ಇತ್ತೀಚೆಗೆ ಭಾರತದಲ್ಲಿ ಕ್ರೀಡಾಪಟುಗಳು ರಾಜಕೀಯ ಕಡೆ ಮುಖ ಮಾಡುತ್ತಿದ್ದಾರೆ. ಹರಿಯಾಣ ವಿಧಾನಸಭೆ ಚುನಾವಣೆ ಬೆನ್ನಲ್ಲೇ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸ್ಟಾರ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಭೇಟಿ ಮಾಡಿ ಕುತೂಹಲ ಮೂಡಿಸಿದ್ದರು. ರಾಹುಲ್ ಗಾಂಧಿ ಅವರೊಂದಿಗೆ ಇದ್ದ ಕುಸ್ತಿಪಟುಗಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು.
ಇದೀಗ ಟೀಮ್ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಅವರು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಬಗ್ಗೆ ಅವರ ಪತ್ನಿ ರಿವಾಬಾ ಜಡೇಜಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದ್ದು, ಪೋಸ್ಟ್ನಲ್ಲಿ ತಮ್ಮ ಬಿಜೆಪಿ ಸದಸ್ಯತ್ವ ಕಾರ್ಡ್ಗಳನ್ನು ಹಂಚಿಕೊಂಡಿದ್ದಾರೆ.

ರಿವಾಬಾ ಜಡೇಜಾ ಅವರು ಕೂಡ ಗುಜರಾತಿನ ಜಾಮ್ನಗರ ಉತ್ತರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆ ವೇಳೆ ಕೂಡ ತಮ್ಮ ಪತ್ನಿಯೊಂದಿಗೆ ಪ್ರಚಾರದಲ್ಲಿ ಭಾಗವಹಿಸಿದ್ದರು. ಅಲ್ಲದೆ, ಹಲವು ಕಡೆಗಳಲ್ಲಿ ರೋಡ್ ಶೋ ನಲ್ಲಿಯೂ ಕಾಣಿಸಿಕೊಂಡಿದ್ದರು.
ಭಾರತ ತಂಡದ ಕೆಲವು ಆಟಗಾರರು ಕ್ರಿಕೆಟ್ಗೆ ವಿದಾಯ ಹೇಳಿದ ನಂತರ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಅವರಲ್ಲಿ ಕೆಲವರು ರಾಜಕೀಯದಲ್ಲೂ ಯಶಸ್ವಿಯಾಗಿದ್ದಾರೆ. ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ ಕ್ರಿಕೆಟ್ನಿಂದ ನಿವೃತ್ತಿಯಾದ ನಂತರ ಬಿಜೆಪಿ ಸೇರಿದ್ದರು. ನಂತರ 2019ರ ಲೋಕಸಭೆ ಚುನಾವಣೆಯಲ್ಲಿ ಅವರು ಪೂರ್ವ ದೆಹಲಿಯಿಂದ ಚುನಾವಣೆಗೆ ಸ್ಪರ್ಧಿಸಿ ಗೆದ್ದು ಸಂಸದರಾಗಿದ್ದರು.
ಟೀಮ್ ಇಂಡಿಯಾ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಕೂಡ ಕ್ರಿಕೆಟ್ಗೆ ವಿದಾಯ ಹೇಳಿದ ನಂತರ ರಾಜಕೀಯ ಜಗತ್ತಿನಲ್ಲಿ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಲು ನಿರ್ಧರಿಸಿದ್ದರು. ಈಗ ಅವರು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ. 2014ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊಹಮ್ಮದ್ ಕೈಫ್ ಫುಲ್ಪುರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ, ಸೋಲನ್ನು ಎದುರಿಸಬೇಕಾಯಿತು. ಟೀಮ್ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಸಹಾ ಉತ್ತರ ಪ್ರದೇಶದ ಮೊರಾದಾಬಾದ್ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ಸಂಸದರಾಗಿದ್ದರು.