19ನೇ ಆವೃತ್ತಿಯ ಐಪಿಎಲ್ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಚೆನ್ನೈ ತಂಡಗಳು ಕಾದಾಟ ನಡೆಸಲಿವೆ ಪ್ರಸಕ್ತ ಐಪಿಎಲ್ನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ), ಭಾನುವಾರ ಕಣಕ್ಕೆ ಇಳಿಯಲಿದ್ದು, ಹ್ಯಾಟ್ರಿಕ್ ಸೋಲಿನ ಭೀತಿ ಎದುರಿಸುತ್ತಿದೆ. ಆರ್ಸಿಬಿ ಈ ಪಂದ್ಯದಲ್ಲಿ ಗೆದ್ದು ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸು ಕಾಣುತ್ತಿದೆ. ದಕ್ಷಿಣ ಡರ್ಬಿಗಳ ಕಾದಾಟವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.
ಹಾಲಿ ಚಾಂಪಿಯನ್ ಆರ್ಸಿಬಿ ಉದ್ಘಾಟನಾ ಪಂದ್ಯದಲ್ಲಿ ಎಸ್ಆರ್ಎಚ್ ತಂಡವನ್ನು ಮಣಿಸಿ ಶುಭಾರಂಭ ಮಾಡಿದೆ. ಇನ್ನು ಎರಡನೇ ಪಂದ್ಯದಲ್ಲಿ ಜಯ ಸಾಧಿಸುವ ಇರಾದೆಯನ್ನು ಹೊಂದಿದೆ. ಚೆನ್ನೈ, ರಾಜಸ್ಥಾನ್ ಹಾಗೂ ಪಂಜಾಬ್ ತಂಡಗಳ ವಿರುದ್ಧ ಸೋಲು ಕಂಡಿದೆ. ಉಭಯ ತಂಡಗಳು ಈಗಾಗಲೇ ಐಪಿಎಲ್ನಲ್ಲಿ 35 ಬಾರಿ ಮುಖಾಮುಖಿಯಾಗಿದ್ದು, ಆರ್ಸಿಬಿ 13, ಸಿಎಸ್ಕೆ 21 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಆರ್ಸಿಬಿ ಸ್ಥಿರ ಪ್ರದರ್ಶನ ನೀಡುತ್ತಿದ್ದು ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ಆರ್ಸಿಬಿ ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ಅಬ್ಬರದ ಪ್ರದರ್ಶನ ನೀಡುವ ಯೋಜನೆ ಹಾಕಿಕೊಂಡಿದೆ. ಈ ವೇಳೆ ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ತಂಡಕ್ಕೆ ಉತ್ತಮ ಆರಂಭವನ್ನು ನೀಡುವ ಅನಿವಾರ್ಯತೆ ಇದೆ. ಉಭಯ ಆಟಗಾರರು ತಮ್ಮ ನೈಜ ಆಟವನ್ನು ಪ್ರದರ್ಶಿಸಿದಲ್ಲಿ ಮತ್ತೊಂದು ಗೆಲುವಿನ ಆಸೆ ಫಲಿಸುತ್ತದೆ. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ದೇವದತ್ ಪಡಿಕ್ಕಲ್ ಸನ್ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಬಾರಿಸಿ ಮಿಂಚಿದ್ದರು. ಹೀಗಾಗಿ ಇವರ ಮೇಲೆ ಭರವಸೆ ಹೆಚ್ಚಿದೆ.
ನಾಯಕ ರಜತ್ ಪಾಟಿದಾರ್ ಅವರು ರನ್ ವೇಗಕ್ಕೆ ಚುರುಕು ಮುಟ್ಟಿಸಬಲ್ಲ ಕ್ಷಮತೆಯನ್ನು ಹೊಂದಿರುವ ಆಟಗಾರ. ಇವರು ಸ್ಪಿನ್ ಬೌಲರ್ಗಳಿಗೆ ಉತ್ತಮವಾಗಿ ಆಡುವ ಕ್ಷಮತೆ ಹೊಂದಿದ್ದಾರೆ. ಫಿನಿಷರ್ ಪಾತ್ರದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಹಾಗೂ ಟೀಮ್ ಡೇವಿಡ್ ಕಾಣಿಸಿಕೊಳ್ಳಲಿದ್ದು, ತಮ್ಮ ಜವಾಬ್ದಾರಿಯನ್ನು ಅರಿತು ಆಡಬೇಕಿದೆ.

ಕಳೆದ ವರ್ಷದ ಐಪಿಎಲ್ನಲ್ಲಿ ರೊಮಾರಿಯೋ ಶೆಫರ್ಡ್ ಸಿಎಸ್ಕೆ ವಿರುದ್ಧ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದರು. ಇವರು ಇದೇ ಧಾಟಿಯಲ್ಲಿ ರನ್ ಕಲೆ ಹಾಕುವ ಅನಿವಾರ್ಯತೆ ಇದೆ. ಕೃನಾಲ್ ಪಾಂಡ್ಯ ಪರಿಸ್ಥಿತಿಗೆ ತಕ್ಕಂತೆ ಬ್ಯಾಟ್ ಮಾಡಬಲ್ಲರು.

ಜೇಕಬ್ ಡಫಿ ಹಾಗೂ ಭುವನೇಶ್ವರ್ ಕುಮಾರ್ ಬೆಂಗಳೂರು ತಂಡದ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿದ್ದಾರೆ. ಇವರು ಪವರ್ ಪ್ಲೇ ಹಾಗೂ ಡೆತ್ ಓವರ್ಗಳಲ್ಲಿ ಶಿಸ್ತು ಬದ್ಧ ದಾಳಿ ಸಂಘಟಿಸಬೇಕಿದೆ. ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ ಸರಿಯಾದ ಸ್ಥಳದಲ್ಲಿ ಬೌಲ್ ಮಾಡುವ ಅನಿವಾರ್ಯತೆ ಇದೆ. ಅಂದಾಗ ದೊಡ್ಡ ಮೊತ್ತ ಕನಸು ನನಸಾಗುತ್ತದೆ.

ಚೆನ್ನೈ ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ ಆಡಿದ ಎರಡೂ ಪಂದ್ಯಗಳಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದು, ಇವರ ಮೇಲೆ ಒತ್ತಡ ಹೆಚ್ಚಿದೆ. ನಾಯಕ ರುತುರಾಜ್ ಗಾಯಕ್ವಾಡ್ ಪರಿಸ್ಥಿತಿಗೆ ತಕ್ಕಂತೆ ಬ್ಯಾಟ್ ಮಾಡಬೇಕಿದೆ. ಇನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಆಯುಷ್ ಮಾತ್ರೆ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದು ಭರವಸೆ ಮೂಡಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಅನುಭವಿ ಆಟಗಾರರು ತಂಡದ ಗೆಲುವಿನಲ್ಲಿ ಮಿಂಚಬೇಕಿದೆ. ಸಿಎಸ್ಕೆ ತಂಡ ಡೆತ್ ಓವರ್ಗಳಲ್ಲಿ ರನ್ಗಳಿಗೆ ಕಡಿವಾಣ ಹಾಕಬೇಕಿದೆ. ಅಲ್ಲದೆ ಬೌಲರ್ಗಳು ಶಿಸ್ತು ಬದ್ಧ ದಾಳಿ ನಡೆಸಬೇಕಿದೆ.