ಇಂದು ಭಾರತೀಯ ಕ್ರೀಡಾ ಜಗತ್ತಿಗೆ ವಿಶೇಷ ದಿನ. ಭಾರತ ಹಾಕಿ ತಂಡದ ಮಾಜಿ ಗೋಲ್ಕೀಪರ್ ಪಿಆರ್ ಶ್ರೀಜೇಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಮತ್ತು ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮ ಅಶ್ವಿನ್ ಅವರನ್ನು ಸನ್ಮಾನಿಸಿದರು. ಈ ಕಾರ್ಯಕ್ರಮದಲ್ಲಿ ಭಾರತದ ಉಪರಾಷ್ಟ್ರಪತಿ ಜಗದೀಪ್ ಜಾಖರ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ಉಪಸ್ಥಿತರಿದ್ದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಪಿಆರ್ ಶ್ರೀಜೀಶ್ ಮತ್ತು ಅಶ್ವಿನ್ ಅವರಿಗೆ ಈ ಗೌರವ ಸಂದಿದೆ. ಗಣರಾಜ್ಯೋತ್ಸವದ ಮುನ್ನಾದಿನದಂದು ಕೇಂದ್ರ ಸರ್ಕಾರವು ಅಶ್ವಿನ್ ಅವರನ್ನು ಸನ್ಮಾನಿಸುವ ಘೋಷಣೆಯನ್ನು ಮಾಡಿತು.

ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕಳೆದ ವರ್ಷ ಆಸ್ಟ್ರೇಲಿಯಾ ಪ್ರವಾಸದ ವೇಳೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಅವರು ಭಾರತದ ಅತ್ಯಂತ ಯಶಸ್ವಿ ಬೌಲರ್ಗಳಲ್ಲಿ ಒಬ್ಬರು. ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಅಶ್ವಿನ್. ಅವರು ಒಟ್ಟು 106 ಟೆಸ್ಟ್ ಪಂದ್ಯಗಳಲ್ಲಿ 537 ವಿಕೆಟ್ ಪಡೆದಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ 619 ವಿಕೆಟ್ಗಳನ್ನು ಪಡೆದಿದ್ದಾರೆ.
ಅಶ್ವಿನ್ ಭಾರತದ ಪರ 116 ಏಕದಿನ ಪಂದ್ಯಗಳಲ್ಲಿ 156 ವಿಕೆಟ್ಗಳನ್ನು ಕಬಳಿಸಿದ್ದಾರೆ. ಅವರು 65 ಟಿ20 ಪಂದ್ಯಗಳಿಂದ 72 ವಿಕೆಟ್ಗಳನ್ನು ಪಡೆದಿದ್ದಾರೆ. ಪ್ರಸ್ತುತ ಅವರು ಐಪಿಎಲ್ 2025 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿದ್ದಾರೆ.
ಪಿಆರ್ ಶ್ರೀಜೇಶ್ ಅವರು ಭಾರತ ಹಾಕಿ ತಂಡಕ್ಕೆ ಗಣನೀಯ ಕೊಡುಗೆ ನೀಡಿದ್ದಾರೆ. ಕಳೆದ ವರ್ಷ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ನಂತರ ಅವರು ನಿವೃತ್ತಿ ಘೋಷಿಸಿದರು. ಶ್ರೀಜೇತ್ ಪ್ರಸ್ತುತ ಭಾರತ ಪುರುಷರ ಹಾಕಿ ತಂಡದ ಹೆಡ್ಕೋಚ್ ಆಗಿದ್ದಾರೆ. ಪಿಆರ್ ಶ್ರೀಜೇಶ್ 2010 ರ ವಿಶ್ವಕಪ್ನಲ್ಲಿ ಭಾರತ ಪರ ಪಾದಾರ್ಪಣೆ ಮಾಡಿದರು. ಅವರು ಎರಡು ಬಾರಿ ಒಲಿಂಪಿಕ್ ಚಾಂಪಿಯನ್ ಆಗಿದ್ದಾರೆ. 2014ರ ಏಷ್ಯನ್ ಕ್ರೀಡಾಕೂಟದಲ್ಲಿ ತಂಡವು ಚಿನ್ನ ಮತ್ತು 2018ರ ಜಕಾರ್ತಾ-ಪಾಲೆಂಬಾಂಗ್ನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಕಂಚು ಗೆಲ್ಲುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು.
ನಂತರ ಅವರು 2022 ರ ಕಾಮನ್ವೆಲ್ತ್ ಕ್ರೀಡಾಕೂಟ ಮತ್ತು 2023 ರ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಬೆಳ್ಳಿ ಪದಕ ಗೆದ್ದ ತಂಡದ ಪ್ರಮುಖ ಸದಸ್ಯರಾಗಿದ್ದರು. ಈ ಸಾಧನೆಗಾಗಿ ಅವರು 2021 ರಲ್ಲಿ ಖೇಲ್ ರತ್ನ ಪ್ರಶಸ್ತಿಯನ್ನು ಸಹ ಪಡೆದಿದ್ದಾರೆ. ಶ್ರೀಜೇಶ್ ಅವರನ್ನು 2022 ರಲ್ಲಿ 2021 ರ ಅತ್ಯುತ್ತಮ ಕ್ರೀಡಾಪಟುವಾಗಿ ಆಯ್ಕೆ ಮಾಡಲಾಯಿತು.