ಅಕ್ಟೋಬರ್ 16 ರಿಂದ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಅತಿಥ್ಯ ವಹಿಸಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ಸೋಲಿಸಲು ರಣತಂತ್ರ ರೂಪಿಸಿದೆ. ಆದರೆ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.
ಎರಡು ವರ್ಷಗಳ ನಂತರ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯ ನಡೆಯುತ್ತಿದೆ. ಪಂದ್ಯ ಆರಂಭಕ್ಕೆ ಒಂದು ದಿನ ಬಾಕಿ ಇರುವಾಗಲೇ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಮಂಗಳವಾರ ಬೆಳಗ್ಗೆ ಆರಂಭವಾದ ಮಳೆಯಿಂದಾಗಿ ಭಾರತ ತಂಡದ ಅಭ್ಯಾಸವನ್ನು ರದ್ದುಗೊಳಿಸಲಾಗಿದೆ. ಬೆಳಗ್ಗೆ 11:15 ಗಂಟೆಗೆ ಟೀಮ್ ಇಂಡಿಯಾದ ಅಭ್ಯಾಸ ಅವಧಿಯನ್ನು ನಿಗದಿಪಡಿಸಲಾಗಿತ್ತು.

ಮಳೆಯಿಂದಾಗಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ರೋಚಕ ಟೆಸ್ಟ್ ಪಂದ್ಯವನ್ನು ನೋಡಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಮಳೆರಾಯನ ಅಟ್ಟಹಾಸ ಮುಂದಿನ ಐದು ದಿನಗಳಿಂದ ಮುಂದುವರೆಯಲಿದೆ ಎಂದು ಹವಮಾನ ವರದಿ ಹೇಳಿದೆ. ಇದರಿಂದ ಭಾರತೀಯ ಕ್ರಿಕೆಟ್ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ. ಮುಂದಿನ 5 ದಿನಗಳ ಕಾಲ ಬೆಂಗಳೂರಿನ ಹವಾಮಾನದಲ್ಲಿ ಭಾರೀ ಬದಲಾವಣೆಯಾಗುವ ಮುನ್ಸೂಚನೆಯಿದೆ. ಈಗಾಗಲೇ ಕಳೆದ ಮೂರು ದಿನಗಳಿಂದ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ.
ಪರಿಣಾಮ ಬುಧವಾರದಂದು ನಡೆಯುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಮೊದಲ ದಿನ ಶೇ.41ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ನಾಲ್ಕನೇ ದಿನಕ್ಕೆ ಕಡಿಮೆ ಮುನ್ಸೂಚನೆ ಇದೆ. ಅಕ್ಟೋಬರ್ 19ರಂದು ಮಳೆಯಾಗುವ ಸಾಧ್ಯತೆ ಶೇ.25 ಮಾತ್ರ. ಇನ್ನುಳಿದ ನಾಲ್ಕು ದಿನಗಳಲ್ಲಿ ಶೇ.40ರಷ್ಟು ಮಳೆಯಾಗುವ ಮುನ್ಸೂಚನೆ ಇದೆ. ಇದರಿಂದ ಪಂದ್ಯ ಡ್ರಾ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಅಕ್ಟೋಬರ್ 16- 41% ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 17- 40% ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 18- 67% ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 19- 25% ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 20- 40% ಮಳೆಯಾಗುವ ಸಾಧ್ಯತೆಯಿದೆ.
ವಿಶ್ವದಲ್ಲೇ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಉತ್ತಮ ಗುಣಮಟ್ಟದ ಒಳಚರಂಡಿ ವ್ಯವಸ್ಥೆಗೆ ಹೆಸರುವಾಸಿಯಾಗಿದೆ. ಸಬ್ಏರ್ ವ್ಯವಸ್ಥೆಯಿಂದಾಗಿ ಮಳೆ ನಿಂತ ಕೇವಲ 15 ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದಾಗಿದೆ. ಎಷ್ಟೇ ಭಾರೀ ಮಳೆ ಸುರಿದರೂ ಆಟಕ್ಕೆ ಮೈದಾನವನ್ನು ತ್ವರಿತವಾಗಿ ಸಿದ್ಧಗೊಳಿಸಬಹುದು. ಅತ್ಯಾಧುನಿಕ ತಂತ್ರಜ್ಞಾನದ ಒಳಚರಂಡಿ ವ್ಯವಸ್ಥೆಯು ಪ್ರತಿ ನಿಮಿಷಕ್ಕೆ 10 ಸಾವಿರ ಲೀಟರ್ ನೀರನ್ನು ಮೈದಾನದಿಂದ ಹೊರಹಾಕುವ ವಿಶೇಷ ಸಾಮರ್ಥ್ಯವನ್ನು ಹೊಂದಿದೆ.