ಟಿ20 ವಿಶ್ವಕಪ್ ರೋಚಕ ಘಟ್ಟದತ್ತ ಮುಖಮಾಡಿದೆ. ಶನಿವಾರ ಟಿ20 ವಿಶ್ವಕಪ್ನ ಸೂಪರ್ 8 ಹಂತದ ಪಂದ್ಯಗಳು ಆರಂಭವಾಗಿವೆ. ಟೀಮ್ ಇಂಡಿಯಾ ಈ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದು ಭಾನುವಾರ ಸೂಪರ್ 8 ಹಂತದ ಮೊದಲ ಪಂದ್ಯವನ್ನು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಅಹಮದಾಬಾದ್ನಲ್ಲಿ ನಡೆಯಲಿರುವ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಟೀಮ್ ಇಂಡಿಯಾ ಲೀಗ್ ಹಂತದಲ್ಲಿ ಆಡಿದ ನಾಲ್ಕು ಪಂದ್ಯಗಳನ್ನು ಗೆದ್ದಿದ್ದು ಅಜೇಯ ಓಟವನ್ನು ಮುಂದುವರೆಸಿದೆ. ಈ ವೇಳೆ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ರನ್ ಕಲೆ ಹಾಕುವಲ್ಲಿ ವಿಫಲರಾಗಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ.
ಪ್ರಸಕ್ತ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಅಭಿಷೇಕ್ ಶರ್ಮಾ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದಾರೆ. ಇವರು ಚುಟುಕು ವಿಶ್ವಕಪ್ನಲ್ಲಿ ಯುಎಸ್ಎ, ಪಾಕಿಸ್ತಾನ, ನೆದರ್ಲ್ಯಾಂಡ್ ವಿರುದ್ಧ ಸೊನ್ನೆ ಸುತ್ತಿ ನಿರಾಸೆ ಅನುಭವಿಸಿದ್ದರು. ಹೀಗಾಗಿ ಇವರ ಸ್ಥಾನದ ಮೇಲೆ ಟೀಕೆಗಳು ಆರಂಭವಾಗಿವೆ. ಅಭಿಷೇಕ್ ಶರ್ಮಾ ಅವರ ಫಾರ್ಮ್ ಬಗ್ಗೆ ಭಾರತೀಯ ನಾಯಕ ಸೂರ್ಯಕುಮಾರ್ ಯಾದವ್ ಮಹತ್ವದ ಹೇಳಿಕೆ ನೀಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಸೂಪರ್ 8 ಹಂತದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ತಯಾರಿ ನಡೆಸಿದೆ. ಈ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಸೂರ್ಯಕುಮಾರ್ ಯಾದವ್ ದೊಡ್ಡ ಹೇಳಿಕೆ ನೀಡಿದ್ದಾರೆ. ಅಭಿಷೇಕ್ ಶರ್ಮಾ ಅವರ ಫಾರ್ಮ್ ಬಗ್ಗೆ ಎದುರಾಳಿಗಳ ಚಿಂತೆ ಹೆಚ್ಚಿಸಿದೆ. ನನಗೆ ಅಭಿಷೇಕ್ ಅವರನ್ನು ಎದುರಿಸಲಿರುವ ತಂಡಗಳ ಬಗ್ಗೆ ಹೆಚ್ಚಿನ ಚಿಂತೆ ಇದೆ. ಅಭಿಷೇಕ್ ಕಳೆದ ವರ್ಷ ಭರ್ಜರಿ ಪ್ರದರ್ಶನ ನೀಡಿದ್ದರು. ಈಗ ನಾವು ಸಹ ಅವರ ಆಟಕ್ಕೆ ಮನ್ನಣೆ ನೀಡಬೇಕಿದೆ. ಅಭಿಷೇಕ್ ಶರ್ಮಾ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಆಡುತ್ತಿದ್ದಾರೆ. ನೆದರ್ಲ್ಯಾಂಡ್ ವಿರುದ್ದದ ಪಂದ್ಯದಲ್ಲಿ ಸೊನ್ನೆ ಸುತ್ತಿದ ಬಳಿಕ ನಿರಾಸೆ ಅವರ ಮುಖದಲ್ಲಿ ಸ್ಪಷ್ಟವಾಗಿ ಕಾಣುತ್ತಿತ್ತು ಎಂದು ಸೂರ್ಯ ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ದಾಖಲೆ ಚರ್ಚೆಯಲ್ಲಿದೆ. ಇವರು ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ 8 ಪಂದ್ಯಗಳಲ್ಲಿ 173.91 ಸ್ಟ್ರೈಕ್ ರೇಟ್ನಲ್ಲಿ 200 ರನ್ ಗಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಅಭಿಷೇಕ್ ಶರ್ಮಾ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಇವರು ದೊಡ್ಡ ಇನಿಂಗ್ಸ್ ಕಟ್ಟಿ ತಂಡದ ಗೆಲುವಿನಲ್ಲಿ ಮಿಂಚುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇವರು ಹರಿಣಿಗಳ ವಿರುದ್ಧ ಹೇಗೆ ಬ್ಯಾಟಿಂಗ್ ಮಾಡುತ್ತಾರೆ? ಎಂಬ ಬಗ್ಗೆ ಭಾನುವಾರ ಉತ್ತರ ಲಭಿಸಲಿದೆ.