ಗೌಹಾತಿ, ಅಕ್ಟೋಬರ್ 11 : ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರರಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿರುವ ಘಟನೆ ನಡೆದಿದೆ.
ಭಾರತ ವಿರುದ್ಧದ 2ನೇ ಟಿ20 ಪಂದ್ಯದ ಗೆಲುವಿನ ಬಳಿಕ ಸಂಭ್ರಮದಲ್ಲಿ ಹೋಟೆಲ್ ಗೆ ತೆರಳುತ್ತಿದ್ದ ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರರಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

ಗೌಹಾತಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ಎರಡನೇ ಟಿ20 ಪಂದ್ಯ ಮುಗಿಸಿಕೊಂಡು ಹೋಟೆಲ್ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಕಲ್ಲು ತೂರಾಟದ ಪರಿಣಾಮ ಬಸ್ನ ಕಿಟಕಿ ಗ್ಲಾಸುಗಳು ಪುಡಿಪುಡಿಯಾಗಿದ್ದು, ಅದೃಷ್ಟವಶಾತ್ ಆಟಗಾರರಿಗೆ ಯಾವುದೇ ಅಪಾಯವಾಗಿಲ್ಲ. ಈ ಘಟನೆ ಬಗ್ಗೆ ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಅರನ್ ಫಿಂಚ್ ಟ್ವಿಟ್ಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅಸ್ಸಾಂನ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ, ಈ ಘಟನೆ ನಡೆದಿರುವುದಕ್ಕೆ ಕ್ಷಮೆಯಾಚಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಘಟನೆಯನ್ನು ಟೀಂ ಇಂಡಿಯಾದ ಆಲ್ ರೌಂಡರ್ ರವೀಚಂದ್ರನ್ ಅಶ್ವಿನ್ ಸೇರಿದಂತೆ ಹಲವರು ಖಂಡಿಸಿದ್ದಾರೆ.