
ಇತ್ತೀಚೆಗೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಸತತವಾಗಿ ಮೂರು ಪಂದ್ಯಗಳಲ್ಲಿ ಆಡಿದ ಮೊದಲನೇ ಎಸೆತದಲ್ಲೇ ಔಟಾಗುವ ಮೂಲಕ ಕೆಟ್ಟ ದಾಖಲೆ ಬರೆದಿದ್ದಾರೆ. ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.
ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಸ್ಪಿನ್ನರ್ ಆಶ್ಟನ್ ಅಗರ್ ಬೌಲಿಂಗ್ನಲ್ಲಿ ಬೌಲ್ಡ್ ಆದರೆ, ಮೊದಲ ಎರಡು ಪಂದ್ಯಗಳಲ್ಲಿ ಮಿಚೆಲ್ ಸ್ಟಾರ್ಕ್ ಬೌಲಿಂಗ್ನಲ್ಲಿ ಎರಡು ಬಾರಿ ಎಲ್ಬಿಡಬ್ಲ್ಯೂ ಬಲೆಗೆ ಬಿದ್ದಿದ್ದರು.
ಸೂರ್ಯಕುಮಾರ್ ಯಾದವ್ ಬದಲಾಗಿ ಸಂಜು ಸ್ಯಾಮ್ಸನ್ಗೆ ಅವಕಾಶ ನೀಡಬೇಕಿತ್ತು ಎಂದು ಸಾಕಷ್ಟು ಅಭಿಮಾನಿಗಳು ಅನಿಸಿಕೆ ವ್ಯಕ್ತಪಡಿಸಿದ್ದಾರೆ. ಈಗ ಕೇರಳದ ಹೆಸರಾಂತ ರಾಜಕಾರಣಿ, ಶಶಿ ತರೂರ್ ಕೂಡ ಸಂಜು ಸ್ಯಾಮ್ಸನ್ ಪರವಾಗಿ ಮಾತನಾಡಿದ್ದಾರೆ.
ಸಂಜು ಸ್ಯಾಮ್ಸನ್ ಪರವಾಗಿ ಧ್ವನಿ ಎತ್ತಿರುವ ಶಶಿ ತರೂರ್, ಪ್ರತಿಭೆ ಇದ್ದರೂ ಆತನನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ. ಉತ್ತಮ ಫಾರ್ಮ್ನಲ್ಲಿದ್ದರೂ ಸಂಜು ಸ್ಯಾಮ್ಸನ್ರನ್ನು ಕೈಬಿಟ್ಟು ಸೂರ್ಯಕುಮಾರ್ ಯಾದವ್ಗೆ ಅವಕಾಶ ನೀಡಿದ್ದನ್ನು ಅವರು ಪ್ರಶ್ನೆ ಮಾಡಿದ್ದಾರೆ.
"ಸೂರ್ಯಕುಮಾರ್ ಯಾದವ್ ಸತತವಾಗಿ ಮೂರು ಪಂದ್ಯಗಳಲ್ಲಿ ಗೋಲ್ಡನ್ ಡಕ್ಗೆ ಬಲಿಯಾಗುವ ಮೂಲಕ ಕೆಟ್ಟ ವಿಶ್ವದಾಖಲೆ ಬರೆದಿದ್ದಾರೆ. ಸಂಜು ಸ್ಯಾಮ್ಸನ್ ತಮ್ಮ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ 66 ಸರಾಸರಿ ಹೊಂದಿದ್ದರೂ ಯಾಕೆ ಅವಕಾಶ ನೀಡುತ್ತಿಲ್ಲ. ಭಾರತ ತಂಡದಲ್ಲಿ ಸ್ಥಾನ ಪಡೆಯಬೇಕೆಂದರೆ ಆತ ಇನ್ನೂ ಏನು ಮಾಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.

ಸಂಪೂರ್ಣವಾಗಿ ಫಿಟ್ ಆಗಿರುವ ಸಂಜು ಸ್ಯಾಮ್ಸನ್
ಸಂಜು ಸ್ಯಾಮ್ಸನ್ ಕೊನೆಯದಾಗಿ ಟೀಮ್ ಇಂಡಿಯಾ ಪರ ಆಡಿದ್ದು 2023ರ ಜನವರಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ. ಮುಂಬೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಬೌಂಡರಿ ಬಳಿ ಚೆಂಡನ್ನು ತಡೆಯುವ ಯತ್ನದಲ್ಲಿ ಮೊಣಕಾಲಿಗೆ ಗಾಯಮಾಡಿಕೊಂಡ ನಂತರ ಉಳಿದ ಎರಡು ಟಿ20 ಪಂದ್ಯಗಳಿಂದ ಹೊರಗುಳಿದಿದ್ದರು.
ಸಂಜು ಸ್ಯಾಮ್ಸನ್ ಇಲ್ಲಿಯವರೆಗೆ 11 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನಾಡಿದ್ದು 66ರ ಸರಾಸರಿಯಲ್ಲಿ 330 ರನ್ ಗಳಿಸಿದ್ದಾರೆ. ಸೂರ್ಯಕುಮಾರ್ ಯಾದವ್ 23 ಏಕದಿನ ಪಂದ್ಯಗಳಲ್ಲಿ 24.06 ಸರಾಸರಿಯಲ್ಲಿ 433 ರನ್ ಗಳಿಸಿದ್ದಾರೆ. 2023 ರಲ್ಲಿ, ಸೂರ್ಯಕುಮಾರ್ ಯಾದವ್ ಇಲ್ಲಿಯವರೆಗೆ ಏಳು ಏಕದಿನ ಪಂದ್ಯಗಳಲ್ಲಿ ಆಡಿದ್ದು, 8.17 ರ ಸರಾಸರಿಯಲ್ಲಿ 49 ರನ್ ಗಳಿಸಿದ್ದಾರೆ.

ಐಪಿಎಲ್ಗಾಗಿ ಸಿದ್ಧವಾಗುತ್ತಿರುವ ಸಂಜು
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ಬಾರಿ ಐಪಿಎಲ್ನಲ್ಲಿ 17 ಪಂದ್ಯಗಳಲ್ಲಿ 146.79 ಸ್ಟ್ರೈಕ್ ರೇಟ್ನಲ್ಲಿ 458 ರನ್ ಗಳಿಸುವ ಮೂಲಕ ಮಿಂಚಿದ್ದರು. ಸಂಜು ನಾಯಕತ್ವದಲ್ಲಿ ಕಳೆದ ಬಾರಿ ರಾಜಸ್ಥಾನ ರಾಯಲ್ಸ್ ಫೈನಲ್ಗೆ ಪ್ರವೇಶ ಪಡೆದುಕೊಂಡಿತ್ತು.
ಈ ಬಾರಿಯ ಐಪಿಎಲ್ನಲ್ಲಿ ಕೂಡ ರಾಜಸ್ಥಾನ ರಾಯಲ್ಸ್ ತಂಡ ಬಲಿಷ್ಠವಾಗಿದ್ದು, ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ. ಸಂಜು ಸ್ಯಾಮ್ಸನ್ ಈಗಾಗಲೇ ಜೋಧ್ಪುರದಲ್ಲಿ ತಂಡವನ್ನು ಸೇರಿಕೊಂಡಿದ್ದು ಅಭ್ಯಾಸ ಆರಂಭಿಸಿದ್ದಾರೆ.