ನವದೆಹಲಿ, ಸೆಪ್ಟೆಂಬರ್, 06 : ವಿಷ್ಣುವಿನ ಅವತಾರದಲ್ಲಿ ಜಾಹೀರಾತು ನೀಡಿ ವಿವಾದಕ್ಕೊಳಗಾಗಿದ್ದ ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಈಗ ನಿರಾಳರಾಗಿದ್ದಾರೆ. ಧೋನಿ ವಿರುದ್ಧದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಧೋನಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 05 ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ ಧೋನಿ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿದೆ.
2013ರ ಏಪ್ರಿಲ್ ನಲ್ಲಿ ಬಿಸಿನೆಸ್ ಟುಡೆ ಮ್ಯಾಗಜೀನ್ ಧೋನಿ ವಿಷ್ಣುವಿನ ವೇಷದಲ್ಲಿರುವ ವಿವಾದಾತ್ಮಕ ಫೋಟೊವನ್ನು ದಿ ಗಾಡ್ ಆಫ್ ಬಿಗ್ ಡೀಲ್ಸ್ ತಲೆ ಬರಹದೊಂದಿಗೆ ಪ್ರಕಟಿಸಿತ್ತು.

ವಿಷ್ಣು ಅವತಾರದಲ್ಲಿ ಫೋಸ್ ನೀಡಿರುವುದು ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆ ತಂದಿಲ್ಲ ಎಂದು ಸುಪ್ರೀಂ ಪೀಠ ಆದೇಶದಲ್ಲಿ ತಿಳಿಸಿದೆ. ವಿಷ್ಣುವಿನ ಅವತಾರದಲ್ಲಿ ಫೋಸ್ ನೀಡುವ ಮೂಲಕ ಧೋನಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕದ ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ಎಂಬವರು ದೂರು ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಧೋನಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸೂಚನೆ ನೀಡಿತ್ತು. ತನ್ನ ವಿರುದ್ಧದ ಕ್ರಿಮಿನಲ್ ಕೇಸ್ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಧೋನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು.
ಬಳಿಕ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಹಾಗೂ ತನ್ನ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕೆಂದು ಕೋರಿ ಎಂಎಸ್ ಧೋನಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.