ಜೂನ್ 30 ಭಾನುವಾರ, ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಹೀನಾಯ ಸೋಲಿಸುವ ಮೂಲಕ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಮುಡೆಗೇರಿಸಿಕೊಂಡಿದೆ. ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 7 ರನ್ ಗಳ ಜಯ ಸಾಧಿಸಿದೆ.
ಈ ಮೂಲಕ 11 ವರ್ಷಗಳ ಬಳಿಕ ಭಾರತ ಚಾಂಪಿಯನ್ ಆಗಿದ್ದು, ಇಡೀ ದೇಶವೇ ಸಂಭ್ರಮಾಚರಣೆಯಲ್ಲಿದೆ. ಟೀಮ್ ಇಂಡಿಯಾ ಗೆದ್ದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಭಾರತೀಯ ಅಭಿಮಾನಿಗಳಿಂದ ಸುನಾಮಿ ಅಲೆ ಎದ್ದಿದೆ.
ಇದರ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ಚಾಂಪಿಯನ್ ಟೀಮ್ ಇಂಡಿಯಾಗೆ ಶುಭ ಕೋರಿದ್ದಾರೆ. ಇವರೊಂದಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಗೃಹ ಸಚಿವ ಅಮಿತ್ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ದೇಶದ ಎಲ್ಲ ಗಣ್ಯರು ಟೀಮ್ ಇಂಡಿಯಾ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಟೀಮ್ ಇಂಡಿಯಾದ ಆಟವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದು, ತಂಡವು ಟಿ 20 ವಿಶ್ವಕಪ್ ಅನ್ನು ಮನೆಗೆ ತಂದಿರುವುದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.
ಈ ಗೆಲುವು ಪ್ರತಿಯೊಬ್ಬ ಭಾರತೀಯನ ದೊಡ್ಡ ವಿಜಯವಾಗಿದೆ. ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದಿರುವುದು ಮಾತ್ರವಲ್ಲದೆ ಕೋಟ್ಯಂತರ ಭಾರತೀಯರ ಹೃದಯವನ್ನೂ ಗೆದ್ದಿದೆ. ಒಂದೇ ಒಂದು ಪಂದ್ಯವನ್ನು ಸೋಲದಿರುವುದು ಸಣ್ಣ ಸಾಧನೆಯೇನಲ್ಲ. ನಮ್ಮ ತಂಡ ಟಿ20 ಅನ್ನು ಅತ್ಯುತ್ತಮ ಶೈಲಿಯಲ್ಲಿ ತಂದಿದೆ. ನಾವು ಅವರ ಬಗ್ಗೆ ಹೆಮ್ಮೆಪಡುತ್ತೇವೆ ಎಂದು ಮೋದಿ ಹಂಚಿಕೊಂಡಿರುವ ವಿಡಿಯೋದಲ್ಲಿ ಮಾತನಾಡಿದ್ದಾರೆ.