ಐಪಿಎಲ್ ಮೆಗಾ ಹರಾಜಿನಲ್ಲಿ ಶ್ರೇಯಸ್ ಅಯ್ಯರ್ ಭಾರೀ ಜಾಕ್ ಪಾಟ್ ಹೊಡೆದಿದ್ದಾರೆ. ಇವರನ್ನು 26.75 ಕೋಟಿ ರೂಪಾಯಿಗೆ ಪಂಜಾಬ್ ಕಿಂಗ್ಸ್ ಖರೀದಿಸಿದೆ. ಪಂಜಾಬ್ ಶ್ರೇಯಸ್ ಅಯ್ಯರ್ ಅವರನ್ನು ಖರೀದಿಸುತ್ತಿದ್ದಂತೆ, ಪ್ರೀತಿ ಜಿಂಟಾ ಒಡೆತನದ ತಂಡ ಖುಷಿಯಾಗುವಂತೆ ಶ್ರೇಯಸ್ ಮಾಡಿದ್ದಾರೆ. ಈ ಮೂಲಕ ತಮ್ಮ ಆಯ್ಕೆ ಸರಿಯಾಗಿದೆ ಎಂದು ಅವರು ಮೈದಾನದಲ್ಲಿ ತೋರಿಸಿಕೊಟ್ಟಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಬಿರುಸಿನ ಬ್ಯಾಟಿಂಗ್ ಪ್ರದರ್ಶನ ನೀಡಿ, ಪಂಜಾಬ್ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ.
ಬುಧವಾರ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯ ಇ ಗುಂಪಿನ ಪಂದ್ಯದಲ್ಲಿ ಮಹಾರಾಷ್ಟ್ರ ಹಾಗೂ ಮುಂಬೈ ತಂಡಗಳು ಕಾದಾಟ ನಡೆಸಿದವು. ಈ ವೇಳೆ ಶ್ರೇಯಸ್ ಅಯ್ಯರ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತಮ್ಮ ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದರು. ಈ ಪದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮಹಾರಾಷ್ಟ್ರ 20 ಓವರ್ಗಳಲ್ಲಿ 9 ವಿಕೆಟ್ಗೆ 171 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಮುಂಬೈ ಇನ್ನು 17 ಎಸೆತ ಬಾಕಿ ಇರುವಂತೆ 5 ವಿಕೆಟ್ ಕಳೆದುಕೊಂಡು 172 ರನ್ ಸಿಡಿಸಿ ಜಯ ಸಾಧಿಸಿತು. ಈ ಮೂಲಕ ಮುಂಬೈ ಆಡಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ.

ಮೊದಲು ಬ್ಯಾಟ್ ಮಾಡಿದ ಮಹಾರಾಷ್ಟ್ರದ ಬ್ಯಾಟಿಂಗ್ ಸಾಧಾರಣಾವಗಿತ್ತು. ಟಾಪ್ ಆರ್ಡರ್ ಬ್ಯಾಟರ್ಗಳು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಅಜ್ಮಿ ಖಾಜಿ 23 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಾಯದಿಂದ 32 ರನ್ ಸಿಡಿಸಿ ತಂಡಕ್ಕೆ ನೆರವಾದರು. ಇವರನ್ನು ಬಿಟ್ಟರೆ, ನಿಖಿಲ್ ನಾಯಕ್ 38 ಎಸೆತಗಳಲ್ಲಿ 47 ರನ್ ಸಿಡಿಸಿ ಅಬ್ಬರಿಸಿದರು.
ಮುಂಬೈ ಪರ ತನುಷ್ ಕೋಟ್ಯಾನ್ 3, ಶಾರ್ದೂಲ್ ಠಾಕೂರ್ ಹಾಗೂ ಮೋಹಿತ್ ಅವಾಸ್ತೆ ತಲಾ ಎರಡು ವಿಕೆಟ್ ಕಬಳಿಸಿದರು.
ಗುರಿಯನ್ನು ಬೆನ್ನಟ್ಟಿದ ಮುಂಬೈ ಆರಂಭ ಕಳಪೆಯಾಗಿತ್ತು. ಪೃಥ್ವಿ ಶಾ ಸೊನ್ನೆ ಸುತ್ತಿದರು. ಆರಂಭಿಕರಾದ ಆಂಗ್ಕ್ರಿಶ್ ರಘುವಂಶಿ 21 ರನ್ ಸಿಡಿಸಿದರು. ಮೂರನೇ ವಿಕೆಟ್ಗೆ ಶ್ರೇಯಸ್ ಅಯ್ಯರ್ ಹಾಗೂ ಅಜಿಂಕ್ಯ ರಹಾನೆ ಜೋಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ಮೂರನೇ ವಿಕೆಟ್ಗೆ ಶತಕದ ಜೊತೆಯಾಟವನ್ನು ನೀಡಿದರು. ಶ್ರೇಯಸ್ ಅಯ್ಯರ್ 39 ಎಸೆತಗಳಲ್ಲಿ 182 ಸ್ಟ್ರೈಕ್ ರೇಟ್ನಲ್ಲಿ 71 ರನ್ ಸಿಡಿಸಿದ್ದಾರೆ. ಇದರಲ್ಲಿ 8 ಬೌಂಡರಿ, 3 ಸಿಕ್ಸರ್ ಸೇರಿವೆ. ಇವರ ಈ ಪ್ರದರ್ಶನ ನಿಜಕ್ಕೂ ಪಂಜಾಬ್ ಅವರಿಗೆ ಸಂತಸ ನೀಡಿದೆ.
ಇನ್ನು ಕೆಕೆಆರ್ ತಂಡ ಸೇರಿರುವ ಅಜಿಂಕ್ಯ ರಹಾನೆ ಸಹ ಕ್ಲಾಸಿಕ್ ಆಟದ ಪ್ರದರ್ಶನ ನೀಡಿದರು. 34 ಎಸೆತಗಳಲ್ಲಿ 152ರ ಸ್ಟ್ರೈಕ್ ರೇಟ್ನಲ್ಲಿ 52 ರನ್ ಸಿಡಿಸಿದ್ದಾರೆ. ಈ ವೇಳೆ 3 ಬೌಂಡರಿ, 3 ಸಿಕ್ಸರ್ ಸೇರಿವೆ. ಈ ಮೂಲಕ ಮುಂಬೈ ಗೆಲುವಿನಲ್ಲಿ ಮಿಂಚಿದರು.