
ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಮಂಗಳವಾರದಿಂದ ವೈಟ್ಬಾಲ್ ಸರಣಿಯಲ್ಲಿ ಭಾಗಿಯಾಗಲಿದೆ. ಮೊದಲಿಗೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಎರಡು ತಂಡಗಳು ಭಾಗವಹಿಸಿದ ಬಳಿಕ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಟಿ20 ಸರಣಿಯಲ್ಲಿ ಅನುಭವಿಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ಗೆ ವಿಶ್ರಾಂತಿ ನಿಡಲಾಗಿದ್ದರೆ ಏಕದಿನ ಸರಣಿಗೆ ಈ ಆಟಗಾರರು ತಂಡಕ್ಕೆ ವಾಪಾಸಾಗಲಿದ್ದಾರೆ.
ಇನ್ನು ಕುತೂಹಲಕಾರಿ ಸಂಗತಿಯೆಂದರೆ ಏಕದಿನ ಮಾದರಿಯಲ್ಲಿ ಕೆಎಲ್ ರಾಹುಲ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದರು ಕೂಡ ಉಪನಾಯಕನ ಸ್ಥಾನವನ್ನು ರಾಹುಲ್ ಕಳೆದುಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯಗೆ ಈ ಜವಾಬ್ಧಾರಿ ನೀಡುವ ಮೂಲಕ ಬಿಸಿಸಿಐ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇನ್ನು ಈ ಸಂದರ್ಭದಲ್ಲಿ ಭಾರತದ ಮಾಜಿ ಕೋಚ್ ಕೂಡ ಆಗಿರುವ ಸಂಜಯ್ ಬಂಗಾರ್ ಪ್ರತಿಕ್ರಿಯೆ ನೀಡಿದ್ದು ಕೆಎಲ್ ರಾಹುಲ್ ಏಕದಿನ ಮಾದರಿ ಆಡುವ ಬಳಗದಲ್ಲಿಯೂ ಸ್ಥಾನವನ್ನು ಉಳಿಸಿಕೊಳ್ಳುವುದು ಕಷ್ಟ ಎಂದಿದ್ದಾರೆ.
ಕೆಎಲ್ ರಾಹುಲ್ ಇತ್ತೀಚೆಗೆ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದಾರೆ. ಏಷ್ಯಾ ಕಪ್, ಟಿ20 ವಿಶ್ವಕಪ್ನಂತಾ ಮಹತ್ವದ ಟೂರ್ನಿಯಲ್ಲಿಯೂ ರಾಹುಲ್ ಪರಿಣಾಮಕಾರಿ ಇನ್ನಿಂಗ್ಸ್ ನೀಡಲು ವಿಫಲವಾದರು. ನಿಧಾನಗತಿಯ ಆಟದಿಂದಾಗಿ ಸಾಕಷ್ಟು ಟೀಕೆಗಳು ವ್ಯಕ್ತವಾದವು. ಮತ್ತೊಂದೆಡೆ ಇಶಾನ್ ಕಿಶನ್, ಶುಬ್ಮನ್ ಗಿಲ್ ಅವರಂತಾ ಆಟಗಾರರು ಸಿಕ್ಕ ಅವಕಾಶವನ್ನು ಅದ್ಭುತವಾಗಿ ಬಳಸಿಕೊಳ್ಳುವ ಮೂಲಕ ತಂಡದಲ್ಲಿ ಖಾಯಂ ಸ್ಥಾನ ಪಡೆಯಲು ಹವಣಿಸುತ್ತಿದ್ದಾರೆ. ಹೀಗಾಗಿ ರಾಹುಲ್ಗೆ ಮುಂದಿನ ದಿನಗಳು ಸವಾಲಿನಿಂದ ಕೂಡಿರಲಿದೆ ಎಂಬ ಅಭಿಪ್ರಾಯವನ್ನು ಸಂಜಯ್ ಬಂಗಾರ್ ವ್ಯಕ್ತಪಡಿಸಿದ್ದಾರೆ.
ಕ್ರಿಕ್ ಇನ್ಫೋಗೆ ನೀಡಿರುವ ಸಂದರ್ಶನದಲ್ಲಿ ಸಂಜಯ್ ಬಂಗಾರ್ ಸದ್ಯದ ಮಟ್ಟಿಗೆ ಭಾರತದ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯತಬೇಕಾದರೆ ಕೆಎಲ್ ರಾಹುಲ್ ಸಾಕಷ್ಟು ಪೈಪೋಟಿ ಎದುರಿಸಬೇಕಿದೆ ಎಂದಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಬಂಗಾರ್ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಂದ ನಾಯಕತ್ವದ ಜವಾಬ್ಧಾರಿ ವಹಿಸಿಕೊಳ್ಳಲು ಅತ್ಯಂತ ಸೂಕ್ತ ವ್ಯಕ್ತಿ ಎಂದಿದ್ದಾರೆ.
ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್ , ಶಿವಂ ಮಾವಿ, ಮುಖೇಶ್ ಕುಮಾರ್.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.