ನ್ಯೂಜಿಲೆಂಡ್ ವಿರುದ್ಧ ಆಫ್ಘಾನಿಸ್ತಾನ ವಿರುದ್ಧ ಸೋತರೆ ಮುಂದೆ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ರವೀಂದ್ರ ಜಡೇಜಾ
ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ನಂತರ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಪತ್ರಕರ್ತರೊಬ್ಬರು 'ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ಜಯಗಳಿಸಿದರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಅವಕಾಶವಿರುತ್ತದೆ, ಆದರೆ ನ್ಯೂಜಿಲೆಂಡ್ ವಿರುದ್ಧ ಅಫ್ಘಾನಿಸ್ತಾನ ಸೋಲನ್ನು ಅನುಭವಿಸಿದರೆ ಮುಂದೆ ಕಥೆಯೇನು' ಎಂದು ರವೀಂದ್ರ ಜಡೇಜಾಗೆ ಪ್ರಶ್ನೆಯನ್ನು ಹಾಕಿದರು. ಈ ಪ್ರಶ್ನೆಗೆ ಉತ್ತರಿಸಿದ ರವೀಂದ್ರ ಜಡೇಜಾ "ಬ್ಯಾಗ್ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗುವುದು ಅಷ್ಟೇ, ಮತ್ತೇನು" ಎಂದು ಉತ್ತರವನ್ನು ನೀಡಿದ್ದಾರೆ.
ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ
ಇನ್ನು ಭಾರತ ಮತ್ತು ಸ್ಕಾಟ್ಲೆಂಡ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ ರವೀಂದ್ರ ಜಡೇಜಾ ಕೇವಲ 15 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆಯುವುದರ ಮೂಲಕ ಸ್ಕಾಟ್ಲೆಂಡ್ ತಂಡ ಅಲ್ಪ ಮೊತ್ತಕ್ಕೆ ಆಲ್ ಔಟ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದರು. ರವೀಂದ್ರ ಜಡೇಜಾ ಅವರ ಈ ಉತ್ತಮ ಪ್ರದರ್ಶನಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಲಭಿಸಿತು.
ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಕ್ಕೆ ಇರುವ ಏಕೈಕ ದಾರಿ
ಟೂರ್ನಿಯಲ್ಲಿ ಇದುವರೆಗೂ 4 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಗೆದ್ದು ಮತ್ತೆರಡು ಪಂದ್ಯಗಳಲ್ಲಿ ಸೋತಿರುವ ಟೀಮ್ ಇಂಡಿಯಾ 4 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ. ಈ ಸ್ಥಾನದಲ್ಲಿರುವ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಬೇಕೆಂದರೆ ನಾಳೆ ( ನವೆಂಬರ್ 7 ) ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಕಡ್ಡಾಯವಾಗಿ ಸೋಲಬೇಕಿದೆ. ಅಷ್ಟೇ ಅಲ್ಲದೆ ಸೋಮವಾರ ಭಾರತ ಮತ್ತು ನಮೀಬಿಯಾ ತಂಡಗಳ ನಡುವೆ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ದೊಡ್ಡ ಅಂತರದಲ್ಲಿ ಮತ್ತೆ ಗೆಲುವು ಸಾಧಿಸಬೇಕಿದೆ. ಈ ರೀತಿ ನಡೆದರೆ ಮಾತ್ರ ಉತ್ತಮ ನೆಟ್ ರನ್ ರೇಟ್ ಸಹಾಯದಿಂದ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಲಿದೆ. ಒಂದುವೇಳೆ ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಗೆಲುವು ಸಾಧಿಸಿದರೆ ಟೀಮ್ ಇಂಡಿಯಾ ಸೆಮಿಫೈನಲ್ ರೇಸ್ನಿಂದ ಅಧಿಕೃತವಾಗಿ ಹೊರ ಬೀಳಲಿದ್ದು ನ್ಯೂಜಿಲೆಂಡ್ ಸೆಮಿಫೈನಲ್ ಸುತ್ತಿಗೆ ಲಗ್ಗೆ ಇಡಲಿದೆ.