14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಯಶಸ್ವಿಯಾಗಿ ನಡೆದಿದ್ದು ಕೆಲ ಆಟಗಾರರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮುಂದೂಡಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಉಳಿದ 31 ಪಂದ್ಯಗಳು ಇಂಗ್ಲೆಂಡ್ ಅಥವಾ ಯುಎಇಯಲ್ಲಿ ನಡೆಯಲಿವೆ ಎಂಬ ಸುದ್ದಿ ಹರಿದಾಡುತ್ತಿದೆ.
ಟೂರ್ನಿಯಲ್ಲಿ ಇಲ್ಲಿಯವರೆಗೂ ನಡೆದಿರುವ 29 ಪಂದ್ಯಗಳ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನದ ಕುರಿತು ಮಾತನಾಡಿದ್ದಾರೆ. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನದ ಕುರಿತು ಮಾತನಾಡುವಾಗ ವಾಷಿಂಗ್ಟನ್ ಸುಂದರ್ಗೆ ಟೂರ್ನಿಯಲ್ಲಿ ಸರಿಯಾದ ಅವಕಾಶಗಳು ಸಿಗಲಿಲ್ಲ ಎಂದು ಆಕಾಶ್ ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದರು.
' ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಾಷಿಂಗ್ಟನ್ ಸುಂದರ್ ಅವರನ್ನು ಓರ್ವ ಬೌಲರ್ ಆಗಿ ಸರಿಯಾದ ರೀತಿಯಲ್ಲಿ ಉಪಯೋಗಿಸಲಿಲ್ಲ. ಆತನಿಂದ ಹೆಚ್ಚು ಬೌಲಿಂಗ್ ಮಾಡಿಸಬಹುದು ಆದರೆ ನೀವು ಆತನಿಗೆ ಬೌಲಿಂಗ್ ನೀಡಲಿಲ್ಲ' ಎಂದು ಆಕಾಶ್ ಚೋಪ್ರಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಹೌದು ಟೂರ್ನಿಯ ಬಹುತೇಕ ಪಂದ್ಯಗಳಲ್ಲಿ ವಾಷಿಂಗ್ಟನ್ ಸುಂದರ್ ತನ್ನ ಭಾಗದ ಸಂಪೂರ್ಣ ಓವರ್ಗಳನ್ನು ಮಾಡಿಯೇ ಇಲ್ಲ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಸುಂದರ್ ಅವರನ್ನು ತಂಡದಿಂದ ಹೊರಗಿಡಲಾಗಿತ್ತು ಹೀಗಾಗಿ ಓರ್ವ ಬೌಲರ್ ಆಗಿ ವಾಷಿಂಗ್ಟನ್ ಸುಂದರ್ ಪ್ರಸ್ತುತ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದರು ಎಂದೇ ಹೇಳಬಹುದು.