ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಟೀಮ್ ಇಂಡಿಯಾ ಘೋಷಣೆಗಾಗಿ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಟೂರ್ನಿಯಲ್ಲಿ ಭಾಗವಹಿಸುವ 8 ತಂಡಗಳ ಪೈಕಿ 6 ತಂಡಗಳನ್ನು ಪ್ರಕಟಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಮಾತ್ರ ಇನ್ನೂ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2025ರ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸುವ ಮುನ್ನ, ಮಾಜಿ ಕ್ರಿಕೆಟಿಗರಾದ ಸುನಿಲ್ ಗವಾಸ್ಕರ್ ಮತ್ತು ಇರ್ಫಾನ್ ಪಠಾಣ್ ತಮ್ಮ ತಂಡದ ಆಯ್ಕೆಯನ್ನು ಬಹಿರಂಗಪಡಿಸಿದ್ದಾರೆ.
ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಸ್ಪಿನ್ನರ್ ಕುಲದೀಪ್ ಯಾದವ್ ಲಭ್ಯತೆಯ ಅನಿಶ್ಚಿತತೆಯಿಂದಾಗಿ ತಂಡವನ್ನು ಪ್ರಕಟಿಸುವ ಗಡುವನ್ನು ವಿಸ್ತರಿಸಲು ಐಸಿಸಿಗೆ ಮನವಿ ಮಾಡಿತ್ತು. ಜನವರಿ 19 ರಂದು ಅಧಿಕೃತ ತಂಡವನ್ನು ಪ್ರಕಟಿಸುವ ನಿರೀಕ್ಷೆಯಿದೆಯಾದರೂ, ಗವಾಸ್ಕರ್ ಮತ್ತು ಪಠಾಣ್ ತಮ್ಮ ತಂಡದಿಂದ ಕೆಲವು ಆಟಗಾರರ ಹೆಸರನ್ನು ಬಿಟ್ಟಿರುವುದು ಅಚ್ಚರಿ ಮೂಡಿಸಿದೆ.

ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕ ಬ್ಯಾಟರ್ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಇಬ್ಬರೂ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗಬೇಕು ಎಂದು ಸುನಿಲ್ ಗವಾಸ್ಕರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇದಲ್ಲದೆ, ಸಂಜು ಸ್ಯಾಮ್ಸನ್ ಅವರಿಗೂ ತಮ್ಮ ತಂಡದಲ್ಲಿ ಸ್ಥಾನ ನೀಡಿದ್ದಾರೆ. ಆದರೆ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಹಾಲ್ ಮತ್ತು ಇತರ ಕೆಲವು ಪ್ರಮುಖ ಆಟಗಾರರನ್ನು ತಂಡದಿಂದ ಗವಸ್ಕಾರ್ ಕೈ ಬಿಟ್ಟಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಸುನಿಲ್ ಗವಾಸ್ಕರ್ , 'ನಾನು ಬಿಸಿಸಿಐ ಆಯ್ಕೆ ಸಮಿತಿಯಲ್ಲಿ ಕುಳಿತಿದ್ದರೆ ಇತ್ತೀಚಿನ ದಿನಗಳಲ್ಲಿ ಯಾರು ನಿಜವಾಗಿಯೂ ಉತ್ತಮ ಪ್ರದರ್ಶನ ನೀಡಿದ್ದಾರೆ ಅವರಿಗೆ ಅವಕಾಶ ನೀಡುತ್ತಿದೆ. ಏಕದಿನ ವಿಶ್ವಕಪ್ನಲ್ಲಿ ಕೆಎಲ್ ರಾಹುಲ್ ಅವರ ಪ್ರದರ್ಶನ ಅತ್ಯುತ್ತಮವಾಗಿತ್ತು. ಮತ್ತು ಶ್ರೇಯಸ್ ಅಯ್ಯರ್ ಆಡಿದ ರೀತಿ ನೋಡಿದರೆ, ಅವರಿಗೆ ಸ್ವಲ್ಪ ಬೆಂಬಲ ಬೇಕು ಎನಿಸುತ್ತದೆ. ಕಳೆದ ಕೆಲವು ತಿಂಗಳುಗಳಿಂದ ಅವರಿಗೆ ಆ ಬೆಂಬಲ ಸಿಕ್ಕಿಲ್ಲ. ನಾನು ಖಂಡಿತವಾಗಿಯೂ ಈ ಇಬ್ಬರನ್ನೂ ಚಾಂಪಿಯನ್ಸ್ ಟ್ರೋಫಿಯಲ್ಲಿ ಸೇರಿಸುತ್ತೇನೆ ಎಂದಿದ್ದಾರೆ.
ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಅವರನ್ನು ಸ್ಪಿನ್ ಬೌಲಿಂಗ್ ಜೋಡಿಯಾಗಿ ಇರ್ಫಾನ್ ಪಠಾಟ್ ಆಯ್ಕೆ ಮಾಡಿದ್ದಾರೆ. ವೇಗದ ಬೌಲರ್ಗಳಲ್ಲಿ ಮೊಹಮ್ಮದ್ ಸಿರಾಜ್ ಮೂರನೇ ಸ್ಥಾನದಲ್ಲಿದ್ದಾರೆ. ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ತಂಡದ ಮೊದಲ ಇಬ್ಬರು ವೇಗದ ಬೌಲರ್ಗಳಾಗಬೇಕೆಂದು ಇರ್ಫಾನ್ ಬಯಸಿದ್ದಾರೆ. ಬ್ಯಾಕ್ಅಪ್ ಆಗಿ ವೇಗದ ಬೌಲಿಂಗ್ ಆಲ್ರೌಂಡರ್ ಆಗಿ ನಿತೀಶ್ ಕುಮಾರ್ ರೆಡ್ಡಿ ಅವರಿಗೆ ಸ್ಥಾನ ನೀಡಿದ್ದಾರೆ.
ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಶುಭಮನ್ ಗಿಲ್, ಸಂಜು ಸ್ಯಾಮ್ಸನ್, ಮೊಹಮ್ಮದ್ ಸಿರಾಜ್ ಮತ್ತು ನಿತೀಶ್ ಕುಮಾರ್ ರೆಡ್ಡಿ.