ನವದೆಹಲಿ: ತವರಿನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮೊದಲ ಟೆಸ್ಟ್ ಅಕ್ಟೋಬರ್ 16 ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಬಾಂಗ್ಲಾ ವಿರುದ್ಧದ ಅಂಗಳಕ್ಕೆ ಇಳಿದ ಭಾರತ ತಂಡವನ್ನೇ ಕಣಕ್ಕೆ ಇಳಿಸಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ. ತಂಡದಲ್ಲಿ ವಿಶೇಷವಾದ ಬದಲಾವಣೆಗಳು ಇಲ್ಲ.
ಟೀಮ್ ಇಂಡಿಯಾದಲ್ಲಿ ಯಾವುದೇ ವಿಶೇಷ ಬದಲಾವಣೆ ಮಾಡಿಲ್ಲ. ತಂಡದಲ್ಲಿ ವಿಶೇಷವೆಂದರೆ ಉಪನಾಯಕನನ್ನು ಘೋಷಿಸಲಾಗಿದೆ. ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಖಾಲಿಯಿದ್ದ ಉಪನಾಯಕನ ಸ್ಥಾನವನ್ನು ಈಗ ಆಯ್ಕೆ ಸಮಿತಿ ತುಂಬುವಲ್ಲಿ ಸಫಲವಾಗಿದೆ. ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಉಪನಾಯಕನಾಗಿ ಜಸ್ಪ್ರಿತ್ ಬುಮ್ರಾರನ್ನು ನೇಮಿಸಲಾಗಿದೆ.

ದೇಶೀಯ ಟೂರ್ನಿಯಲ್ಲಿ ಅಬ್ಬರದ ಪ್ರದರ್ಶನ ನೀಡಿರುವ ಸರ್ಫರಾಜ್ ಖಾನ್ಗೆ ತಂಡದಲ್ಲಿ ಸ್ಥಾನವನ್ನು ನೀಡಲಾಗಿದೆ. ಸರ್ಫರಾಜ್ ಖಾನ್ ಅವರು ಇರಾನಿ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ದ್ವಿಶತಕ ಬಾರಿಸಿ ಅಬ್ಬರಿಸಿದ್ದರು. ಈ ಮೂಲಕ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ತಮ್ಮನ್ನು ಆಯ್ಕೆ ಮಾಡುವಂತೆ ಬಿಸಿಸಿಐ ಆಯ್ಕೆ ಸಮಿತಿಗೆ ಒತ್ತಾಯಿಸಿದರು. ಇದರ ಪರಿಣಾಮ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಲಭಿಸುತ್ತದೋ ಎಂಬುದನ್ನು ಕಾದು ನೋಡಬೇಕಿದೆ.
ನ್ಯೂಜಿಲೆಂಡ್ ವಿರುದ್ಧದ ಪ್ರಕಟಿತ ಭಾರತ ತಂಡದಲ್ಲಿ ನಿರೀಕ್ಷೆಯಂತೆ ನಾಲ್ವರು ಸ್ಪಿನ್ ಬೌಲರ್ಗಳಿಗೆ ಅವಕಾಶ ನೀಡಲಾಗಿದೆ. ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಆರ್ ಅಶ್ವಿನ್ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇವರು ಈ ಸರಣಿಯಲ್ಲಿ ಸರಣಿ ಶ್ರೇಷ್ಠ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇನ್ನು ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಹಾಗೂ ಕುಲ್ದೀಪ್ ಯಾದವ್ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇನ್ನು ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂವರು ವೇಗಿಗಳು ಬಾಂಗ್ಲಾ ವಿರುದ್ಧ ಸ್ಥಿರ ಪ್ರದರ್ಶನ ನೀಡಿ ವಿಕೆಟ್ ಬೇಟೆ ನಡೆಸಿದ್ದರು.
ವಿಕೆಟ್ ಕೀಪರ್ ರೂಪದಲ್ಲಿ ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್ ಅವರಿಗೆ ಸ್ಥಾನ ನೀಡಲಾಗಿದೆ. ಈ ಮೂಲಕ ಟೆಸ್ಟ್ ಸರಣಿ ಸೇರುವ ಕನಸು ಕಾಣುತ್ತಿದ್ದ ಜಾರ್ಖಂಡ್ನ ಇಶಾನ್ ಕಿಶನ್ ಅವರಿಗೆ ಹಿನ್ನಡೆ ಆಗಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್,