ಭುವನೇಶ್ವರ್ ಕುಮಾರ್ ಬದಲು ಮೊಹಮ್ಮದ್ ಸಿರಾಜ್
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗಾಯದ ಸಮಸ್ಯೆಗೆ ಒಳಗಾಗಿದ್ದ ಮೊಹಮ್ಮದ್ ಸಿರಾಜ್ ಅಂತಿಮ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದರು. ಹೀಗೆ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಮೊಹಮ್ಮದ್ ಸಿರಾಜ್ ಇದೀಗ ಕಣಕ್ಕಿಳಿಯಲು ಫಿಟ್ ಆಗಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ತೃತೀಯ ಏಕದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಉತ್ತಮ ಬೌಲಿಂಗ್ ಪ್ರದರ್ಶನ ನೀಡುವಲ್ಲಿ ಎಡವಿದ ಭುವನೇಶ್ವರ್ ಕುಮಾರ್ ಮೊಹಮ್ಮದ್ ಸಿರಾಜ್ ಅವರಿಗೆ ಸ್ಥಾನ ಬಿಟ್ಟುಕೊಡುವ ಸಾಧ್ಯತೆಗಳು ಹೆಚ್ಚಿವೆ.
ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್ ಹೊರಕ್ಕೆ
ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಲ್ಲಿ ಯುವ ಆಟಗಾರರಾದ ಶ್ರೇಯಸ್ ಅಯ್ಯರ್ ಮತ್ತು ವೆಂಕಟೇಶ್ ಅಯ್ಯರ್ ನೀರಸ ಪ್ರದರ್ಶನವನ್ನು ನೀಡಿದ್ದರು. ಹೀಗಾಗಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ತೃತೀಯ ಏಕದಿನ ಪಂದ್ಯದಲ್ಲಿ ಈ ಇಬ್ಬರ ಬದಲು ಸೂರ್ಯಕುಮಾರ್ ಯಾದವ್ ಮತ್ತು ರುತುರಾಜ್ ಗಾಯಕವಾಡ್ ಅವರಿಗೆ ಸ್ಥಾನ ನೀಡುವ ಸಾಧ್ಯತೆಗಳು ಹೆಚ್ಚಿವೆ. ಈ ಮೂಲಕ ಸೂರ್ಯಕುಮಾರ್ ಯಾದವ್ ಮತ್ತೆ ತಂಡಕ್ಕೆ ಮರಳಲಿದ್ದು ಮಧ್ಯಮ ಕ್ರಮಾಂಕದ ಬಲ ಹೆಚ್ಚಲಿದ್ದರೆ, ರುತುರಾಜ್ ಗಾಯಕ್ವಾಡ್ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಲಿದ್ದಾರೆ.
ಸಂಭಾವ್ಯ ಆಡುವ ಬಳಗಗಳು
ಭಾರತ ಸಂಭಾವ್ಯ ಆಡುವ ಬಳಗ: ಶಿಖರ್ ಧವನ್, ರುತುರಾಜ್ ಗಾಯಕವಾಡ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ ( ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್/ ಜಯಂತ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್/ ದೀಪಕ್ ಚಹಾರ್, ಯುಜುವೇಂದ್ರ ಚಾಹಲ್