ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವು ಫೆಬ್ರವರಿ 23 ರ ಭಾನುವಾರದಂದು ದುಬೈನಲ್ಲಿ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡವು ನ್ಯೂಜಿಲೆಂಡ್ ವಿರುದ್ಧ 60 ರನ್ಗಳ ಹೀನಾಯ ಸೋಲನ್ನು ಅನುಭವಿಸಿತು. ಈ ಸೋಲಿನ ನಂತರ, ಪಾಕಿಸ್ತಾನ ಈಗ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯುವ ಭಯದಲ್ಲಿದೆ. ಮತ್ತೊಂದೆಡೆ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡವು 21 ಎಸೆತಗಳು ಬಾಕಿ ಇರುವಂತೆಯೇ ಬಾಂಗ್ಲಾದೇಶವನ್ನು 6 ವಿಕೆಟ್ಗಳಿಂದ ಸೋಲಿಸಿದೆ.
ಇದೀಗ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಮೇಲೆ ಕ್ರಿಕೆಟ್ ಅಭಿಮಾನಿಗಳ ಚಿತ್ತ ನೆಟ್ಟಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ಮಾಜಿ ವೇಗಿ ಶೋಯೆಬ್ ಅಖ್ತರ್ ತಮ್ಮ ಹೇಳಿಕೆ ಮೂಲಕ ಸಂಚಚಲ ಮೂಡಿಸಿದ್ದಾರೆ.

'ರಾವಲ್ಪಿಂಡಿ ಎಕ್ಸ್ಪ್ರೆಸ್' ಎಂದೇ ಖ್ಯಾತಿ ಪಡೆದಿರುವ ಮಾಜಿ ವೇಗಿ ಶೋಯೆಬ್ ಅಖ್ತರ್, ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನಕ್ಕೆ 'ಮಾಡು ಇಲ್ಲವೇ ಮಡಿ' ಪರಿಸ್ಥಿತಿ ಎಂದಿದ್ದಾರೆ. 'ಪಾಕಿಸ್ತಾನಕ್ಕೆ ಈಗ ಭಾರತದ ವಿರುದ್ಧ ಗೆಲ್ಲುವುದು ಬಹಳ ಮುಖ್ಯ. ಭಾರತ ತುಂಬಾ ಬಲಿಷ್ಠ ತಂಡವಾಗಿದ್ದು, ಸವಾಲು ಕಠಿಣವಾಗಿದೆ. ಪಾಕಿಸ್ತಾನ ತಂಡ ಭಾರತವನ್ನು ಸೋಲಿಸುವಲ್ಲಿ ಯಶಸ್ವಿಯಾಗುತ್ತದೆ ಎಂದು ನನಗೆ ವಿಶ್ವಾಸವಿದೆ. ಪಾಕಿಸ್ತಾನ ತಂಡಕ್ಕೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ.
ನಾನು ಪಾಕಿಸ್ತಾ ತಂಡಕ್ಕೆ ಶುಭ ಹಾರೈಸುತ್ತೇನೆ. ಅವರು ಹೆಚ್ಚು ಆಕ್ರಮಣಕಾರಿಯಾಗಿ ಆಡಬೇಕು. ಇದು ತುಂಬಾ ಕಷ್ಟಕರವೆಂದು ತೋರುತ್ತದೆ, ಆದರೆ ನಾನು ಪಾಕಿಸ್ತಾನದಿಂದ ಉತ್ತಮವಾದದ್ದನ್ನು ನಿರೀಕ್ಷಿಸುತ್ತೇನೆ. 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ರೇಸ್ನಲ್ಲಿ ಉಳಿಯಲು, ಪಾಕಿಸ್ತಾನ ಫೆಬ್ರವರಿ 23 ರಂದು ಭಾರತದ ವಿರುದ್ಧದ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು ಎಂದು ಶೋಯೆಬ್ ಅಖ್ತರ್ ತಿಳಿಸಿದ್ದಾರೆ.
ಭಾರತದ ವಿರುದ್ಧದ ಪಂದ್ಯವನ್ನು ಗೆಲ್ಲುವುದು ಪಾಕಿಸ್ತಾನಕ್ಕೆ ತುಂಬಾ ಕಷ್ಟಕರವಾಗಿದೆ. ಭಾರತ ವಿರುದ್ಧ ಪಾಕಿಸ್ತಾನ ಸೋತರೆ , ಸೆಮಿಫೈನಲ್ ಸ್ಪರ್ಧೆಯಿಂದ ಹೊರಗುಳಿಯುವ ಸಾಧ್ಯತೆಯಿದೆ.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್.
ಪಾಕಿಸ್ತಾನ: ಇಮಾಮ್-ಉಲ್-ಹಕ್, ಬಾಬರ್ ಅಜಮ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ನಾಯಕ ಮತ್ತು ವಿಕೆಟ್ ಕೀಪರ್), ಸಲ್ಮಾನ್ ಆಘಾ, ತಯ್ಯಬ್ ತಾಹಿರ್, ಖುಶ್ದಿಲ್ ಶಾ, ಶಾಹೀನ್ ಅಫ್ರಿದಿ, ನಸೀಮ್ ಶಾ, ಅಬ್ರಾರ್ ಅಹ್ಮದ್ ಮತ್ತು ಹ್ಯಾರಿಸ್ ರೌಫ್.