ಕೊಹ್ಲಿಯನ್ನು ಆ ಜನ ಬೇಕಂತಲೇ ಟಾರ್ಗೆಟ್ ಮಾಡುತ್ತಿದ್ದಾರೆ; ಕಿಡಿಕಾರಿದ ಮಾಜಿ ಕ್ರಿಕೆಟಿಗ

ಭಾರೀ ಕುತೂಹಲ ಮತ್ತು ನಿರೀಕ್ಷೆಯನ್ನು ಹುಟ್ಟುಹಾಕಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಇತ್ತೀಚೆಗಷ್ಟೇ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಈ ಸರಣಿ ಮುಗಿದಿದ್ದು ಸದ್ಯ ಟೀಮ್ ಇಂಡಿಯಾ ಆಟಗಾರರು ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಲು ಯುಎಇಗೆ ಬಂದು ತಲುಪಿದ್ದಾರೆ. ಸೆಪ್ಟೆಂಬರ್ 19ರಿಂದ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿದ ನಂತರ ಅಕ್ಟೋಬರ್ 17ರಿಂದ ಆರಂಭವಾಗಲಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ನಡೆಯಲಿದೆ. ಹೀಗೆ ಒಂದಾದ ಮೇಲೊಂದರಂತೆ ಬೃಹತ್ ಕ್ರಿಕೆಟ್ ಲೀಗ್ಗಳು ನಡೆಯಲಿದ್ದು ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ಸಿಗುವುದಂತೂ ನಿಜ.
ಹೀಗೆ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನವನ್ನು ನೀಡಿತ್ತು. ಈ ಸರಣಿ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಬಹುನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟ ಮಾಡಿತ್ತು. ಹೀಗೆ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟವಾದ ಬೆನ್ನಲ್ಲೇ ವಿರಾಟ್ ಕೊಹ್ಲಿ ಕುರಿತಾಗಿ ದೊಡ್ಡ ಸುದ್ದಿಯೊಂದು ದಿಢೀರನೆ ಸ್ಫೋಟಗೊಂಡು ಸಿಕ್ಕಾಪಟ್ಟೆ ವೈರಲ್ ಆಗಿಬಿಟ್ಟಿತು. ಹೌದು ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ವಿರಾಟ್ ಕೊಹ್ಲಿ ಏಕದಿನ ಮತ್ತು ಟಿ ಟ್ವೆಂಟಿ ತಂಡಗಳ ನಾಯಕತ್ವದಿಂದ ಕೆಳಗಿಳಿಯಲಿದ್ದು ರೋಹಿತ್ ಶರ್ಮಾಗೆ ನೂತನ ನಾಯಕನ ಪಟ್ಟವನ್ನು ಬಿಸಿಸಿಐ ನೀಡಲಿದೆ ಎಂಬ ಸುದ್ದಿ ದೊಡ್ಡಮಟ್ಟದಲ್ಲಿ ಹಬ್ಬಿತ್ತು.
ಈ ಸುದ್ದಿ ಎಷ್ಟರ ಮಟ್ಟಿಗೆ ಪ್ರಭಾವವನ್ನು ಬೀರಿತ್ತು ಎಂದರೆ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯೂ ಕೂಡ ಟಿ ಟ್ವೆಂಟಿ ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ನಾಯಕ ಸ್ಥಾನವನ್ನು ರೋಹಿತ್ ಶರ್ಮಾಗೆ ಬಿಟ್ಟು ಕೊಡಲಿದ್ದಾರೆ ಎಂದು ಸಂಪೂರ್ಣವಾಗಿ ನಂಬಿಬಿಟ್ಟಿದ್ದರು. ಅಷ್ಟೇ ಯಾಕೆ ಸ್ವತಃ ಬಿಸಿಸಿಐ ಕಾರ್ಯದರ್ಶಿಯಾದ ಜಯ್ ಶಾ ಈ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ಮಟ್ಟಿಗೆ ಈ ಸುದ್ದಿ ಎಲ್ಲೆಡೆ ಹಬ್ಬಿ ಬಿಟ್ಟಿತ್ತು. ಆದರೆ ಈ ಸುದ್ದಿ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಇದೊಂದು ಸುಳ್ಳು ಸುದ್ದಿ, ಟಿ ಟ್ವೆಂಟಿ ವಿಶ್ವಕಪ್ ಬಳಿಕ ಭಾರತ ತಂಡದ ನಾಯಕನ ಬದಲಾವಣೆ ಮಾಡುವ ಯಾವುದೇ ಪ್ರಸ್ತಾಪವೇ ನಡೆದಿಲ್ಲ ಎಂದು ಬಿಸಿಸಿಐ ಈ ಸುದ್ದಿಯನ್ನು ಬದಿಗೆ ಸರಿಸಿತು.
ಹೀಗೆ ಕಾಳ್ಗಿಚ್ಚಿನಂತೆ ಹಬ್ಬಿದ್ದ ಈ ಸುಳ್ಳು ಸುದ್ದಿಯ ವಿರುದ್ಧ ಈಗಾಗಲೇ ಸಾಕಷ್ಟು ಕ್ರಿಕೆಟಿಗರು ಅಸಮಾಧಾನವನ್ನು ವ್ಯಕ್ತಪಡಿಸಿದ್ದು ಇದೀಗ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಲ್ಮಾನ್ ಬಟ್ ಕೂಡ ಈ ವಿಷಯದ ಕುರಿತಾಗಿ ಮಾತನಾಡಿದ್ದು ಈ ಕೆಳಕಂಡಂತೆ ಅಸಮಾಧಾನವನ್ನು ಹೊರಹಾಕಿದ್ದಾರೆ.

