
ಆಸ್ಟ್ರೇಲಿಯಾಗೆ ಪ್ರಯಾಣಿಸಿರುವ ಶಮಿ, ಸಿರಾಜ್
ಹಿರಿಯ ವೇಗದ ಬೌಲರ್ ಮೊಹಮ್ಮದ್ ಶಮಿ ಹಾಗೂ ದೀಪಕ್ ಚಹರ್ ಬದಲಿಗೆ ಮೀಸಲು ಆಟಗಾರನಾಗಿ ಸೇರಿಕೊಂಡಿರುವ ಮೊಹಮ್ಮದ್ ಸಿರಾಜ್ ಈಗಾಗಲೇ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಿದ್ದಾರೆ. ಈಗಾಗಲೇ ಅವರು ಭಾರತ ತಂಡವನ್ನು ಕೂಡಿಕೊಂಡಿದ್ದಾರೆ. ಬೂಮ್ರಾ ಗಾಯಗೊಂಡಿರುವ ಕಾರಣ ಶಮಿ ಭಾರತದ ಆಡುವ ಬಳಗವನ್ನು ಸೇರಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಆದರೆ ಶ್ರೇಯಸ್ ಐಯ್ಯರ್ ಹಾಗೂ ರವಿ ಬಿಷ್ಣೋಯ್ ಆಸ್ಟ್ರೇಲಿಯಾಗೆ ಪ್ರಯಾಣಿಸದೆ ಅಚ್ಚರಿ ಮೂಡಿಸಿದ್ದಾರೆ. ಈ ಇಬ್ಬರು ಆಟಗಾರರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭಾಗವಹಿಸಲು ತಮ್ಮ ತಮ್ಮ ರಾಜ್ಯ ತಂಡಗಳನ್ನು ಸೇರಿಕೊಂಡಿದ್ದಾರೆ.

ಬಿಸಿಸಿಐ ತೆಗೆದುಕೊಂಡ ನಿರ್ಧಾರ
ಟೀಮ್ ಇಂಡಿಯಾದ ಮೀಸಲು ಆಟಗಾರರಾಗಿ ಆಯ್ಕೆಯಾಗಿರುವ ಶ್ರೇಯಸ್ ಐಯ್ಯರ್ ಹಾಗೂ ರವಿ ಬಿಷ್ಣೋಯ್ ಸದ್ಯಕ್ಕೆ ಆಸ್ಟ್ರೇಲಿಯಾಗೆ ಪ್ರಯಾಣಿಸದಂತೆ ಬಿಸಿಸಿಐ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಪಿಟಿಐ ವರದಿ ಮಾಡಿದೆ. ಭಾರತ ತಂಡದ ಯಾವುದಾದರೂ ಬ್ಯಾಟರ್ ಗಾಯಗೊಂಡರೆ ಮಾತ್ರವೇ ಶ್ರೇಯಸ್ ಐಯ್ಯರ್ ಅವರನ್ನು ಆಸ್ಟ್ರೇಲಿಯಾಗೆ ಕರೆಸಿಕೊಳ್ಳಲು ನಿರ್ಧರಿಸಿದೆ. ಹೀಗಾಗಿ ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭಾಗಿಯಾಗಲು ಶ್ರೇಯಸ್ ಐಯ್ಯರ್ಗೆ ಬಿಸಿಸಿಐ ಸೂಚಿಸಿದೆ ಎನ್ನಲಾಗಿದ್ದು ಆಸ್ಟ್ರೇಲಿಯಾಗೆ ಪ್ರಯಾಣಿಸಲು ಸದಾ ಸಿದ್ದವಾಗಿರುವಂತೆ ತಿಳಿಸಲಾಗಿದೆ ಎಂದು ವರದಿಯಾಗಿದೆ. ರವಿ ಬಿಷ್ಣೋಯ್ ವಿಚಾರವಾಗಿಯೂ ಇದೇ ನಿರ್ಧಾರ ಮಾಡಿಕೊಂಡಿರುವ ಸಾಧ್ಯತೆಯಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಮಿಂಚಿರುವ ಐಯ್ಯರ್
ಇನ್ನು ಈ ಬಾರಿಯ ಟಿ20 ವಿಶ್ವಕಪ್ನ ಪ್ರಾಥಮಿಕ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿರುವ ಶ್ರೇಯಸ್ ಐಯ್ಯರ್ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಉಪನಾಯಕನ ಜವಾಬ್ಧಾರಿ ಹೊತ್ತುಕೊಂಡಿದ್ದರು. ಈ ಸರಣಿಯಲ್ಲಿ ಐಯ್ಯರ್ ಅಮೋಘ ಪ್ರದರ್ಶನ ನೀಡಿದ್ದು ಎಲ್ಲರ ಗಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆಡಿದ ಮೂರು ಪಂದ್ಯಗಳ ಪೈಕಿ ಒಂದು ಭರ್ಜರಿ ಶತಕ ಹಾಗೂ ಒಂದು ಅರ್ಧ ಶತಕ ಸಿಡಿಸಿದ ಐಯ್ಯರ್ ಅಂತಿಮ ಪಂದ್ಯದಲ್ಲಿಯೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ ಅಜೇಯವಾಗುಳಿದರು. ಸದ್ಯ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸಲಿದ್ದಾರೆ.

ವಿಶ್ವಕಪ್ಗೆ ಆಯ್ಕೆಯಾಗಿರುವ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್ದೀಪ್ ಸಿಂಗ್
ಸ್ಟ್ಯಾಂಡ್ಬೈ ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್


Click it and Unblock the Notifications












