ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕಳಪೆ ಫಾರ್ಮ್ ಎದುರಿಸುತ್ತಿದ್ದಾರೆ. ಇದೀಗ, ಅವರು ರನ್ ಗಳಿಸುವ ಹಂಬಲದಲ್ಲಿದ್ದಾರೆ. ಬಾಂಗ್ಲಾದೇಶ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗಳಲ್ಲಿ ಅವರು ರನ್ ಗಳಿಸುವುದರಲ್ಲಿ ಹಿಂದೆ ಉಳಿದಿದ್ದರು. ಅವರು ಆಡಿದ 8 ಟೆಸ್ಟ್ ಪಂದ್ಯಗಳ 15 ಇನ್ನಿಂಗ್ಸ್ಗಳಲ್ಲಿ ಕೇವಲ ಒಂದು ಅರ್ಧಶತಕವನ್ನು ಗಳಿಸಲು ಸಾಧ್ಯವಾಗಿದೆ. ಅವರ ಕಳಪೆ ಫಾರ್ಮ್ನಿಂದ ಬಳಲುತ್ತಿರುವ ಹಿಟ್ಮ್ಯಾನ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಅವರ ನಿರ್ಧಾರ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ವರದಿಗಳ ಪ್ರಕಾರ, ರೋಹಿತ್ ಶರ್ಮಾ ಮುಂಬೈ ರಣಜಿ ಟ್ರೋಫಿ ತಂಡದೊಂದಿಗೆ ಅಭ್ಯಾಸ ನಡೆಸಲಿದ್ದಾರೆ. ಸತತ ಬ್ಯಾಟಿಂಗ್ ವೈಫಲ್ಯದ ನಂತರ ರೋಹಿತ್ ಶರ್ಮಾ ಟೀಕೆಗೊಳಗಾಗಿದ್ದು, ಇದೀಗ ಕಠಿಣ ಅಭ್ಯಾಸ ಪ್ರಾರಂಭಿಸಿದ್ದಾರೆ.

ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ರಣಜಿ ಟ್ರೋಫಿ ಅಭ್ಯಾಸ ಸೆಷನ್ಗೆ ಸೇರಿಕೊಳ್ಳುವುದಾಗಿ ರೋಹಿತ್ ಮುಂಬೈ ತಂಡದ ಮ್ಯಾನೇಜ್ಮೆಂಟ್ಗೆ ಮಾಹಿತಿ ನೀಡಿದ್ದಾರೆ. ರೋಹಿತ್ ಬಹಳ ದಿನಗಳಿಂದ ರಣಜಿ ಟ್ರೋಫಿಯಲ್ಲಿ ಆಡಿರಲಿಲ್ಲ. ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಮುಂಬೈನ ಮುಂದಿನ ರಣಜಿ ಪಂದ್ಯದಲ್ಲಿ ಅವರು ಆಡುತ್ತಾರೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಈಗ ಯಾವುದೇ ಮಾಹಿತಿ ಇಲ್ಲ. ಆದರೆ, ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ತಯಾರಿಗಾಗಿ ರೋಹಿತ್ ಶರ್ಮಾ ತಮ್ಮ ಅಭ್ಯಾಸವನ್ನು ಪುನರಾರಂಭಿಸಿದ್ದಾರೆ ಎಂದು ವರದಿ ಹೇಳಿದೆ.
ರೋಹಿತ್ ಶರ್ಮಾ ಕೊನೆಯ ಬಾರಿಗೆ ಮುಂಬೈ ತಂಡದ ಪರ 2015 ರಲ್ಲಿ ಉತ್ತರ ಪ್ರದೇಶ ವಿರುದ್ಧ ಆಡಿದ್ದರು. ಭಾರತ ತಂಡದ ಆಸ್ಟ್ರೇಲಿಯಾ ಪ್ರವಾಸದ ವೇಳೆ ಅವರು ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ 3,9, 10, 3, 6 ರನ್ ಗಳಿಸಿದ್ದರು. ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದರು. ಅವರ ಬದಲಿಗೆ ಜಸ್ಪ್ರೀತ್ ಬುಮ್ರಾ ನಾಯಕತ್ವ ವಹಿಸಿಕೊಂಡಿದ್ದರು. ಆದರೆ, ಟೀಮ್ ಇಂಡಿಯಾಗೆ ಸರಣಿ ಗೆಲ್ಲಲು ಸಾಧ್ಯವಾಗಲಿಲ್ಲ.
ಟೀಮ್ ಇಂಡಿಯಾ ಹೆಡ್ಕೋಚ್ ಗೌತಮ್ ಗಂಭೀರ್ ಸಿಡ್ನಿ ಟೆಸ್ಟ್ ನಂತರ ಎಲ್ಲಾ ಆಟಗಾರರಿಗೆ ದೇಶೀಯ ಕ್ರಿಕೆಟ್ ಆಡಲು ಒತ್ತಾಯಿಸಿದ್ದರು. ಪ್ರತಿಯೊಬ್ಬರೂ ದೇಶೀಯ ಕ್ರಿಕೆಟ್ನಲ್ಲಿ ಆಡಬೇಕೆಂದು ನಾನು ಯಾವಾಗಲೂ ಬಯಸುತ್ತೇನೆ. ದೇಶಿಯ ಕ್ರಿಕೆಟ್ಗೂ ಅಷ್ಟೇ ಮಹತ್ವ ನೀಡಬೇಕು. ನೀವು ದೇಶೀಯ ಕ್ರಿಕೆಟ್ಗೆ ಪ್ರಾಮುಖ್ಯತೆ ನೀಡದಿದ್ದರೆ, ಟೆಸ್ಟ್ ಕ್ರಿಕೆಟ್ನಲ್ಲಿ ನಿಮಗೆ ಬೇಕಾದ ಆಟಗಾರರು ಎಂದಿಗೂ ಸಿಗುವುದಿಲ್ಲ ಎಂದು ಹೇಳಿದ್ದರು.