ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಚೆನ್ನೈನಲ್ಲಿ ಆರಂಭವಾಗಿರುವ ಅಭ್ಯಾಸ ಶಿಬಿರವನ್ನು ಸೇರಿಕೊಂಡಿದ್ದಾರೆ.
ಇಂದು (ಶುಕ್ರವಾರ) ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಚೆನ್ನೈಗೆ ತಲುಪಿದ್ದಾರೆ. ವಿರಾಟ್ ಕೊಹ್ಲಿ ಲಂಡನ್ನಿಂದ ಬೆಳಿಗ್ಗೆಯೇ ನೇರವಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಗಿಂತ ಮೊದಲು ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ರಿಷಬ್ ಪಂತ್ ಗುರುವಾರವೇ ಶಿಬಿರಕ್ಕೆ ಹೋಗಿದ್ದಾರೆ.

ಒಂದು ತಿಂಗಳ ವಿರಾಮದ ನಂತರ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಟೀಮ್ ಇಂಡಿಯಾದ ಉಳಿದ ಆಟಗಾರರು ಮೈದಾನಕ್ಕೆ ಮರಳಲಿದ್ದಾರೆ. ಆಗಸ್ಟ್ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಸೋತಿತ್ತು.
ಟೀಮ್ ಇಂಡಿಯಾದ ಮುಖ್ಯ ಕೋಚ್ ಆದ ನಂತರ ಗೌತಮ್ ಗಂಭೀರ್ ಅವರ ಮೊದಲ ಟೆಸ್ಟ್ ಸರಣಿ ಇದಾಗಿದೆ. ಇತ್ತೀಚೆಗೆ ಪಾಕಿಸ್ತಾನವನ್ನು 2-0 ಅಂತರದಿಂದ ಬಾಂಗ್ಲಾದೇಶ ಸೋಲಿಸಿತ್ತು. ಈಗ ಟೀಮ್ ಇಂಡಿಯಾಗೆ ತವರಿನಲ್ಲಿ ಟಕ್ಕರ್ ಕೊಡಲು ಬಾಂಗ್ಲಾದೇಶ ರೆಡಿಯಾಗಿದೆ. ಇದಕ್ಕೆ ಪ್ರತಿಯಾಗಿ ಟೀಮ್ ಇಂಡಿಯಾ ಕೂಡ ರಣತಂತ್ರ ರೂಪಿಸಿದೆ.
ಉಭಯ ತಂಡಗಳ ಸರಣಿಯೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-25 ಋತುವಿನ ಭಾಗವಾಗಿದೆ. ಇದಾದ ಬಳಿಕ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡವು ಮೂರು ಪಂದ್ಯಗಳ ಟೆಸ್ಟ್ ಸರಣಿ ಮತ್ತು ಆಸ್ಟ್ರೇಲಿಯಾದಲ್ಲಿ ಐದು ಪಂದ್ಯಗಳ ಬಾರ್ಡರ್- ಗವಾಸ್ಕರ್ ಸರಣಿಯನ್ನು ಆಡಲಿದೆ. ಇನ್ನು ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಪಾಕಿಸ್ತಾನ ಎದುರು ಟೆಸ್ಟ್ ಸರಣಿ ಗೆಲುವಿನ ಬಳಿಕ ಬಾಂಗ್ಲಾದೇಶ ನಾಲ್ಕನೇ ಸ್ಥಾನದಲ್ಲಿದೆ.
ಮೊದಲ ಟೆಸ್ಟ್ಗೆ ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.