ವಿರಾಟ್ ಕೊಹ್ಲಿಯನ್ನು ಬೇಕಂತಲೇ ಟಾರ್ಗೆಟ್ ಮಾಡುತ್ತಿದ್ದಾರೆ
ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ವಿರಾಟ್ ಕೊಹ್ಲಿ ಬದಲು ರೋಹಿತ್ ಶರ್ಮಾ ಭಾರತದ ಏಕದಿನ ಮತ್ತು ಟಿ ಟ್ವೆಂಟಿ ತಂಡಗಳ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ವಿರುದ್ಧ ಕಿಡಿಕಾರಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಲ್ಮಾನ್ ಬಟ್ ಭಾರತದಲ್ಲಿ ಕೆಲ ಸುದ್ದಿ ಮಾಧ್ಯಮಗಳು ಬೇಕಂತಲೇ ವಿರಾಟ್ ಕೊಹ್ಲಿಯವರನ್ನು ಗುರಿಯಾಗಿಸಿಕೊಂಡು ಈ ರೀತಿಯ ಸುದ್ದಿಗಳನ್ನು ಹಬ್ಬಿಸುವ ಮೂಲಕ ಕೆಟ್ಟ ಸಂಚನ್ನು ಕೊಹ್ಲಿ ವಿರುದ್ಧ ನಡೆಸುತ್ತಿವೆ ಎಂದು ಕಿಡಿಕಾರಿದ್ದಾರೆ.

ಇಂಥ ಸಮಯದಲ್ಲಿ ಈ ರೀತಿಯ ಸುದ್ದಿ ಹಬ್ಬಿಸುವುದು ನಾಚಿಕೆಗೇಡಿನ ಕೆಲಸ
ಇನ್ನೂ ಮುಂದುವರೆದು ಈ ವಿಚಾರದ ಕುರಿತು ಮಾತನಾಡಿರುವ ಸಲ್ಮಾನ್ ಬಟ್ ಇತ್ತೀಚೆಗಷ್ಟೇ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ತಮ್ಮ ನಾಯಕತ್ವ ಎಂಥದ್ದು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಹಾಗೂ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಸಜ್ಜಾಗುತ್ತಿದ್ದಾರೆ. ಇಂತಹ ಸಮಯದಲ್ಲಿ ಭಾರತದ ಕೆಲ ಮಾಧ್ಯಮಗಳು ಈ ರೀತಿಯ ಕೆಟ್ಟ ಸುದ್ದಿಗಳನ್ನು ಹಬ್ಬಿಸುತ್ತಿರುವುದು ನಾಚಿಕೆಗೇಡಿನ ಕೆಲಸ ಎಂದು ಸಲ್ಮಾನ್ ಬಟ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾಯಕನ ಬದಲಾವಣೆ ವಿಚಾರ ಇಲ್ಲವೇ ಇಲ್ಲ ಎಂದ ಬಿಸಿಸಿಐ
ಟಿ ಟ್ವೆಂಟಿ ವಿಶ್ವಕಪ್ ಮುಗಿದ ನಂತರ ವಿರಾಟ್ ಕೊಹ್ಲಿ ಬದಲು ರೋಹಿತ್ ಶರ್ಮಾ ನಾಯಕನಾಗಲಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ನಾಯಕನ ಬದಲಾವಣೆಯ ಪ್ರಸ್ತಾಪವೇ ಬಿಸಿಸಿಐನಲ್ಲಿ ನಡೆದಿಲ್ಲ ಎಂದು ಹೇಳಿಕೆ ನೀಡುವುದರ ಮೂಲಕ ಈ ಸುದ್ದಿಗೆ ಅಂತ್ಯ ಹಾಡಿದ್ದಾರೆ. ಸದ್ಯ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಅತ್ಯದ್ಭುತ ಪ್ರದರ್ಶನವನ್ನು ನೀಡುತ್ತಿದೆ, ಹೀಗೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡುವವರೆಗೂ ನಾಯಕತ್ವ ಬದಲಾವಣೆಯ ಪ್ರಮೇಯವೇ ಬರುವುದಿಲ್ಲ ಎಂದು ಜಯ್ ಶಾ ಸ್ಪಷ್ಟನೆ ನೀಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications