಾಡಿಕೊಂಡಿವೆ. ಎರಡೂ ತಂಡಗಳು ತಾವಾಡಿರುವ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು, ಎರಡನೇ ಗೆಲುವಿನ ಹುಡುಕಾಟದಲ್ಲಿವೆ.