
ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸುತ್ತಿವೆ.
ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳಲ್ಲಿ ಅತ್ಯದ್ಭುತ ಪ್ರದರ್ಶನವನ್ನು ನೀಡುವುದರ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ಲೇ ಆಫ್ ಸುತ್ತಿನ ತನ್ನ ಎರಡೂ ಪಂದ್ಯಗಳನ್ನು ಸೋತು ಫೈನಲ್ ಪಂದ್ಯಕ್ಕೆ ಪ್ರವೇಶಿಸುವಲ್ಲಿ ವಿಫಲತೆಯನ್ನು ಹೊಂದಿ ಟೂರ್ನಿಯಿಂದ ಹೊರಬಿದ್ದಿದೆ.
ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗುವ ಮುನ್ನ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಭಾಗವಹಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಫೀಲ್ಡಿಂಗ್ ಮಾಡುವ ವೇಳೆ ತೀವ್ರ ಗಾಯಕ್ಕೊಳಗಾಗಿ ಪಂದ್ಯದ ಮಧ್ಯದಲ್ಲಿಯೇ ಚಿಕಿತ್ಸೆಗೆ ತೆರಳಿದ್ದರು. ಹೀಗೆ ಆ ಪಂದ್ಯದ ಮಧ್ಯದಲ್ಲಿಯೇ ತೀವ್ರಗಾಯಕ್ಕೊಳಗಾದ ಶ್ರೇಯಸ್ ಅಯ್ಯರ್ ಚೇತರಿಸಿಕೊಳ್ಳಲು ತಿಂಗಳುಗಳೇ ಕಳೆದವು. ಆದರೆ ಇಂಗ್ಲೆಂಡ್ ವಿರುದ್ಧದ ಸರಣಿ ಮುಗಿದ ಕೆಲವೇ ದಿನಗಳಲ್ಲಿ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗುವುದರಲ್ಲಿತ್ತು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶ್ರೇಯಸ್ ಅಯ್ಯರ್ ಬದಲು ಪರ್ಯಾಯ ನಾಯಕನನ್ನು ನಿರ್ಮಿಸಲೇಬೇಕಾದ ಅಗತ್ಯತೆ ಇದ್ದ ಕಾರಣ ತಂಡದ ಯುವ ಆಟಗಾರನಾದ ರಿಷಭ್ ಪಂತ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನೂತನ ನಾಯಕನನ್ನಾಗಿ ಡೆಲ್ಲಿ ಫ್ರಾಂಚೈಸಿ ನೇಮಿಸಿತು.
ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನಾಯಕನಾಗಿ ಆಯ್ಕೆಯಾದಾಗ ಸಾಕಷ್ಟು ಟೀಕೆಗಳು ವ್ಯಕ್ತವಾದವು. ಈ ಯುವ ಆಟಗಾರನಿಗೆ ತಂಡದ ನಾಯಕತ್ವವನ್ನು ನೀಡಿದರೆ ಯಶಸ್ವಿಯಾಗಿ ನಿಭಾಯಿಸುವುದು ಕಷ್ಟ, ಅನನುಭವಿ ರಿಷಭ್ ಪಂತ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕಳಪೆ ಪ್ರದರ್ಶನ ನೀಡಲಿದೆ ಎಂಬ ಮಾತುಗಳು ಸಹ ಕೇಳಿ ಬಂದಿದ್ದವು. ಈ ಟೀಕೆಗಳಿಗೆಲ್ಲ ತನ್ನ ನಾಯಕತ್ವದ ಮೂಲಕ ಉತ್ತರ ನೀಡಿದ ರಿಷಭ್ ಪಂತ್ ನಾಯಕನಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸಾಲುಸಾಲು ಪಂದ್ಯಗಳಲ್ಲಿ ಗೆಲ್ಲಿಸಿದರು. ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ರಿಷಭ್ ಪಂತ್ ನಾಯಕತ್ವದಡಿಯಲ್ಲಿ 14 ಲೀಗ್ ಹಂತದ ಪಂದ್ಯಗಳನ್ನು ಆಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಪಂದ್ಯಗಳಲ್ಲಿ ಜಯ ಸಾಧಿಸಿ ಕೇವಲ 4 ಪಂದ್ಯಗಳಲ್ಲಿ ಸೋಲುವುದರ ಮೂಲಕ 20 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿತು. ಹೀಗೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡು ಪ್ಲೇ ಆಫ್ ಸುತ್ತಿಗೆ ಪ್ರವೇಶಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕ್ವಾಲಿಫೈಯರ್ 1 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲುಂಡಿತು ಮತ್ತು ಕ್ವಾಲಿಫೈಯರ್ 2 ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ವಿರುದ್ಧವೂ ಸೋಲುವುದರ ಮೂಲಕ ಟೂರ್ನಿಯಿಂದ ಹೊರಬಿದ್ದಿತು.
ಹೀಗೆ ಲೀಗ್ ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ಲೇ ಆಫ್ ಹಂತದ ಎರಡೂ ಪಂದ್ಯಗಳನ್ನು ಸೋಲುವ ಮೂಲಕ ಟೂರ್ನಿಯಿಂದ ಹೊರಬಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕುರಿತಾಗಿ ಮಾತನಾಡಿರುವ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಮುಂಬರಲಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನೂತನ ನಾಯಕನನ್ನು ಹೆಸರಿಸಿದ್ದಾರೆ. ಮುಂಬರಲಿರುವ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಬೌಲರ್ ರವಿಚಂದ್ರನ್ ಅಶ್ವಿನ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳಬೇಕು ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. ನಾನೇನಾದರೂ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಇದ್ದಿದ್ದರೆ ಖಂಡಿತವಾಗಿಯೂ ರವಿಚಂದ್ರನ್ ಅಶ್ವಿನ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನನ್ನಾಗಿ ನೇಮಕ ಮಾಡುತ್ತಿದ್ದೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.