ಟೀಮ್ ಇಂಡಿಯಾದ ಪರ ಈಗಾಗಲೇ ಟಿ20 ಕ್ರಿಕೆಟ್ನಲ್ಲಿ ಅಮೋಘ ಪ್ರದರ್ಶನ ನೀಡಿ ತನ್ನ ಸ್ಥಾನವನ್ನು ಭದ್ರ ಪಡಿಸಿಕೊಂಡಿರುವ ಸಂಜು ಸ್ಯಾಮ್ಸನ್, ಏಕದಿನ ಕ್ರಿಕೆಟ್ನಲ್ಲಿ ತಮ್ಮ ಸ್ಥಾನದ ಹುಡುಕಾಟ ನಡೆಸಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿಗೆ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಎರಡನೇ ವಿಕೆಟ್ ಕೀಪರ್ ಆಗಿ ಯಾರಿಗೆ ಸ್ಥಾನ ಲಭಿಸುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಒಂದು ವರದಿಯ ಪ್ರಕಾರ ಸಂಜು ಸ್ಯಾಮ್ಸನ್ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಹಿಂದೆ ಬಿದ್ದಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಇನ್ನೇನು ಕೆಲವೇ ದಿನಗಳಲ್ಲಿ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಈ ವೇಳೆ ಎಷ್ಟು ಜನ ವಿಕೆಟ್ ಕೀಪರ್ಗೆ ಸ್ಥಾನ ನೀಡಲಾಗುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್ ಬಿಸಿಸಿಐ ಆಯ್ಕೆ ಸಮಿತಿಯ ನೆಚ್ಚಿನ ವಿಕೆಟ್ ಕೀಪರ್ಗಳು ಎಂದು ಹೇಳಲಾಗುತ್ತಿದೆ. ಅಂದರೆ ಕೆಎಲ್ ರಾಹುಲ್ಗೆ ತಂಡದಲ್ಲಿ ಸ್ಥಾನ ಇಲ್ಲವಾ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು.

ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆಯುವುದು ಪಕ್ಕಾ. ಆದರೆ ವಿಕೆಟ್ ಕೀಪರ್ ಆಗಿ ಅಲ್ಲ ಒಬ್ಬ ನುರಿತ ಬ್ಯಾಟರ್ ಆಗಿ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಹೀಗಾಗಿ ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್ ದುಬೈ ಫ್ಲೈಟ್ ಹತ್ತಬಹುದು ಎಂದು ಹೇಳಲಾಗುತ್ತಿದೆ. ಹಾಗಿದ್ದರೆ ಬಿಸಿಸಿಐ ಆಯ್ಕೆ ಸಮಿತಿ ಸಂಜು ಸ್ಯಾಮ್ಸನ್ ಅವರನ್ನು ಕಡೆಗಣಿಸುತ್ತಿರುವುದು ಏಕೆ ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ.
ಭರವಸೆಯ ಆಟಗಾರ ಸಂಜು ಏಕದಿನ ಪಂದ್ಯಗಳಿಗಿಂತಲೂ ಟಿ20 ಮಾದರಿಯ ಕ್ರಿಕೆಟ್ನಲ್ಲಿ ಹೆಚ್ಚು ಫಿಟ್ ಆಗಿ ಕಾಣಿಸಿಕೊಳ್ಳುತ್ತಾರೆ. ಇವರು ಆಡಿದ ಕೊನೆಯ 5 ಟಿ20 ಪಂದ್ಯಗಳಲ್ಲಿ 3 ಶತಕ ಸಿಡಿಸಿದ್ದಾರೆ. ಇನ್ನು ಸಂಜು ಸ್ಯಾಮ್ಸನ್ ಅವರಿಗೆ ಏಕದಿನ ತಂಡದಲ್ಲಿ ಸ್ಥಾನ ನೀಡದಿರಲು ಇದು ಒಂದು ಕಾರಣವಾಗಬಹುದು. ಇವರು ದೇಶೀಯ ಟೂರ್ನಿ ವಿಜಯ್ ಹಜಾರೆಯಲ್ಲಿ ಕೇರಳ ತಂಡದ ಭಾಗವಾಗಿಲ್ಲ. ಈ ಟೂರ್ನಿಯಲ್ಲಿ ಭಾರತ ತಂಡದ ಹಲವು ಸ್ಟಾರ್ ಆಟಗಾರರು ಆಡುತ್ತಿದ್ದು, ಇವರು ಆಡದಿರುವ ಬಗ್ಗೆ ಪ್ರಶ್ನೆಗಳು ಎದ್ದಿವೆ.

ವಿಜಯ್ ಹಜಾರೆ ಟೂರ್ನಿ ಆರಂಭಕ್ಕೂ ಮುನ್ನವೇ ನಡೆದ ಶಿಭಿರದಲ್ಲಿ ಇವರು ಭಾಗವಹಿಸದ ಕಾರಣ ಇವರನ್ನು ಆಯ್ಕೆ ಮಾಡಲಾಗಿಲ್ಲ. ಇವರು ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಗೆ ಭಾರತ ತಂಡದ ಭಾಗವಾಗಿದ್ದಾರೆ.
ಸಂಜು ಸ್ಯಾಮ್ಸನ್ ಪರ ಟೀಮ್ ಇಂಡಿಯಾದ ಮಾಜಿ ಸ್ಪಿನ್ ಬೌಲರ್ ಹರ್ಭಜನ್ ಸಿಂಗ್ ಧ್ವನಿ ಎತ್ತಿದ್ದಾರೆ. ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಇವರಿಗೂ ಸ್ಥಾನ ನೀಡಬೇಕು ಎಂದು ಭಜ್ಜಿ ಹೇಳಿದ್ದಾರೆ. ಸ್ಯಾಮ್ಸನ್ ಮತ್ತು ಪಂತ್ ಇಬ್ಬರೂ ತಂಡದಲ್ಲಿ ಸ್ಥಾನ ಪಡೆಯಲು ಅರ್ಹರು. ಈ ಇಬ್ಬರೂ ಆಟಗಾರರ ಇತ್ತೀಚಿನ ಪ್ರದರ್ಶನವನ್ನು ಮಾನದಂಡವಾಗಿಟ್ಟುಕೊಂಡು ತಂಡದಲ್ಲಿ ಸ್ಥಾನ ನೀಡಬೇಕು ಎಂದು ತಿಳಿಸಿದ್ದಾರೆ.