ಸತತ ಎರಡು ಬಾರಿ ಭಾರತ ಕ್ರಿಕೆಟ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯೂಟಿಸಿ) ಫೈನಲ್ ಪ್ರವೇಶಿಸಿತ್ತು. ಆದರೆ ಭಾರತ ತಂಡ ಎರಡು ಬಾರಿಯೂ ಪ್ರಶಸ್ತಿ ಎತ್ತಿ ಹಿಡಿಯುವಲ್ಲಿ ಯಶಸ್ವುಯಾಗಲಿಲ್ಲ. ಮೊದಲ ಬಾರಿಗೆ ನ್ಯೂಜಿಲೆಂಡ್ ವಿರುದ್ಧ ಭಾರತ ಸೋಲು ಕಂಡಿತ್ತು. ನಂತರ ಭಾರತ ತಂಡವನ್ನು ಆಸ್ಟ್ರೇಲಿಯಾ ಸೋಲಿಸಿತ್ತು. ಮೂರನೇ ಬಾರಿಗೆ ಡಬ್ಲ್ಯೂಟಿಸಿ ಫೈನಲ್ ತಲುಪುವ ಅವಕಾಶವನ್ನು ಭಾರತ ತಂಡ ಹೊಂದಿತ್ತು. ಆದರೆ, ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸೋಲಿನ ನಂತರ ಭಾರತ ತಂಡದ ಡಬ್ಲ್ಯೂಟಿಸಿ ಫೈನಲ್ ತಲುಪುವ ಕನಸು ಭಗ್ನವಾಗಿತ್ತು.
ಭಾರತ ತಂಡದ ಈ ಸೋಲು ಸಾಕಷ್ಟು ಟೀಕೆಗಳಿಗೆ ಗುರಿಯಾಗಿದೆ. ಆಟಗಾರರ ಕಳಪೆ ಪ್ರದರ್ಶನ, ರೋಹಿತ್ ಶರ್ಮಾ ನಾಯಕತ್ವ, ತಂಡದಲ್ಲಿ ಸ್ಟಾರ್ಗಿರಿ, ಹೆಡ್ಕೋಚ್ ಗೌತಮ್ ಗಂಭೀರ್ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಸಾಕಷ್ಟು ಚರ್ಚೆಗಳು ಎದ್ದಿವೆ. ಇದರ ಬೆನ್ನಲ್ಲೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಭೆ ನಡೆಸಿದೆ. ಬಿಸಿಸಿಐ ಹೆಡ್ ಕ್ವಾಟ್ರಸ್ನಲ್ಲಿ ನಡೆದ ಸಭೆಯಲ್ಲಿ ಬಿಸಿಸಿಐನ ಉನ್ನತ ಅಧಿಕಾರಿಗಳು, ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್, ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಭಾಗಿಯಾಗಿದ್ದು, ಪ್ರಮುಖ ವಿಚಾರಗಳ ಚರ್ಚೆಯಾಗಿವೆ.

ಈಗಾಗಲೇ ಬಿಸಿಸಿಐ ಟೀಮ್ ಇಂಡಿಯಾದ ಹೊಸ ನಾಯಕನ ಹುಡುಕಾಟದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಶರ್ಮಾ ವೃತ್ತಿಜೀವನದ ಭವಿಷ್ಯವೇನು?, ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ವಿರಾಟ್ ಕೊಹ್ಲಿ ಅವರನ್ನು ತಂಡದಿಂದ ಕೈ ಬಿಡಬೇಕಾ? ಹೀಗೆ ಆನೇಕ ಪ್ರಶ್ನೆಗಳು ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಸೋಲಿನ ಬಳಿಕ ಎದ್ದಿದ್ದವು. ಈ ಎಲ್ಲ ಮಹತ್ವದ ವಿಚಾರಗಳ ಬಗ್ಗೆ ಬಿಸಿಸಿಐ ಸಭೆಯಲ್ಲಿ ಚರ್ಚೆ ನಡೆದಿವೆ. ಬಹುಮುಖ್ಯವಾಗಿ ವಿರಾಟ್ ಕೊಹ್ಲಿ ಅವರಿಗೆ ಬಿಸಿಸಿಐ ಸಭೆ ಶಾಕ್ ನೀಡಿದೆ.
ವಿರಾಟ್ ಕೊಹ್ಲಿ ಕಳಪೆ ಫಾರ್ಮ್ ಸಮಸ್ಯೆ ಎದುರಿಸುತ್ತಿರುವುದು ಗೊತ್ತಿರುವ ವಿಚಾರ. ಹೀಗಾಗಿ ವಿರಾಟ್ ಕೊಹ್ಲಿ ವೃತ್ತಿಜೀವನ ಭವಿಷ್ಯದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಕೊಹ್ಲಿಯನ್ನು ತಂಡದಿಂದ ಹೊರಗಿಡುವುದರ ಬಗ್ಗೆಯೂ ಪರ-ವಿರೋಧದ ಚರ್ಚೆಗಳಾಗಿವೆ. ಅಂತಿಮವಾಗಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಮುಗಿದ ಬಳಿಕ ಕೊಹ್ಲಿ ಭವಿಷ್ಯವನ್ನು ನಿರ್ಧರಿಸಲು ಸಭೆಯಲ್ಲಿ ನಿರ್ಧಾರಿಸಲಾಗಿದೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕೊಹ್ಲಿ ಬ್ಯಾಟಿಂಗ್ ಪ್ರದರ್ಶನದ ಮೇಲೆ ಅವರ ಮುಂದಿನ ವೃತ್ತಿಜೀವನದ ಭವಿಷ್ಯ ನಿರ್ಧಾರವಾಗಲಿದೆ.
ವಿರಾಟ್ ಕೊಹ್ಲಿ ತವರಿನಲ್ಲಿ ನಡೆದ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಪ್ರವಾಸದ ಟೆಸ್ಟ್ ಸರಣಿಗಳಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಎರಡೂ ಟೆಸ್ಟ್ ಸರಣಿಗಳಲ್ಲಿ ವಿರಾಟ್ ಕೊಹ್ಲಿ ಅವರಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿತ್ತು. ಆದರೆ ಕೊಹ್ಲಿ ಅಬ್ಬರಿಸಲು ಸಾಧ್ಯವಾಗಲಿಲ್ಲ. ಇದೀಗ ಚಾಂಪಿಯನ್ಸ್ ಟ್ರೋಫಿಯಲ್ಲಿ ಅಬ್ಬರಿಸದೇ ಇದ್ದರೆ ಕೊಹ್ಲಿ ವೃತ್ತಿಜೀವನಕ್ಕೆ ತೆರೆ ಬೀಳುವ ಸಾಧ್ಯತೆಯಿದೆ.