ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಕ್ಕಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಫೆಬ್ರವರಿ 24 ರಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಲಿರುವ ಜಮ್ಮು ಕಾಶ್ಮೀರ ವಿರುದ್ದದ ಪ್ರಶಸ್ತಿ ಸುತ್ತಿನ ಕಾದಾಟಕ್ಕೆ ಕರ್ನಾಟಕ ತಂಡವನ್ನು ಯುವ ಆಟಗಾರರ ದೇವದತ್ ಪಡಿಕ್ಕಲ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ತಂಡದಲ್ಲಿ ಅನುಭವಿ ಹಾಗೂ ಯುವ ಆಟಗಾರರು ಸ್ಥಾನ ಪಡೆದಿದ್ದಾರೆ.
ಲಕ್ನೋದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಅಮೋಘ ಪ್ರದರ್ಶನ ನೀಡಿ ಉತ್ತರಾಖಂಡ ತಂಡದ ವಿರುದ್ಧ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಫೈನಲ್ಗೆ ಪ್ರವೇಶಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಮೊದಲ ಇನಿಂಗ್ಸ್ನಲ್ಲಿ 736 ರನ್ ಸಿಡಿಸಿತು. ಮೊದಲ ಇನಿಂಗ್ಸ್ನಲ್ಲಿ ಉತ್ತರಾಖಂಡ 233 ರನ್ಗಳಿಸಲು ಅಷ್ಟೇ ಶಕ್ತವಾಯಿತು. ಎರಡನೇ ಇನಿಂಗ್ಸ್ನಲ್ಲಿ ಕರ್ನಾಟಕ 323 ರನ್ ಕಲೆ ಹಾಕಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಉತ್ತರಾಖಂಡ 6 ವಿಕೆಟ್ಗೆ 260 ರನ್ ಗಳಿಸಿದ್ದಾಗ ಡ್ರಾ ಎಂದು ಘೋಷಿಸಲಾಯಿತು. ಪರಿಣಾಮ ಕರ್ನಾಟಕ 11 ವರ್ಷದ ಬಳಿಕ ಟೂರ್ನಿಯ ಫೈನಲ್ಗೆ ಅರ್ಹತೆ ಪಡೆಯಿತು.

ಹುಬ್ಬಳ್ಳಿಯಲ್ಲಿ ನಡೆಯಲಿರುವ ರಣಜಿ ಟ್ರೋಫಿಯ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ದೇವದತ್ ಪಡಿಕ್ಕಲ್ ತಂಡವನ್ನು ಮುನ್ನಡೆಸಲಿದ್ದಾರೆ. ಇವರು ಉತ್ತರಾಖಂಡ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಹೀಗಾಗಿ ಇವರ ಮೇಲೆ ಇವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇವರೊಂದಿಗೆ ಮಯಾಂಕ್ ಅಗರ್ವಾಲ್ ಅವರು ಇನಿಂಗ್ಸ್ ಆರಂಭಿಸಲಿದ್ದಾರೆ.
ಕರ್ನಾಟಕ ತಂಡದಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ಅನುಭವಿ ಆಟಗಾರರು ಇದ್ದಾರೆ. ಭಾರತ ಟೆಸ್ಟ್ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಸಹ ತಂಡದ ಭಾಗವಾಗಿದ್ದಾರೆ. ಇವರು ಸೆಮಿಫೈನಲ್ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಭರವಸೆಯ ಮೂಡಿಸಿದ್ದರು. ಮಯಾಂಕ್ ಅಗರ್ವಾಲ್ ಹಾಗೂ ಕರುಣ್ ನಾಯರ್ ಅವರು ಸಹ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದು, ಈ ಆಟಗಾರರ ತಮ್ಮ ಅನುಭವದ ಲಾಭ ಪಡೆದು ತಂಡಕ್ಕೆ ನೆರವಾಗಬೇಕಿದೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಪ್ರಸಿದ್ಧ್ ಕೃಷ್ಣ ಸಹ ಎದುರಾಳಿಗಳನ್ನು ಕಾಡಬಲ್ಲರು. ಇವರು ತಮ್ಮ ಬಿಗುವಿನ ದಾಳಿಯ ನೆರವಿನಿಂದ ರನ್ಗಳಿಗೆ ಕಡಿವಾಣ ಹಾಕಿ ವಿಕೆಟ್ ಬೇಟೆ ನಡೆಸಬಲ್ಲರು.
ಹುಬ್ಬಳ್ಳಿಯ ರಾಜ್ನಗರ್ ಸ್ಟೇಡಿಯಂ ಪ್ರತಿಷ್ಠಿತ ರಣಜಿ ಟ್ರೋಫಿ ಪಂದ್ಯಕ್ಕಾಗಿ ಆತಿಥ್ಯ ನೀಡಲಿದೆ. ಈ ಪಂದ್ಯದಲ್ಲಿ ಕರ್ನಾಟಕ 9ನೇ ಬಾರಿ ಟ್ರೋಫಿ ಗೆಲ್ಲುವ ಕನಸು ಕಾಣುತ್ತಿದ್ದರೆ, ಜಮ್ಮು ಕಾಶ್ಮೀರ ಚೊಚ್ಚಲ ಬಾರಿಗೆ ಟ್ರೋಫಿ ಎತ್ತುವ ಕನಸು ಹೊಂದಿದ್ದಾರೆ.
ಕರ್ನಾಟಕ ತಂಡ: ದೇವದತ್ ಪಡಿಕ್ಕಲ್ (ನಾಯಕ), ಮಯಾಂಕ್ ಅಗರ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಕೆವಿ ಅನೀಶ್, ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ಕೃತಿಕ್ ಕೃಷ್ಣ, ವಿದ್ಯಾಧರ್ ಪಾಟೀಲ್, ವಿದ್ವತ್ ಕಾವೇರಪ್ಪ, ಪ್ರಸಿದ್ಧ್ ಕೃಷ್ಣ, ಮೊಹ್ಸಿನ್ ಖಾನ್, ಶಿಖರ್ ಶೆಟ್ಟಿ, ಕೆಎಲ್ ಶ್ರೀಜಿತ್, ವಿಜಯಕುಮಾರ್ ವೈಶಾಕ್.