ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾದ ಅಂತಿಮ ತಂಡವನ್ನು ಪ್ರಕಟಿಸಲಾಗಿದೆ. ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಂಡದಿಂದ ಹೊರಗುಳಿದಿರುವುದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತರಿಸಿದೆ.
ಆದರೆ ಹೆಡ್ಕೋಚ್ ಗೌತಮ್ ಗಂಭೀರ್ ಅವರ ಎರಡು ನಿರ್ಧಾರಗಳು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಚಾಂಪಿಯನ್ಸ್ ಟ್ರೋಫಿಯ ಭಾರತ ತಂಡದಿಂದ ಸ್ಟಾರ್ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರನ್ನು ಕೈಬಿಟ್ಟಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಜೈಸ್ವಾಲ್ ಕಳೆದ ತಿಂಗಳು ಆಯ್ಕೆಯಾದ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿದ್ದರು. ಇದರೊಂದಿಗೆ ಅವರು ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್ಗೂ ಪಾದಾರ್ಪಣೆ ಮಾಡಿದ್ದರು. ಆದರೆ, ಇದೀಗ ಚಾಂಪಿಯನ್ಸ್ ಟ್ರೋಫಿ ಅಂತಿಮ ತಂಡದಿಂದ ಜೈಸ್ವಾಲ್ ಅವರನ್ನು ಹೊರಗಿಡಲಾಗಿದೆ.
ಯಶಸ್ವಿ ಜೈಸ್ವಾಲ್ ಟಿ20 ಮತ್ತು ಟೆಸ್ಟ್ ಮಾದರಿಗಳಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಜೈಸ್ವಾಲ್ ಟೆಸ್ಟ್ನಲ್ಲಿ ಸಾಕಷ್ಟು ರನ್ ಗಳಿಸಿದ್ದಲ್ಲದೆ, ಟಿ20ಯಲ್ಲಿ ಎದುರಾಳಿ ತಂಡಗಳಲ್ಲಿ ಭಯ ಹುಟ್ಟಿಸಿದ್ದರು. ಅದಕ್ಕಾಗಿಯೇ ಅವರನ್ನು ಏಕದಿನ ಪಂದ್ಯದಲ್ಲೂ ಪಾದಾರ್ಪಣೆ ಮಾಡಲು ಯೋಜನೆ ರೂಪಿಸಲಾಯಿತು.
ಜೈಸ್ವಾಲ್ ಅವರನ್ನು ಚಾಂಪಿಯನ್ಸ್ ಟ್ರೋಫಿ ಮತ್ತು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಯಿತು. ಮೊದಲ ಪಂದ್ಯದಲ್ಲಿ ಅವರನ್ನು ಆಡಿಸಲಾಗಿತ್ತು. ಆದರೆ ಆ ಪಂದ್ಯದಲ್ಲಿ ಜೈಸ್ವಾಲ್ ಕೇವಲ 15 ರನ್ ಗಳಿಸಿದ್ದರು. ಇದಾದ ನಂತರ ಅವರನ್ನು ಮುಂದಿನ ಪಂದ್ಯದಿಂದ ಕೈಬಿಡಲಾಯಿತು. ಈಗ ಅವರನ್ನು ಚಾಂಪಿಯನ್ಸ್ ಟ್ರೋಫಿಯಿಂದಲೂ ಕೈಬಿಡಲಾಗಿದೆ. ಇದು ಭಾರತೀಯ ಕ್ರಿಕೆಟ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಹರ್ಷಿತ್ ರಾಣಾ ಕೂಡ ಸ್ಥಾನ ಪಡೆದಿದ್ದರು. ಬುಮ್ರಾ ಬದಲಿಗೆ ಅವರಿಗೆ ಅವಕಾಶ ಸಿಕ್ಕಿದ್ದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಬುಮ್ರಾ ಹೊರಬಿದ್ದರೆ, ಅರ್ಷದೀಪ್ ಸಿಂಗ್ ಅಥವಾ ಮೊಹಮ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂಬ ನಿರೀಕ್ಷೆಯನ್ನು ಅಭಿಮಾನಿಗಳು ಇಟ್ಟುಕೊಂಡಿದ್ದರು. ಆದರೆ ಆ ನಿರೀಕ್ಷೆ ಕಲ್ಪನೆಗೂ ಮೀರಿದೆ. ಬುಮ್ರಾ ಬದಲಿಗೆ ಹರ್ಷಿತ್ ರಾಣಾ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಭಾಗವಾಗಿರುವ ರಾಣಾ ಎರಡು ಪಂದ್ಯಗಳಲ್ಲಿ 4 ವಿಕೆಟ್ಗಳನ್ನು ಪಡೆದಿದ್ದಾರೆ.
ಗೌತಮ್ ಗಂಭೀರ್ ಅವರ ಕೋಚಿಂಗ್ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ. ಸಾಮಾಜಿಕ ಜಾಲತಾಣಗಳಲ್ಲಿ ಗಂಭೀರ್ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. 'ಗಂಭೀರ್ ಭಾರತೀಯ ಕ್ರಿಕೆಟ್ ಅನ್ನು ಹಾಳು ಮಾಡಿದ್ದಾರೆ.' ಅವರು ಭಾರತ ತಂಡವನ್ನು ಇಂಡಿಯನ್ ನೈಟ್ ರೈಡರ್ಸ್ ಮಾಡಿದ್ದಾರೆ ಎಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಪ್ರತಿಕ್ರಿಯಿಸುತ್ತಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯ ಭಾರತ ಅಂತಿಮ ತಂಡದಲ್ಲಿ ಐಪಿಎಲ್ನ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ವೇಗಿ ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ. ಗಂಭೀರ್ ಮಾರ್ಗದರ್ಶನದಲ್ಲಿ ಕಳೆದ ಬಾರಿ ಚಾಂಪಿಯನ್ ಆದ ಕೆಕೆಆರ್ ತಂಡದಲ್ಲಿ ಈ ಇಬ್ಬರೂ ಆಡಿದ್ದರು. ಹೀಗಾಗಿ ಇಬ್ಬರನ್ನು ಚಾಂಪಿಯನ್ ಟ್ರೋಫಿಗೆ ಗಂಭೀರ್ ಆಯ್ಕೆ ಮಾಡಿದ್ದಾರೆ ಎಂದು ಅಭಿಮಾನಿಗಳು ಆರೋಪಿಸುತ್ತಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜ, ವರುಣ್ ಚಕ್ರವರ್ತಿ.