ನವದೆಹಲಿ: ಟಿ20 ವಿಶ್ವಕಪ್ ಆರಂಭಕ್ಕೆ ಮುಂಚಿತವಾಗಿ ಪಾಕಿಸ್ತಾನ ಹೊಸ ನಾಟಕ ಆರಂಭಿಸಿದೆ. ಪಾಕಿಸ್ತಾನ ಈ ಬಾರಿಯ ವಿಶ್ವಕಪ್ನಲ್ಲಿ ಭಾಗವಹಿಸುವುದಾಗಿ ಸ್ಪಷ್ಟಪಡಿಸಿದೆ. ಆದರೆ ಫೆಬ್ರವರಿ 15 ರಂದು ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ತಿಳಿಸಿದೆ. ಈ ಹಿನ್ನೆಲೆ ಚರ್ಚೆಗಳು ಜೋರಾಗಿವೆ. ಇದೇ ಮೊದಲ ಬಾರಿಗೆ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಆಘಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯನ್ನು 3-0 ಅಂತರದಿಂದ ಗೆದ್ದ ಪಾಕಿಸ್ತಾನ, ಟಿ20 ವಿಶ್ವಕಪ್ಗೆ ಭರ್ಜರಿ ತಯಾರಾಗಿದೆ ಎಂದು ಆಟದ ಮೂಲಕ ತಿಳಿಸಿದೆ. ಈ ಪಂದ್ಯದ ಬಳಿಕ ಸಲ್ಮಾನ್ ಅಲಿ ಆಘಾ ದೊಡ್ಡ ಹೇಳಿಕೆ ನೀಡಿದ್ದಾರೆ. ಭಾರತದ ವಿರುದ್ಧ ಆಡದಿರುವ ನಿರ್ಧಾರವು ತಂಡದದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ನಮ್ಮ ತಂಡ ವಿಶ್ವಕಪ್ನಲ್ಲಿ ಭಾಗವಹಿಸಲಿದೆ. ಆದರೆ ಭಾರತದ ವಿರುದ್ಧ ಆಡದಿರುವ ನಿರ್ಧಾರ ನಮ್ಮದಲ್ಲ. ಈ ವಿಷಯದ ಬಗ್ಗೆ ಸರ್ಕಾರ ಮತ್ತು ಪಿಸಿಬಿ ಏನು ಹೇಳಿದರೂ ನಾವು ಒಪ್ಪಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಪಾಕಿಸ್ತಾನದ ಸರ್ಕಾರ ಈ ಬಗ್ಗೆ ಈಗಾಗಲೇ ಸಾಮಾಜಿಕ ತಾಣದಲ್ಲಿ ಬಹಿರಂಗ ಪಡಿಸಿದೆ. ಟಿ20 ವಿಶ್ವಕಪ್ನಲ್ಲಿ ಆಡಲು ತಂಡಕ್ಕೆ ಅನುಮತಿ ನೀಡಲಾಗಿದೆ. ಆದರೆ ಫೆಬ್ರವರಿ 15 ರಂದು ಕೊಲಂಬೊದಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಆಡುವುದಿಲ್ಲ ಎಂದು ತಿಳಿಸಿದೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಹೈ ವೋಲ್ಟೇಜ್ ಫೈಟ್ ಶ್ರೀಲಂಕಾದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಫೆಬ್ರವರಿ 15 ರಂದು ನಡೆಯಲಿದೆ.
ಈ ಮೊದಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ಟಿ20 ವಿಶ್ವಕಪ್ನಲ್ಲಿ ಭಾಗವಹಿಸುವ ಬಗ್ಗೆ ಸೋಮವಾರದ ಒಳಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು. ಈ ಬಗ್ಗೆ ಮಹತ್ವದ ನಿರ್ಧಾರ ಫೆಬ್ರವರಿ 2 ರಂದು ಬರುವ ಸಾಧ್ಯತೆ ಇದೆ.
ನಖ್ವಿ ಅವರು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಭಾನುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಭೆ ರಾತ್ರಿಯ ವರೆಗೂ ನಡೆದಿದೆ. ಆಸ್ಟ್ರೇಲಿಯಾ ವಿರುದ್ದದ ಮೂರನೇ ಟಿ20 ಪಂದ್ಯದಂದು ಪಾಕ್ ತನ್ನ ನಿರ್ಧಾರವನ್ನು ತೆಗೆದುಕೊಂಡಿದೆ. ಸಭೆಯ ಬಳಿಕ ಪಾಕ್ ಟಿ20 ವಿಶ್ವಕಪ್ನಲ್ಲಿ ಆಡಲಿದೆ, ಆದರೆ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲಿದೆ ಎಂದು ತಿಳಿದು ಬಂದಿದೆ. ಹೀಗಾಗಿಯೇ ಪಾಕ್ ಜೆರ್ಸಿ ಅನಾವರಣ ಕಾರ್ಯಕ್ರಮಕ್ಕೂ ಭಾಗವಹಿಸಲಿಲ್ಲ.
ಈ ಮೆಗಾ ಟೂರ್ನಿಗೆ ಪಾಕಿಸ್ತಾನ ಈಗಾಗಲೇ ತನ್ನ ತಂಡವನ್ನು ಪ್ರಕಟಿಸಿದೆ. ಪಾಕಿಸ್ತಾನ ವಿಶ್ವಕಪ್ನಲ್ಲಿ ತನ್ನ ಅಭಿಯಾನವನ್ನು ಫೆಬ್ರವರಿ 7 ರಂದು ನೆದರ್ಲೆಂಡ್ಸ್ ವಿರುದ್ಧ ಆರಂಭಿಸಲಿದೆ. ಪಾಕ್ ತಂಡ ತನ್ನ ಎಲ್ಲ ಪಂದ್ಯಗಳನ್ನು ಸಹ ಶ್ರೀಲಂಕಾದಲ್ಲಿಯೇ ಆಡಲಿದೆ. ಅಲ್ಲದೆ ಪಾಕ್ ಎರಡನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಕಸನು ಕಾಣುತ್ತಿದೆ. 2024ರಲ್ಲಿ ನಡೆದಿದ್ದ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿತ್ತು.