ಕಳೆದ ಐದು ದಿನಗಳಿಂದ ಗುಜರಾತಿನಲ್ಲಿ ಭಾರೀ ಮಳೆಯಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರತಿ ಜಿಲ್ಲೆಯಲ್ಲೂ ಪ್ರವಾಹ ಉಂಟಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದಂತೆ ಹಲವು ಪ್ರದೇಶಗಳು ಜಲಾವೃತವಾಗಿವೆ.
ಇಂತಹ ಪರಿಸ್ಥಿತಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಬೌಲರ್ ರಾಧಾ ಯಾದವ್ ಕೂಡ ಪ್ರವಾಹದಲ್ಲಿ ಸಿಲುಕಿಕೊಂಡಿದ್ದು, ಆ ಬಳಿಕ ಅವರನ್ನು ಎನ್ಡಿಆರ್ಎಫ್ ತಂಡ ರಕ್ಷಿಸಿದೆ. ಈ ಬಗ್ಗೆ ಸ್ವತಃ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ರಾಧಾ ಯಾದವ್ ಕುಟುಂಬಸ್ಥರೊಂದಿಗೆ ವಡೋದರಾ ಪ್ರವಾಸಕ್ಕೆ ತೆರಳಿದ್ದರು. ವಡೋದರಾದಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಇಡೀ ಕುಟುಂಬ ಸಿಲುಕಿಕೊಂಡಿತ್ತು.
ಈ ಬಗ್ಗೆ ಮಾಹಿತಿ ಪಡೆದ ಎನ್ಡಿಆರ್ಎಫ್ ತಂಡ ವಿಶೇಷ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಾಧಾ ಮತ್ತು ಅವರ ಕುಟುಂಬಸ್ಥರನ್ನು ಸ್ಥಳಾಂತರ ಮಾಡಿದೆ. ಇದಾದ ಬಳಿಕ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪ್ರವಾಹದ ವೀಡಿಯೊವನ್ನು ಪೋಸ್ಟ್ ಮಾಡುವ ಮೂಲಕ ಎನ್ಡಿಆರ್ಎಫ್ ತಂಡಕ್ಕೆ ಧನ್ಯವಾದ ಹೇಳಿದ್ದಾರೆ.
2024ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗಾಗಿ ಭಾರತದ 15 ಸದಸ್ಯರ ತಂಡ ಪ್ರಕಟವಾಗಿದ್ದು, ರಾಧಾ ಯಾದವ್ ಕೂಡ ಸ್ಥಾನ ಪಡೆದಿದ್ದಾರೆ. ಟಿ20 ವಿಶ್ವಕಪ್ ಅಕ್ಟೋಬರ್ 3ರಿಂದ ಆರಂಭವಾಗಲಿದೆ. 'ಎ' ಗುಂಪಿನಲ್ಲಿ ಭಾರತ ಜೊತೆಗೆ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ಪಾಕಿಸ್ತಾನ, ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ಸೇರಿವೆ.
ಅಕ್ಟೋಬರ್ 4 ರಂದು ನ್ಯೂಜಿಲೆಂಡ್ ವಿರುದ್ಧ ಭಾರತ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಇತ್ತೀಚೆಗೆ ಮುಕ್ತಾಯವಾದ ಮಹಿಳಾ ಏಷ್ಯಾ ಕಪ್ನಲ್ಲಿ ಟೀಮ್ ಇಂಡಿಯಾ ಪರ ರಾಧಾ ಅದ್ಭುತ ಪ್ರದರ್ಶನ ನೀಡಿದ್ದರು. ಅವರು ಬಾಂಗ್ಲಾದೇಶ ವಿರುದ್ಧದ ಸೆಮಿಫೈನಲ್ನಲ್ಲಿ 3 ವಿಕೆಟ್ಗಳನ್ನು ಪಡೆದಿದ್ದರು.
ಭಾರತ ಪರ 80 ಟಿ20 ಪಂದ್ಯಗಳಲ್ಲಿ 90 ವಿಕೆಟ್ ಕಬಳಿಸಿದ್ದಾರೆ. ಆದರೆ ಏಕದಿನ ಕ್ರಿಕೆಟ್ನಲ್ಲಿ ಭಾರತದ ಪರ ಕೇವಲ ನಾಲ್ಕು ಪಂದ್ಯಗಳನ್ನು ಮಾತ್ರ ಆಡಿದ್ದು, ಒಂದು ವಿಕೆಟ್ ಪಡೆದಿದ್ದಾರೆ.
ಗುಜರಾತ್ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದ ಎಲ್ಲೆಂದರಲ್ಲಿ ನೀರು ತುಂಬಿಕೊಂಡಿದ್ದು, ಭೀಕರ ಪ್ರವಾಹ ಉಂಟಾಗಿದೆ. ಪರಿಣಾಮ 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನೀಡಲಾಗಿದೆ.
ಇನ್ನೊಂದೆಡೆ ಎನ್ಡಿಆರ್ಎಫ್ ತಂಡ ರಕ್ಷಣಾ ಕಾರ್ಯಾಚರಣೆಯನ್ನು ನಿರಂತರವಾಗಿ ನಡೆಸುತ್ತಿದೆ. ವಡೋದರಾದಲ್ಲೂ ವಿಶ್ವಾಮಿತ್ರಿ ನದಿಯ ಉಕ್ಕಿ ಹರಿಯುತ್ತಿದ್ದು, ಅಲ್ಲಿನ ಜನರು ಪ್ರವಾಹ ಎದುರಿಸುವಂತಾಗಿದೆ.