
ಅಂಡರ್ 19 ವಿಶ್ವಕಪ್ ಗೆದ್ದ ಭಾರತ ತಂಡದ ನಾಯಕ ಯಶ್ ಧುಲ್ ತಮ್ಮ ಅದ್ಭುತ ಫಾರ್ಮ್ಅನ್ನು ರಣಜಿ ಟೂರ್ನಿಯಲ್ಲಿ ಮುಂದುವರಿಸಿದ್ದಾರೆ. ಆಡಿದ ಚೊಚ್ಚಲ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿಯೇ ಭರ್ಜರಿ ಶತಕ ಸಿಡಿಸಿ ದೇಶೀಯ ಕ್ರಿಕೆಟ್ಗೆ ಭರ್ಜರಿ ಪದಾರ್ಪಣೆ ಮಾಡಿದ್ದ ಯಶ್ ಧುಲ್ ಎರಡನೇ ಇನ್ನಿಂಗ್ಸ್ನಲ್ಲಿಯೂ ಶತಕ ಸಿಡಿಸಿ ಮತ್ತೊಮ್ಮೆ ಗಮನಸೆಳೆದಿದ್ದಾರೆ. ಈ ಮೂಲಕ ಚೊಚ್ಚಲ ಪಂದ್ಯದ ಎರಡು ಇನ್ನಿಂಗ್ಸ್ನಲ್ಲಿಯೂ ಶತಕ ಸಿಡಿಸಿದ ಅಪರೂಪದ ಸಾಧನೆ ಮಾಡಿದ್ದಾರೆ.
ಯಶ್ ಧುಲ್ ದೆಹಲಿ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದು ಈ ಸಾಧನೆ ಮಾಡಿದ್ದಾರೆ. ತಮಿಳುನಾಡಿ ವಿರುದ್ಧ ಗುವಾಹಟಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಯಶ್ ಧುಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ರಣಜಿ ಇತಿಹಾಸದಲ್ಲಿ ಚೊಚ್ಚಲ ಪಂದ್ಯದಲ್ಲಿ ಎರಡು ಇನ್ನಿಂಗ್ಸ್ನಲ್ಲಿಯೂ ಶತಕ ಸಿಡಿಸಿದ ಭಾರತ ಕೇವಲ ಮೂರನೇ ಆಟಗಾರ ಎನಿಸಿದ್ದಾರೆ ಯಶ್ ಧುಲ್. ಇದಕ್ಕೂ ಮುನ್ನ ಭಾರತ ಕಂಡ ಶ್ರೇಷ್ಠ ಆಟಗಾರ ನಾರಿ ಕಾಂಟ್ರಾಕ್ಟರ್(1952/53) ಮತ್ತು ವಿರಾಗ್ ಅರಾಟೆ(2012/13) ಈ ಸಾಧನೆ ಮಾಡಿದ್ದರು. ಇದಕ್ಕೂ ಮುನ್ನ ಪಂದ್ಯದ ಮೊದಲ ದಿನ ಮೊದಲ ಇನ್ನಿಂಗ್ಸ್ನಲ್ಲಿ ಯಶ್ 113 ರನ್ ಸಿಡಿಸಿದ್ದರು.
ಇನ್ನು ಮತ್ತೊಂದೆಡೆ ಭಾರತೀಯ ಕ್ರಿಕೆಟ್ ತಂಡದ ಅನುಭವಿ ಆಟಗಾರ ಚೇತೇಶ್ವರ್ ಪೂಜಾರ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಿರುವ ತಂಡದಿಮದ ಹೊರಬಿದ್ದ ಮರುದಿನ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸೌರಾಷ್ಟ್ರ ಪರ ಆಡುವ ಪೂಜಾರ ಮುಂಬೈ ವಿರುದ್ಧ ಎರಡನೇ ಇನ್ನಿಂಗ್ಸ್ನಲ್ಲಿ 83 ಎಸೆತ ಎದುರಿಸಿ 91 ರನ್ಗಳಿಸಿ ವಿಕೆಟ್ ಕಳೆದುಕೊಂಡರು. ಈ ಮೂಲಕ ಶತಕಗಳಿಸುವ ಅವಕಾಶದಿಂದ ವಂಚಿತರಾಗಿದ್ದಾರೆ.
ಚೇತೇಶ್ವರ್ ಪೂಜಾರ ಈ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದ್ದರು. ಈ ಇನ್ನಿಂಗ್ಸ್ನಲ್ಲಿ ಸೌರಾಷ್ಟ್ರ 220 ರನ್ಗಳಿಗೆ ಆಲೌಟ್ ಆಗಿತ್ತು. ಆದರೆ ಎರಡನೇ ಇನ್ನಿಂಗ್ಸ್ನಲ್ಲಿ ಫಾರ್ಮ್ ಕಂಡಿಕೊಳ್ಳುವಲ್ಲಿ ಪೂಜಾರ ಯಶ್ವಸ್ವಿಯಾಗಿದ್ದಾರೆ.
ಇನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಚೇತೇಶ್ವರ್ ಪೂಜಾರ ಮಾತ್ರವಲ್ಲದೆ ಮತ್ತೋರ್ವ ಅನುಭವಿ ಆಟಗಾರ ಅಜಿಂಕ್ಯಾ ರಹಾನೆ ಕೂಡ ತಂಡದಿಂದ ಹೊರಬಿದ್ದಿದ್ದಾರೆ. ರಹಾನೆ ಮೊದಲ ಇನ್ನಿಂಗ್ಸ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದರು.
ಲಂಕಾ ವಿರುದ್ಧದ ಆಡಲಿರುವ ಭಾರತದ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಭ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್ (ಫಿಟ್ನೆಸ್ ಆಧಾರದ ಮೇಲೆ), ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್