ಬೆಂಗಳೂರಿನಲ್ಲಿ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯ ಫೈನಲ್ ಪಂದ್ಯ ನಡೆಯುತ್ತಿದೆ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಮುಂಬೈ ಮತ್ತು ಮಧ್ಯಪ್ರದೇಶ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಧ್ಯಪ್ರದೇಶ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 174 ರನ್ ಕಲೆ ಹಾಕಿದೆ. ಮಧ್ಯಪ್ರದೇಶ ತಂಡವನ್ನು ಮುನ್ನಡೆಸತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಬ್ಯಾಟರ್ ರಜತ್ ಪಾಟಿದಾರ್ ಅದ್ಭುತ ಇನ್ನಿಂಗ್ಸ್ ಕಟ್ಟಿದ್ದಾರೆ. ಮುಂಬೈ ಬೌಲರ್ಗಳಿಗೆ ಬೆವರಿಳಿಸಿರುವ ರಜತ್ ಪಾಟಿದಾರ್ ತಮ್ಮ ಎರಡನೇ ತವರು ಮೈದಾನದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದಾರೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ರಜತ್ ಪಾಟಿದಾರ್ ಬ್ಯಾಟಿಂಗ್ ಎಲ್ಲರ ಗಮನ ಸೆಳೆದಿದೆ. ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್ಗೆ ಬಂದ ಪಾಟಿದಾರ್ ಬಿರುಸಿನ ಬ್ಯಾಟಿಂಗ್ ಮಾಡಿದ್ದಾರೆ. ಪಾಟಿದಾರ್ ಎದುರಿಸಿದ 40 ಎಸೆತಗಳಲ್ಲಿ 6 ಬೌಂಡರಿ ಮತ್ತು 6 ಸಿಕ್ಸರ್ ನೆರವಿನಿಂದ 81 ರನ್ಗಳ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದ್ದಾರೆ. ಪಾಟಿದಾರ್ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ಮಧ್ಯಪ್ರದೇಶ ತಂಡ 174 ರನ್ಗಳ ಚಾಲೆಜಿಂಗ್ ಮೊತ್ತವನ್ನು ಕಲೆಹಾಕಿದೆ.
ದೆಹಲಿ ತಂಡದ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿಯೂ ಮಧ್ಯಪ್ರದೇಶ ರಜತ್ ಪಾಟಿದಾರ್ ಸ್ಫೋಟಕ ಬ್ಯಾಟಿಂಗ್ ಬಲದಿಂದ ಗೆಲುವು ಸಾಧಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ ದೆಹಲಿ ತಂಡ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿತ್ತು. ಈ ರನ್ಗಳ ಗುರಿ ಬೆನ್ನಟ್ಟಿದ ಮಧ್ಯಪ್ರದೇಶ ಕೇವಲ 15.4 ಓವರ್ಗಳಲ್ಲಿ ಜಯ ಕಂಡಿತ್ತು. ಈ ಪಂದ್ಯದಲ್ಲಿಯೂ ರಜತ್ ಪಾಟಿದಾರ್ ಅವರು ದೆಹಲಿ ಬೌಲರ್ಗಳನ್ನು ಬೆಂಡೆತ್ತಿದ್ದರು. ಅವರು ಬರೋಬ್ಬರಿ 227 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸುವ ಮೂಲಕ 29 ಎಸೆತಗಳಲ್ಲಿ 4 ಬೌಂಡರಿ ಮತ್ತು 6 ಸಿಕ್ಸರ್ಗಳ ನೆರವಿನಿಂದ 66 ರನ್ ಬಾರಿಸಿದ್ದರು.