
ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಶತಕ ಗಳಿಸಿದ ಸೂರ್ಯಕುಮಾರ್ ಯಾದವ್ ಬಗ್ಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಆತ ಭಾರತದ ಟೆಸ್ಟ್ ತಂಡದಲ್ಲಿ ಆಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಸೂರ್ಯಕುಮಾರ್ ಯಾದವ್ ತಡವಾಗಿ ಭಾರತ ತಂಡದಲ್ಲಿ ಸ್ಥಾನ ಪಡೆದರೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. 2021ರಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಸೂರ್ಯಕುಮಾರ್ ಯಾದವ್ ಸದ್ಯ ಟಿ20 ಮಾದರಿಯಲ್ಲಿ ಐಸಿಸಿ ರ್ಯಾಂಕಿಂಗ್ನಲ್ಲಿ ನಂಬರ್ 1 ಬ್ಯಾಟರ್ ಆಗಿದ್ದಾರೆ.
ಭಾರತ ಟೆಸ್ಟ್ ತಂಡದಲ್ಲಿ ಆಡುವ ಆಸೆಯಿದೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದರು. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ವೇಳೆ ಅವರು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದರು. ಆದರೂ ಅವರನ್ನು ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಿರಲಿಲ್ಲ. ವಿಶ್ರಾಂತಿಯಲ್ಲಿದ್ದರೂ ಕೂಡ ಸೂರ್ಯಕುಮಾರ್ ಯಾದವ್ ರಣಜಿ ಟ್ರೋಫಿಯಲ್ಲಿ ಮುಂಬೈ ತಂಡದ ಪರವಾಗಿ ಟೆಸ್ಟ್ ಪಂದ್ಯವನ್ನು ಆಡಿದರು.
ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಗೌತಮ್ ಗಂಭೀರ್ ಇನ್ಸ್ಟಾಗ್ರಾಂನಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. "ಎಂತಹ ಇನ್ನಿಂಗ್ಸ್, ಸೂರ್ಯಕುಮಾರ್ ಯಾದವ್ ಟೆಸ್ಟ್ ಕ್ರಿಕೆಟ್ ಆಡುವ ಸಮಯ" ಎಂದು ಬರೆದುಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ?
ಭಾರತ ಫೆಬ್ರವರಿ 9 ರಿಂದ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಅಪಘಾತದಲ್ಲಿ ಗಾಯಗೊಂಡಿರುವ ರಿಷಬ್ ಪಂತ್ ಈ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ಗೆ ಅವಕಾಶ ಸಿಕ್ಕರೂ ಅಚ್ಚರಿಯೇನಿಲ್ಲ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ತಲುಪಲು ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಸರಣಿ ಮಹತ್ವದ್ದಾಗಿದೆ. ಬಲಿಷ್ಠ ಆಸ್ಟ್ರೇಲಿಯಾ ಬೌಲಿಂಗ್ ಪಡೆಯನ್ನು ಎದುರಿಸಲು ಭಾರತಕ್ಕೆ ಬಲಿಷ್ಟ ಬ್ಯಾಟಿಂಗ್ ಪಡೆಯ ಅಗತ್ಯವಿದೆ.

ಸೂರ್ಯ ಆಡಿದರೆ ತಂಡಕ್ಕೆ ಲಾಭ!
ಸೂರ್ಯಕುಮಾರ್ ಈಗಾಗಲೇ ಟಿ20 ಮಾದರಿಯಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ಅಲ್ಲದೆ ರಣಜಿ ಪಂದ್ಯದಲ್ಲಿ ಕೂಡ ಅವರು ಉತ್ತಮವಾಗಿ ರನ್ ಗಳಿಸಿದ್ದಾರೆ. ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ದ ಏಕದಿನ ಸರಣಿಯಲ್ಲಿ ಸೂರ್ಯ ಹೆಚ್ಚಿನ ರನ್ ಗಳಿಸಿದರೆ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗುವ ಸಾಧ್ಯತೆ ಇದೆ.
ರಿಷಬ್ ಪಂತ್ ಟೆಸ್ಟ್ ಮಾದರಿಯಲ್ಲಿ ನಿರ್ಭೀತಿಯಿಂದ ಬ್ಯಾಟಿಂಗ್ ಮಾಡುತ್ತಿದ್ದರು. ಸೂರ್ಯ ಕೂಡ ಅದೇ ರೀತಿ ಬ್ಯಾಟ್ ಬೀಸುವುದರಿಂದ ಪಂತ್ ಬದಲಿಗೆ ಸೂರ್ಯ ಉತ್ತಮ ಆಯ್ಕೆಯಾಗಲಿದ್ದಾರೆ.