ಬಹು ನಿರೀಕ್ಷಿತ ಇಂಗ್ಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾವನ್ನು ಶನಿವಾರ ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ಅವರಿಂದ ತೆರವಾದ ಸ್ಥಾನಕ್ಕೆ ಶುಭಮನ್ ಗಿಲ್ ಅವರನ್ನು ನೇಮಿಸಲಾಗಿದೆ. ಈ ಮೂಲಕ ಟೀಮ್ ಇಂಡಿಯಾಕ್ಕೆ ಇನ್ನೊಬ್ಬ ನಾಯಕ ಸಿಕ್ಕಂತೆ ಆಗಿದೆ. ಜೂನ್ನಲ್ಲಿ ನಡೆಯಲಿರುವ ಇಂಗ್ಲೆಂಡ್ ಪ್ರವಾಸದ ವೇಳೆ ಶುಭಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತಂಡವನ್ನು ಪ್ರಕಟಿಸಿದ್ದಾರೆ. 18 ಜನರ ತಂಡವನ್ನು ಅಜಿತ್ ಪ್ರಕಟಿಸಿದ್ದಾರೆ.
ಒಂದು ವಾರದ ಅಂತರದಲ್ಲಿ ಟೀಮ್ ಇಂಡಿಯಾದ ಇಬ್ಬರು ಸೂಪರ್ ಸ್ಟಾರ್ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಇದರಿಂದಾಗಿ ಇಂಗ್ಲೆಂಡ್ ಪ್ರವಾಸದ ವೇಳೆ ಟೀಮ್ ಇಂಡಿಯಾ ಯಾವ ರೀತಿಯಾಗಿ ಇರುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಯುವ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ.

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಸ್ಟಾರ್ ಬ್ಯಾಟರ್ ರಿಷಭ್ ಪಂತ್ ಅವರಿಗೆ ಉಪನಾಯಕ ಪಟ್ಟವನ್ನು ಕಟ್ಟಲಾಗಿದೆ. ಇವರಿಗೆ ಉಪನಾಯಕತ್ವವನ್ನು ಈ ಹಿಂದೆಯೂ ನೀಡಲಾಗಿತ್ತು. ಈಗ ಇಂಗ್ಲೆಂಡ್ ಪ್ರವಾಸದಲ್ಲಿ ಪಂತ್ ವೈಸ್ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಐಪಿಎಲ್ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಸಾಯಿ ಸುದರ್ಶನ್ ಅವರಿಗೆ ಇಂಗ್ಲೆಂಡ್ ಪ್ರವಾಸದಲ್ಲಿ ಅವಕಾಶವನ್ನು ನೀಡಲಾಗಿದೆ. ಇವರು ಐಪಿಎಲ್ನಲ್ಲಿ ಸ್ಥಿರ ಪ್ರದರ್ಶನ ನೀಡಿ ಆರೆಂಜ್ ಕ್ಯಾಪ್ ಪಡೆದಿದ್ದಾರೆ. ಇವರ ಆಟವನ್ನು ಕಂಡು ಅಭಿಮಾನಿಗಳು ಇವರಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಸ್ಥಾನ ನೀಡಬೇಕು ಎಂದು ತಿಳಿಸಿದ್ದರು. ಈಗ ಸಾಯಿ ಸುದರ್ಶನ್ ವೈಟ್ ಜೆರ್ಸಿಯಲ್ಲಿ ರೆಡ್ ಬಾಲ್ ಕ್ರಿಕೆಟ್ ಆಡಲಿದ್ದಾರೆ. ತಮಿಳುನಾಡಿನ ಇನ್ನೋರ್ವ ಆಟಗಾರ ಅಭಿಮನ್ಯು ಈಶ್ವರನ್ಗೂ ಸ್ಥಾನ ಲಭಿಸಿದೆ.
ಬಿಸಿಸಿಐ ಪ್ರಕಟಿತ ತಂಡದಲ್ಲಿ ಮೂವರು ಸ್ಪಿನ್ ಬೌಲರ್ಗಳಿಗೆ ಅವಕಾಶ ನೀಡಲಾಗಿದೆ. ಆಲ್ರೌಂಡರ್ ರೂಪದಲ್ಲಿ ಕಾಣಿಸಿಕೊಳ್ಳುವ ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ನುರಿತ ಸ್ಪಿನ್ ಬೌಲರ್ ರೂಪದಲ್ಲಿ ಕುಲ್ದೀಪ್ ಯಾದವ್ ಸ್ಥಾನ ಉಳಿಸಿಕೊಂಡಿದ್ದಾರೆ.
ಇಂಗ್ಲೆಂಡ್ ಪ್ರವಾಸಕ್ಕಾಗಿ ಐವರು ವೇಗದ ಬೌಲರ್ಗಳಿಗೆ ಅವಕಾಶ ನೀಡಲಾಗಿದೆ. ಶಾರ್ದೂಲ್ ಠಾಕೂರ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣಾ, ಅರ್ಷದೀಪ್ ಸಿಂಗ್ ಎದುರಾಳಿಗಳನ್ನು ಕಾಡಲಿದ್ದಾರೆ.
18 ಜನರ ಭಾರತ ತಂಡ: ಶುಭಮನ್ ಗಿಲ್ (ನಾಯಕ), ರಿಷಬ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್.