ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಇದಕ್ಕಾಗಿ ಈಗಾಗಲೇ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಈ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 19 ರಿಂದ 23 ರವರೆಗೆ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿರುವ ಎರಡನೇ ಪಂದ್ಯಕ್ಕೆ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಸರಣಿಯಲ್ಲಿ ಭರವಸೆಯ ಆಟಗಾರರಾದ ಸರ್ಫರಾಜ್ ಖಾನ್ ಮತ್ತು ಧ್ರುವ್ ಜುರೆಲ್ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಇನ್ನೂ 7 ದಿನ ಬಾಕಿ ಇದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಮಾಜಿ ನಾಯಕ ಕೃಷ್ಣಮಾಚಾರಿ ಶ್ರೀಕಾಂತ್ ತಮ್ಮ ಡ್ರೀಮ್ ಇಲೆವೆನ್ಯಿಂದ ಸರ್ಫರಾಜ್ ಖಾನ್ ಮತ್ತು ಧ್ರುವ್ ಜುರೆಲ್ ಅವರನ್ನು ಮೊದಲ ಪಂದ್ಯದ ಹನ್ನೊಂದರಿಂದ ಕೈಬಿಟ್ಟಿದ್ದಾರೆ. ಇದರೊಂದಿಗೆ ಇಬ್ಬರೂ ಮೊದಲ ಪಂದ್ಯದಿಂದಲೇ ಹೊರ ಬಿದ್ದಿರುವ ಬಗ್ಗೆ ಬೇಸರವನ್ನೂ ವ್ಯಕ್ತಪಡಿಸಿದ್ದಾರೆ.
ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡಿರುವ ಕೃಷ್ಣಮಾಚಾರಿ ಶ್ರೀಕಾಂತ್ ಅವರು, 'ಸರ್ಫರಾಜ್ ಖಾನ್ ಹೊರಗುಳಿದಿರುವ ಬಗ್ಗೆ ನನಗೆ ಬೇಸರವಿದೆ. ಕೆಲವು ಸಂದರ್ಭಗಳಲ್ಲಿ ಇದು ನಡೆಯುತ್ತಿದ್ದೆ. ನೀವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾಗ ಹಿರಿಯ ಸ್ಟಾರ್ ಆಟಗಾರರು ತಂಡಕ್ಕೆ ಹಿಂತಿರುಗಿದಾಗ ನಿಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತೀರಿ. ಇದೆಲ್ಲವನ್ನೂ ನೀವು ಕ್ರಿಕೆಟ್ನಲ್ಲಿ ನೋಡಬಹುದು ಎಂದು ಹೇಳಿದ್ದಾರೆ.
ಇದೇ ವೇಳೆ ಯುವ ವಿಕೆಟ್ಕೀಪರ್-ಬ್ಯಾಟರ್ ಧ್ರುವ್ ಜುರೆಲ್ ಕುರಿತು ಸಹಾ ಕೃಷ್ಣಮಾಚಾರಿ ಶ್ರೀಕಾಂತ್ ಮಾತನಾಡಿದ್ದಾರೆ. 'ರಿಷಭ್ ಪಂತ್ ಪುನರಾಗಮನ ಮಾಡಿದ ರೀತಿ ಅದ್ಭುತವಾಗಿದೆ. ಅವರು ತಂಡಕ್ಕೆ ಯಾವುದೇ ಪರಿಸ್ಥಿತಿಯಲ್ಲೂ ಆಸರೆಯಾಗುತ್ತಾರೆ.
ಅವರಿಗೆ ಮೈದಾನದ ಸುತ್ತಮುತ್ತ ಬೌಂಡರಿ-ಸಿಕ್ಸರ್ ಹೊಡೆಯುವ ಸಾಮರ್ಥ್ಯವಿದೆ. ಹೀಗಾಗಿ ರಿಷಬ್ ಪಂತ್ ಆಗಮನದಿಂದ ಧ್ರುವ್ ಜುರೆಲ್ ಸ್ಥಾನ ಕಳೆದುಕೊಳ್ಳಬೇಕಾಗಬಹುದು ಎಂದು ತಿಳಿಸಿದ್ದಾರೆ.
2024ರ ಮಾರ್ಚ್ ತಿಂಗಳಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ತನ್ನ ಕೊನೆ ಟೆಸ್ಟ್ ಸರಣಿಯನ್ನು ಆಡಿದೆ. ಈ ಸರಣಿಯಲ್ಲೂ ಸರ್ಫರಾಜ್ ಖಾನ್ ಮತ್ತು ಧ್ರುವ್ ಜುರೆಲ್ ಸ್ಥಾನ ಪಡೆದಿದ್ದರು. ಈ ಇಬ್ಬರು ಟೀಮ್ ಇಂಡಿಯಾ ಪರ ಜವಾಬ್ದಾರಿಯುವ ಇನ್ನಿಂಗ್ಸ್ಗಳನ್ನು ಆಡಿ ಸೈ ಎನಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಕೆಎಲ್ ರಾಹುಲ್ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದರು. ಆದರೆ ರಿಷಬ್ ಪಂತ್ ಕಾರು ಅಪಘಾತದ ನಂತರ ಚೇತರಿಸಿಕೊಳ್ಳುತ್ತಿದ್ದರು.
ಇದೀಗ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದ ಆಡುವ ಹನ್ನೊಂದರಿಂದ ಸರ್ಫರಾಜ್ ಖಾನ್ ಮತ್ತು ಧ್ರುವ ಜುರೆಲ್ ಅವರನ್ನು ಹೊರಗಿಟ್ಟಿದ್ದಾರೆ. ಆದರೆ ಅವರ ಸ್ಥಾನದಲ್ಲಿ ಕೆಎಲ್ ರಾಹುಲ್ ಮತ್ತು ರಿಷಬ್ ಪಂತ್ ಅವರಿಗೆ ಸ್ಥಾನ ನೀಡುವ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.