ಹೆಚ್ಚಿನ ಒತ್ತಡವೇ ರಾಜೀನಾಮೆ ನಿರ್ಧಾರಕ್ಕೆ ಕಾರಣ
ವಿರಾಟ್ ಕೊಹ್ಲಿ ಭಾರತಕ್ಕೆ ಟ್ವೆಂಟಿ ತಂಡಕ್ಕೆ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ರಾಜೀನಾಮೆ ಸಲ್ಲಿಸಲು ಮುಂದಾಗಿರುವುದರ ಹಿಂದಿನ 2 ನಿಖರವಾದ ಕಾರಣಗಳನ್ನು ಬಿಚ್ಚಿಟ್ಟಿರುವ ಕೊಹ್ಲಿಯ ಬಾಲ್ಯದ ಕೋಚ್ ರಾಜ್ ಕುಮಾರ್ ಶರ್ಮಾ ವಿರಾಟ್ ಕೊಹ್ಲಿಗೆ ಉಂಟಾಗಿದ್ದ ಅಧಿಕ ಒತ್ತಡವೇ ರಾಜಿನಾಮೆಗೆ ಪ್ರಮುಖವಾದ ಕಾರಣ ಎಂದು ಹೇಳಿಕೆ ನೀಡಿದ್ದಾರೆ. ವಿರಾಟ್ ಕೊಹ್ಲಿಗೆ ದೊಡ್ಡ ಮಟ್ಟದ ಒತ್ತಡವಿತ್ತು, ಈ ಹಿಂದೆ ತನ್ನ ಜೊತೆ ಟಿ ಟ್ವೆಂಟಿ ತಂಡದ ನಾಯಕ ಸ್ಥಾನದಿಂದ ಕೆಳಗಿಳಿಯುವುದಾಗಿ ಸಾಕಷ್ಟು ಬಾರಿ ಚರ್ಚಿಸಿದ್ದರು, ನಾನು ಮನವೊಲಿಸುವ ಪ್ರಯತ್ನವನ್ನೂ ಮಾಡಿದ್ದೆ, ಆದರೆ ಒತ್ತಡ ದಿನೇ ದಿನೇ ಹೆಚ್ಚಾಗುತ್ತಿದ್ದು ಈ ನಿರ್ಧಾರವನ್ನು ಕೈಗೊಳ್ಳಲೇಬೇಕಾಗಿದೆ ಎಂದು ವಿರಾಟ್ ಕೊಹ್ಲಿ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದರು ಎಂದು ರಾಜ್ ಕುಮಾರ್ ಶರ್ಮಾ ತಿಳಿಸಿದ್ದಾರೆ.
ಕುಟುಂಬಕ್ಕೆ ಸಮಯ ನೀಡಲಾಗುತ್ತಿಲ್ಲ ಎಂಬುದು ಮತ್ತೊಂದು ಕಾರಣ
ಭಾರತ ಟೆಸ್ಟ್, ಏಕದಿನ ಮತ್ತು ಟಿ ಟ್ವೆಂಟಿ ಮೂರೂ ವಿಭಾಗಗಳ ನಾಯಕನಾಗಿದ್ದ ವಿರಾಟ್ ಕೊಹ್ಲಿಗೆ ತಮ್ಮ ಕುಟುಂಬಸ್ಥರ ಜೊತೆ ಕಾಲ ಕಳೆಯಲು ಸಮಯವೇ ಸಿಗುತ್ತಿರಲಿಲ್ಲವಂತೆ. ದೇಶಕ್ಕೆ ಓರ್ವ ಆಟಗಾರನಾಗಿ ಎಷ್ಟು ಮುಖ್ಯವೋ ಅದೇ ರೀತಿ ಕುಟುಂಬಕ್ಕೂ ಕೂಡ ವಿರಾಟ್ ಕೊಹ್ಲಿ ಸಮಯ ನೀಡಬೇಕಾದದ್ದು ಅಷ್ಟೇ ಮುಖ್ಯವಾಗಿರುತ್ತದೆ. ಹೀಗಾಗಿ ಮೂರೂ ವಿಭಾಗಗಳ ನಾಯಕನಾಗಿ ಕೆಲಸ ನಿರ್ವಹಿಸುವುದರಿಂದ ಕುಟುಂಬ ಸದಸ್ಯರ ಜತೆ ಸಮಯ ಕಳೆಯುವುದಕ್ಕೂ ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ವಿರಾಟ್ ಕೊಹ್ಲಿ ಟಿ ಟ್ವೆಂಟಿ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ರಾಜ್ ಕುಮಾರ್ ಶರ್ಮಾ ತಿಳಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೂ ಕೊಹ್ಲಿ ರಾಜೀನಾಮೆ ನೀಡುತ್ತಾರೆ ಎಂದು ರಾಜ್ ಕುಮಾರ್ ಶರ್ಮಾ ಈ ಹಿಂದೆಯೇ ಹೇಳಿದ್ದರು!
ವಿರಾಟ್ ಕೊಹ್ಲಿ ಟಿ ಟ್ವೆಂಟಿ ತಂಡದ ನಾಯಕತ್ವಕ್ಕೆ ರಾಜೀನಾಮೆ ಸಲ್ಲಿಸಿದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವಕ್ಕೂ ಕೂಡ ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ ಎಂದು ಈ ಹಿಂದೆ ರಾಜ್ ಕುಮಾರ್ ಶರ್ಮಾ ಹೇಳಿಕೆ ನೀಡಿದ್ದರು. ಆದರೆ ರಾಜ್ ಕುಮಾರ್ ಶರ್ಮಾ ಹೇಳಿಕೆಯನ್ನು ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಹೀಗೆ ರಾಜ್ ಕುಮಾರ್ ಶರ್ಮಾ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಭವಿಷ್ಯ ನುಡಿದ ಕೆಲವೇ ದಿನಗಳಲ್ಲಿ ಕೊಹ್ಲಿ ಬೆಂಗಳೂರು ತಂಡದ ನಾಯಕತ್ವಕ್ಕೆ ಈ ಬಾರಿಯ ಐಪಿಎಲ್ ಮುಗಿದ ನಂತರ ರಾಜಿನಾಮೆ ನೀಡುವುದಾಗಿ ಹೇಳಿಕೆಯನ್ನು ನೀಡಿದ್ದಾರೆ.