ಏಕದಿನ ವಿಶ್ವಕಪ್ ಟೂರ್ನಿ ಜೂನ್ 5ರಿಂದ ಆರಂಭವಾಗಲಿದ್ದು ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಣೆಸಾಡುವ ಮೂಲಕ ಟೂರ್ನಿಗೆ ಚಾಲನೆ ದೊರೆಯಲಿದೆ. ಆತಿಥೇಯ ಭಾರತ ಈ ಬಾರಿಯ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ. ವಿಶ್ವಕಪ್ ಟೂರ್ನಿಗೂ ಮುನ್ನ ಭಾರತ ತಂಡ ಏಷ್ಯಾಕಪ್ ಟೂರ್ನಿ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿತ್ತು. ಅಲ್ಲದೆ ಭಾರತ ಏಕದಿನ ಮಾದರಿಯಲ್ಲಿ ನಂಬರ್ 1 ಪಟ್ಟವನ್ನು ಕೂಡ ಅಲಂಕರಿಸಿದೆ. ಇದೆಲ್ಲವೂ ಭಾರತದ ಮೇಲೆ ನಿರೀಕ್ಷೆ ಮತ್ತಷ್ಟು ಹೆಚ್ಚುವಂತೆ ಮಾಡಿದೆ.
ಆದರೆ ಇಂಗ್ಲೆಂಡ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಪಾಕಿಸ್ತಾನದಂತಾ ತಂಡಗಳಿಂದ ಭಾರತಕ್ಕೆ ಭಾರೀ ಪೈಪೋಟಿ ಎದುರಾಗುವ ಸಾಧ್ಯತೆಯಿದ್ದು ಭಾರತ ಸ್ವಲ್ಪವೂ ಎಚ್ಚರವಹಿಸದೆ ಟೂರ್ನಿಯಲ್ಲಿ ಮುನ್ನುಗ್ಗಬೇಕಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರದರ್ಶನ ಸಾಕಷ್ಟು ಕುತೂಹಲ ಮೂಡಿಸಿದೆ.

ಇನ್ನು ಈ ವಿಶ್ವಕಪ್ ಟೂರ್ನಿಯ ಆರಂಭಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ತಂಡದ ಬಗ್ಗೆ ಕೆಲ ಮಾತುಗಳನ್ನಾಡಿದ್ದಾರೆ. ಈ ಸಂದರ್ಭದಲ್ಲಿ ಗವಾಸ್ಕರ್ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಮೇಲಿನ ನಿರೀಕ್ಷೆಯನ್ನು ಕೂಡ ಅವರು ವಿವರಿಸಿದ್ದಾರೆ. ಈ ವಿಶ್ವಕಪ್ನಲ್ಲಿ ಭಾರತ ಗೆದ್ದು ಚಾಂಪಿಯನ್ ಪಟ್ಟಕ್ಕೇರುವಷ್ಟೇ ಮಹತ್ವ ಮತ್ತೊಂದು ಪಂದ್ಯಕ್ಕೂ ಇದೆ ಎಂದಿದ್ದಾರೆ ಸುನಿಲ್ ಗವಾಸ್ಕರ್.
ಅಂದಹಾಗೆ ಸುನಿಲ್ ಗವಾಸ್ಕರ್ ಹೀಗೆ ಹೇಳಿರುವುದು ಬೇರೆ ಯಾವುದೇ ಪಂದ್ಯಕ್ಕಲ್ಲ. ಅದು ಭಾರತ vs ಪಾಕಿಸ್ತಾನ ಪಂದ್ಯಕ್ಕೆ. ಅಹ್ಮದಾಬಾದ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು ಅಕ್ಟೋಬರ್ 14ರಂದು ನಡೆಯಲಿರುವ ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಸಾಮಾನ್ಯ ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯದ ಮೇಲೆ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಹಾಗಾಗಿ ಈ ಪಂದ್ಯ ಭಾರತಕ್ಕೆ ಬಹಳ ಮುಖ್ಯ ಎಂದಿದ್ದಾರೆ ಸುನಿಲ್ ಗವಾಸ್ಕರ್.
"ನಾವು ಈ ಬಾರಿ ವಿಶ್ವಕಪ್ ಗೆಲ್ಲಲೇಬೇಕು. ಆದರೆ ಈ ಭಾರತ ಹಾಗೂ ಪಾಕಿಸ್ತಾನ ತಂಡಗಳ ಪಂದ್ಯ ಬಹಳ ಮಹತ್ವದ್ದಾಗಿದೆ. ನೀವು ಸಾಮಾನ್ಯ ಜನರನ್ನು ಕೇಳಿದರೆ ಪಾಕಿಸ್ತಾನದ ವಿರುದ್ಧ ಭಾರತ ಗೆಲ್ಲಬೇಕು ಎಂದು ಹೇಳುತ್ತಾರೆ. ಅದರ ಜೊತೆಗೆ ಭಾರತ ವಿಶ್ವಕಪ್ ಟೂರ್ನಿಯನ್ನು ಕೂಡ ಗೆಲ್ಲಬೇಕಿದೆ. ನಾವು ಖಂಡಿತವಾಗಿಯೂ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವಾಗಿದ್ದೇವೆ. ಅದರ ಬಗ್ಗೆ ಯಾವುದೇ ಅನುಮಾನವಿಲ್ಲ" ಎಂದು ಸುನಿಲ್ ಗವಾಸ್ಕರ್ ಇಂಡಿಯಾ ಟುಡೆ ಕಾನ್ಕ್ಲೇವ್ನಲ್ಲಿ ಹೇಳಿದ್ದಾರೆ.