2024ರ ಟಿ20 ವಿಶ್ವಕಪ್ ಪಂದ್ಯಾವಳಿಯು ಜೂನ್ 1ರಂದು ಆರಂಭವಾಗಲಿದ್ದು, ವೆಸ್ಟ್ ಇಂಡೀಸ್ ಮತ್ತು ಯುಎಸ್ ಸಹ-ಆತಿಥ್ಯ ವಹಿಸಲಿವೆ. 2007ರ ಚೊಚ್ಚಲ ಆವೃತ್ತಿಯ ಚಾಂಪಿಯನ್ ಭಾರತ ತಂಡವು ಐರ್ಲೆಂಡ್, ಪಾಕಿಸ್ತಾನ, ಕೆನಡಾ ಮತ್ತು ಯುಎಸ್ಎ ಜೊತೆಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ.
ಇನ್ನು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ ಭಾರತ ತಂಡದ ಹೈ-ವೋಲ್ಟೇಜ್ ಪಂದ್ಯವು ಜೂನ್ 9ರಂದು ನ್ಯೂಯಾರ್ಕ್ನಲ್ಲಿ ನಡೆಯಲಿದೆ.
ಇದೇ ವೇಳೆ ಭಾರತದ ಮಾಜಿ ಕ್ರಿಕೆಟಿಗ ಮತ್ತು ಕಾಮೆಂಟೇಟರ್ ಆಕಾಶ್ ಚೋಪ್ರಾ ಅವರು ಜೂನ್ನಲ್ಲಿ ಆರಂಭವಾಗಲಿರುವ ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾವು 2022ರ ಆವೃತ್ತಿ ರೀತಿಯ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರವಷ್ಟೇ ಐಸಿಸಿ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟಣೆಯ ನಂತರ, ಹಾಲಿ ನಾಯಕ ರೋಹಿತ್ ಶರ್ಮಾ ಅವರೇ ಭಾರತ ತಂಡವನ್ನು ಮುನ್ನಡೆಸುತ್ತಾರೆ ಎಂದು ಆಕಾಶ್ ಚೋಪ್ರಾ ನಿರೀಕ್ಷೆ ಹೊರಹಾಕಿದರು.
ಭಾರತವು ಜೂನ್ 9ರಂದು ನ್ಯೂಯಾರ್ಕ್ನಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲು ಸಜ್ಜಾಗುತ್ತಿದ್ದಂತೆ ಕ್ರಿಕೆಟ್ನ ದೀರ್ಘಕಾಲದ ಕಾಳಗ ಮುಂದುವರೆಯಲಿದೆ.
ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡಿದ ಆಕಾಶ್ ಚೋಪ್ರಾ, ಪ್ರಸ್ತುತ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಫಿಟ್ನೆಸ್ ಅವರಿಗೆ ಆಡಲು ಕಷ್ಟವಾಗುತ್ತಿರುವ ಕಾರಣ, ರೋಹಿತ್ ಶರ್ಮಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಮ್ ಇಂಡಿಯಾ ನಾಯಕತ್ವವನ್ನು ನಿರ್ವಹಿಸುತ್ತಾರೆ ಎಂದು ಭಾವಿಸುತ್ತೇನೆ ಎಂದರು.
"ಫಿಟ್ನೆಸ್ಗೆ ಸಂಬಂಧಿಸಿದಂತೆ ಸಮಸ್ಯೆ ಹೊಂದಿರುವ ಕಾರಣ ಹಾರ್ದಿಕ್ ಪಾಂಡ್ಯ ಬಹುಶಃ ನಾಯಕನಾಗುವುದಿಲ್ಲ. ಆತ ಪ್ರಸ್ತುತ ಆಡುತ್ತಿಲ್ಲ. ವಿಶ್ವಕಪ್ನಲ್ಲಿ ಆತ ಪಾದದ ಗಾಯಕ್ಕೆ ಒಳಗಾಗಿದ್ದಾನೆ. ಅಲ್ಲದೆ, ಅಫ್ಘಾನಿಸ್ತಾನ ವಿರುದ್ಧದ ಸರಣಿಯನ್ನು ಆಡುತ್ತಿಲ್ಲ ಮತ್ತು ಯಾವುದೇ ಸಂದರ್ಭದಲ್ಲಿ ಟೆಸ್ಟ್ ಪಂದ್ಯ ಕೂಡ ಆಡುವುದಿಲ್ಲ," ಎಂದು ಆಕಾಶ್ ಚೋಪ್ರಾ ಹೇಳಿದರು.

"ರೋಹಿತ್ ಶರ್ಮಾ ಅವರು ಭಾರತ ತಂಡದ ಟಿ20 ನಾಯಕತ್ವವನ್ನು ವಹಿಸುತ್ತಾರೆ ಮತ್ತು 2024ರ ಟಿ20 ವಿಶ್ವಕಪ್ಗೆ ನಾಯಕರಾಗುತ್ತಾರೆ ಎಂದು ನಾನು ಭಾವಿಸುತ್ತೇನೆ," ಎಂದು ತಿಳಿಸಿದರು.
ಅಕ್ಟೋಬರ್ 19ರಂದು ಬಾಂಗ್ಲಾದೇಶ ವಿರುದ್ಧದ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದ ವೇಳೆ ಬೌಲಿಂಗ್ ಮಾಡುವಾಗ ಪಾದದ ಗಾಯದ ನಂತರ, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿ, ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಮೂರು ಪಂದ್ಯಗಳ ಟಿ20 ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯನ್ನು ತಪ್ಪಿಸಿಕೊಂಡಿದ್ದಾರೆ.
ಸೂರ್ಯಕುಮಾರ್ ಯಾದವ್ ಎಲ್ಲಾ ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದರೆ, ಕೆಎಲ್ ರಾಹುಲ್ ಅವರು ಹಾರ್ದಿಕ್ ಪಾಂಡ್ಯ ಮತ್ತು ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಮುನ್ನಡೆಸಿದರು.
ಆಸ್ಟ್ರೇಲಿಯಾದಲ್ಲಿ ನಡೆದ 2022ರ ಟಿ20 ವಿಶ್ವಕಪ್ ಆವೃತ್ತಿಯ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತ ನಂತರ, ಟಿ20 ಪಂದ್ಯವನ್ನು ಆಡದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್, ಕಳೆದ ವರ್ಷ ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಆಕಾಶ್ ಚೋಪ್ರಾ ಗಮನ ಸೆಳೆದರು. ಅವರ ಇತ್ತೀಚಿನ ಫಾರ್ಮ್ನ ಆಧಾರದ ಮೇಲೆ ಈ ಮೂವರು ಆಡುತ್ತಾರೆ ಎಂಬ ಸುಳಿವು ನೀಡಿದರು.