ಜನವರಿ 23 ರಿಂದ ರಣಜಿ ಟ್ರೋಫಿ ಲೀಗ್ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಮುಂಬೈ ಎದುರಿಸಲಿದೆ. ಉಭಯ ತಂಡಗಳ ಪಂದ್ಯವನ್ನು ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ತನ್ನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನಲ್ಲಿರುವ (ಬಿಕೆಸಿ) ಶರದ್ ಪವಾರ್ ಕ್ರಿಕೆಟ್ ಅಕಾಡೆಮಿಯಲ್ಲಿ (ಬಿಕೆಸಿ) ಆಯೋಜಿಸುತ್ತಿದೆ. ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಸಮಾರು 9 ವರ್ಷಗಳ ನಂತರ ರಣಜಿ ಟ್ರೋಫಿ ಪಂದ್ಯವನ್ನು ಆಡಲು ಸಜ್ಜಾಗಿದ್ದಾರೆ. ರೋಹಿತ್ ಶರ್ಮಾ ತಮ್ಮ ತವರಿನ ತಂಡ ಮುಂಬೈ ಕಣಕ್ಕಿಳಿಯಲಿದ್ದಾರೆ. ಇದಕ್ಕಾಗಿ ಮುಂಬೈ ಕ್ರಿಕೆಟ್ ಸಂಸ್ಥೆ ಬಿಕೆಸಿಯಲ್ಲಿ ವಿಶೇಷ ತಯಾರಿ ನಡೆಸಿದೆ.
ರೋಹಿತ್ ಶರ್ಮಾ 9 ವರ್ಷಗಳ ನಂತರ ರಣಜಿ ಪಂದ್ಯವನ್ನು ಆಡಲಿದ್ದು, ಹಿಟ್ಮ್ಯಾನ್ ಆಟವನ್ನು ಕಣ್ತುಂಬಿಕೊಳ್ಳಲು ಮೈದಾನಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಬರುವ ನಿರೀಕ್ಷೆಯಿದೆ. ಕ್ರಿಕೆಟ್ ಅಭಿಮಾನಿಗಳಿಗೆ ಯಾವುದೇ ರೀತಿಯಲ್ಲೂ ಸಮಸ್ಯೆಯಾಗದಂತೆ ಮುಂಬೈ ಕ್ರಿಕೆಟ್ ಸಂಸ್ಥೆ ಎಚ್ಚರಿಕೆ ವಹಿಸಿದೆ.

ವರದಿಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಹಾಗು ಮುಂಬೈ ತಂಡಗಳ ನಡುವಿನ ಪಂದ್ಯವನ್ನು ನೋಡಲು ಕ್ರಿಕೆಟ್ ಅಭಿಮಾನಿಗಳಿಗೆ ಒಂದು ದಿನಕ್ಕೆ ಮಾತ್ರ ಪ್ರವೇಶವನ್ನು ಅನುಮತಿಸಲಾಗುತ್ತಿದೆ. ಅಲ್ಲದೆ, ಕ್ರಿಕೆಟ್ ಅಭಿಮಾನಿಗಳ ಅನುಕೂಲಕ್ಕಾಗಿ ಖಾಲಿ ಜಾಗದಲ್ಲಿ 200 ಕುರ್ಚಿಗಳ ವ್ಯವಸ್ಥೆ ಮಾಡಲಾಗುತ್ತಿದೆ. ಭದ್ರತಾ ಕಾರಣಗಳಿಂದಾಗಿ, ಪಂದ್ಯದ ಒಂದು ದಿನ ಮಾತ್ರ ಕ್ರಿಕೆಟ್ ಅಭಿಮಾನಿಗಳನ್ನು ಮಾತ್ರ ಪ್ರವೇಶಿಸಲು ಅನುಮತಿಸಲಾಗುತ್ತಿದೆ.
ದಕ್ಷಿಣ ಮುಂಬೈನ ವಾಂಖೆಡೆ ಸ್ಟೇಡಿಯಂಗಿಂತ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಒಂದು ಚಿಕ್ಕ ಮೈದಾನವಾಗಿದೆ. ಇಲ್ಲಿ ಸಾಮಾನ್ಯವಾಗಿ ರಣಜಿ ಟ್ರೋಫಿ ಪಂದ್ಯಗಳನ್ನು ಆಯೋಜಿಸುತ್ತದೆ. ಈಗ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಈ ಮೈದಾನದಲ್ಲಿ ಆಡುತ್ತಿರುವುದರಿಂದ, ಕ್ರಿಕೆಟ್ ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟಿಗನನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಆಟಗಾರರ ಭದ್ರತೆಗೆ ಸಮಸ್ಯೆಯಾಗಬಹುದು ಎಂಬ ಉದ್ದೇಶದಿಂದ ಮುಂಬೈ ಕ್ರಿಕೆಟ್ ಸಂಸ್ಥೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ. ಮುಂಬೈ ಆಟಗಾರರು ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನ ಸುಂದರ ಸ್ಥಳದಲ್ಲಿ ಅಭ್ಯಾಸ ನಡೆಸಿದ್ದಾರೆ.
ರೋಹಿತ್ ಶರ್ಮಾ ಅವರನ್ನು ಹೊರತುಪಡಿಸಿದರೆ, ರಣಜಿ ಟ್ರೋಫಿ ಪಂದ್ಯದಲ್ಲಿ ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ ಕೂಡ ಮೈದಾನಕ್ಕಿಳಿಯಲಿದ್ದಾರೆ. ರಾಜ್ಕೋಟ್ನಲ್ಲಿ ದೆಹಲಿ ಮತ್ತು ಸೌರಾಷ್ಟ್ರ ನಡುವಿನ ರಣಜಿ ಟ್ರೋಫಿ ಪಂದ್ಯದಲ್ಲಿ ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ ತಮ್ಮ ತವರಿನ ತಂಡಗಳ ಪರ ಆಡಲಿದ್ದಾರೆ. ದೆಹಲಿ ತಂಡದಲ್ಲಿ ರಿಷಬ್ ಪಂತ್ ಆಡಿದರೆ, ಸೌರಾಷ್ಟ್ರ ಪರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಮುಂದಿನ ದೆಹಲಿ ತಂಡದ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಆಡಲಿದ್ದಾರೆ. ಈ ಪಂದ್ಯಗಳಿಗೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಸೇರುವ ಸಾಧ್ಯತೆಯಿದೆ. ಇದಕ್ಕಾಗಿ ದೆಹಲಿ ಕ್ರಿಕೆಟ್ ಸಂಸ್ಥೆ ಕೂಡ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ.