ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಭಾರತ ತಂಡ 36 ವರ್ಷಗಳ ಬಳಿಕ ಸೋಲು ಕಂಡಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ನ್ಯೂಜಿಲೆಂಡ್ ಕಟ್ಟಿ ಹಾಕಿದೆ. ಈ ಮೂಲಕ ಕಿವೀಸ್ ಐತಿಹಾಸಿ ಗೆಲುವು ಸಾಧಿಸಿದೆ.
ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಗೆಲುವಿನ ಆರಂಭ ಮಾಡುವ ಉತ್ಸಾಹದಲ್ಲಿತ್ತು. ಆದರೆ ನ್ಯೂಜಿಲೆಂಡ್ ತಂಡದ ವೇಗ ಬೌಲರ್ಗಳು ಭಾರತ ಉತ್ಸಾಹವನ್ನು ಕುಗ್ಗುವಂತೆ ಮಾಡಿದರು. ಹೀಗಾಗಿ ಭಾರತದ ಟಾಪ್ ಆರ್ಡರ್ಗಳು ಮೊದಲ ಇನ್ನಿಂಗ್ಸ್ನಲ್ಲಿ ತಮ್ಮ ಪರಾಕ್ರಮ ಮೆರೆಯಲು ಸಾಧ್ಯವಾಗಿಲ್ಲ. ಇದು ಬೆಂಗಳೂರು ಟೆಸ್ಟ್ ಪಂದ್ಯದ ಸೋಲಿಗೆ ಕಾರಣವಾಯಿತು.

ಇದರ ಬೆನ್ನಲ್ಲೇ ಭಾರತ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ. ಎರಡನೇ ಮತ್ತು ಮೂರನೇ ಟೆಸ್ಟ್ ಪಂದ್ಯಗಳಿಗೆ ಭಾರತ ತಂಡದಲ್ಲಿ ಹೊಸ ಆಟಗಾರನನ್ನು ಸೇರಿಸಲಾಗಿದೆ ಎಂದು ಬಿಸಿಸಿಐ ಘೋಷಣೆ ಮಾಡಿದೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಅಧಿಕೃತ ಟ್ವೀಟರ್ (ಎಕ್ಸ್) ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಹೊಸ ಆಟಗಾರನ ಬಗ್ಗೆ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಬಿಸಿಸಿಐಯ ಪುರುಷರ ಆಯ್ಕೆ ಸಮಿತಿಯು ಭಾನುವಾರ ಸ್ಟಾರ್ ಯುವ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಉಳಿದ ಪಂದ್ಯಗಳಿಗೆ ಭಾರತ ತಂಡದಲ್ಲಿ ಸೇರಿಸಿದೆ.
ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಪುಣೆಯಲ್ಲಿ ವಾಷಿಂಗ್ಟನ್ ಸುಂದರ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ವಾಷಿಂಗ್ಟನ್ ಸುಂದರ್ ಮೂರು ವರ್ಷಗಳ ನಂತರ ಭಾರತ ಟೆಸ್ಟ್ ತಂಡಕ್ಕೆ ಮರಳಿರುವುದು ಅಭಿಮಾನಿಗಳಿಗೆ ಸಂತಸ ತರಿಸಿದೆ.
ವಾಷಿಂಗ್ಟನ್ ಸುಂದರ್ ಕೊನೆಯ ಬಾರಿಗೆ 2021ರಲ್ಲಿ ಇಂಗ್ಲೆಂಡ್ ತಂಡ ಭಾರತಕ್ಕೆ ಪ್ರವಾಸ ಕೈಗೊಂಡಾಗ ಟೆಸ್ಟ್ ಪಂದ್ಯವನ್ನು ಆಡಿದ್ದರು. ಅಂದಿನಿಂದ ಅವರಿಗೆ ಯಾವುದೇ ಟೆಸ್ಟ್ ಪಂದ್ಯ ಆಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ, ಈಗ ತಂಡ ಸೇರಿಕೊಂಡ ಬಳಿಕ ಪ್ಲೇಯಿಂಗ್-11ರಲ್ಲಿ ಅವಕಾಶ ಸಿಗುವ ನಿರೀಕ್ಷೆ ಇದೆ.
2021 ರಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾಗ ವಾಷಿಂಗ್ಟನ್ ಸುಂದರ್ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಅಡಿದ್ದರು. ಗಾಬಾ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಗೆಲುವಿನಲ್ಲಿ ಸುಂದರ್ ಪ್ರಮುಖ ಪಾತ್ರವಹಿಸಿದ್ದರು. ಇಲ್ಲಿಯವರೆಗೆ 4 ಟೆಸ್ಟ್ ಪಂದ್ಯಗಳನ್ನು ಆಡಿರುವ ಸುಂದರ್ 265 ರನ್ ಮತ್ತು 6 ವಿಕೆಟ್ ಪಡೆದಿದ್ದಾರೆ.
ಇತ್ತೀಚೆಗಷ್ಟೇ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ತಮಿಳುನಾಡು ಪರ ಆಡುತ್ತಿರುವ ವಾಷಿಂಗ್ಟನ್ ಸುಂದರ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಶತಕ ಸಿಡಿಸಿದ್ದರು. ದೆಹಲಿ ವಿರುದ್ಧದ ಪಂದ್ಯದಲ್ಲಿ ಮೊದಲ ದಿನ ಸಾಯಿ ಸುದರ್ಶನ್ (213) ಅವರ ದ್ವಿಶತಕದ ನಂತರ, ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ವಾಷಿಂಗ್ಟನ್ ಸುಂದರ್ ಶತಕ ಸಿಡಿಸಿ ಬಿಸಿಸಿಐಯ ಆಯ್ಕೆ ಸಮಿತಿಯ ಗಮನ ಸೆಳೆದಿದ್ದಾರೆ. ಸುಂದರ್ ಎದುರಿಸಿದ 269 ಎಸೆತಗಲ್ಲಿ 19 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 152 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದರು.
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ವಾಷಿಂಗ್ಟನ್ ಸುಂದರ್.