ಜುಲೈ 2 ಮಂಗಳವಾರ, 2024ರ ಟಿ20 ವಿಶ್ವಕಪ್ ಗೆದ್ದ ನಂತರ, ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು 'ಬೆರಿಲ್' ಚಂಡಮಾರುತದಿಂದಾಗಿ ಬಾರ್ಬಡೋಸ್ನಲ್ಲಿ ಸಿಲುಕಿಕೊಂಡಿದೆ. ಈ ನಡುವೆ ಯಂಗ್ ಟೀಮ್ ಇಂಡಿಯಾ ಜಿಂಬಾಬ್ವೆ ಪ್ರವಾಸಕ್ಕೆ ಕೈಗೊಂಡಿದೆ.
ಜಿಂಬಾಬ್ವೆ ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣ ಬೆಳೆಸಿರುವ ಆಟಗಾರರ ಕೆಲವು ಫೋಟೋಗಳನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಂಚಿಕೊಂಡಿದ್ದು, ಇದರಲ್ಲಿ ಹೆಡ್ ಕೋಚ್ ವಿವಿಎಸ್ ಲಕ್ಷ್ಮಣ್ ಕೂಡ ಕಾಣಿಸಿಕೊಂಡಿದ್ದಾರೆ.

ಶುಭಮನ್ ಗಿಲ್ ನಾಯಕತ್ವದ ಟೀಮ್ ಇಂಡಿಯಾ ಜಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿಗೆ ಹೊರಟಿದೆ. ಜುಲೈ 6 ರಿಂದ ಈ ಸರಣಿ ಆರಂಭವಾಗಲಿದೆ. ಹಲವು ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.
ಐಪಿಎಲ್ 2024ರಲ್ಲಿ ಅದ್ಭುತ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್ ಅವರಂತಹ ಸ್ಫೋಟಕ ಬ್ಯಾಟರ್ಗಳು ಟೀಮ್ ಇಂಡಿಯಾ ಪರ ಚೊಚ್ಚಲ ಪಂದ್ಯವಾಡಲು ಸಿದ್ದರಾಗಿದ್ದಾರೆ.
ಮತ್ತೊಂದೆಡೆ 2024ರ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದ ಶುಭ್ಮನ್ ಗಿಲ್ ಮೊದಲ ಬಾರಿಗೆ ಟೀಮ್ ಇಂಡಿಯಾವನ್ನು ಮುನ್ನೆಡೆಸುತ್ತಿದ್ದು, ವಿವಿಎಸ್ ಲಕ್ಷ್ಮಣ್ ಕೋಚ್ ಆಗಿ ತಂಡದೊಂದಿಗೆ ಇರಲಿದ್ದಾರೆ.
ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಆಲ್ರೌಂಡರ್ ರವೀಂದ್ರ ಜಡೇಜಾ ಚುಟುಕು ಕ್ರಿಕೆಟ್ಗೆ ವಿದಾಯ ಘೋಷಣೆ ಮಾಡಿದ್ದಾರೆ. ಇದೀಗ ಟಿ20 ಕ್ರಿಕೆಟ್ನಲ್ಲಿ ಭಾರತದ ಪ್ರಾಬಲ್ಯವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಯುವ ಆಟಗಾರರ ಮೇಲಿದೆ.
ಟಿ20 ವಿಶ್ವಕಪ್ ತಂಡದಲ್ಲಿದ್ದ ಯಶಸ್ವಿ ಜೈಸ್ವಾಲ್, ಶಿವಂ ದುಬೆ ಮತ್ತು ಸಂಜು ಸ್ಯಾಮ್ಸನ್ ಶೀಘ್ರದಲ್ಲೇ ಜಿಂಬಾಬ್ವೆ ಪ್ರವಾಸದ ತಂಡವನ್ನು ಸೇರಿಕೊಳ್ಳಲಿದ್ದಾರೆ. ಸದ್ಯ ಜೈಸ್ವಾಲ್, ದುಬೆ ಮತ್ತು ಸಂಜು ಬಾರ್ಬಡೋಸ್ನಲ್ಲಿ ತಂಡದೊಂದಿಗೆ ಸಿಲುಕಿಕೊಂಡಿದ್ದಾರೆ. ಬೆರಿಲ್ ಚಂಡಮಾರುತದಿಂದಾಗಿ ಭಾರತ ತಂಡ ತಮ್ಮ ದೇಶಕ್ಕೆ ಮರಳುವುದು ವಿಳಂಬವಾಗುತ್ತಿದೆ.
ಜಿಂಬಾಬ್ವೆ ಪ್ರವಾಸದಲ್ಲಿರುವ ಭಾರತ ತಂಡದಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಐಪಿಎಲ್ ತಾರೆಯರಾದ ಅಭಿಷೇಕ್ ಶರ್ಮಾ, ಧ್ರುವ ಜುರೆಲ್, ರಿಯಾನ್ ಪರಾಗ್ ಮತ್ತು ತುಷಾರ್ ದೇಶಪಾಂಡೆ ಅವರು ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡುವುದು ಖಚಿತವಾಗಿದೆ.
ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಈ ಹಿಂದೆ ತಂಡಕ್ಕೆ ಸೇರ್ಪಡೆಗೊಂಡಿದ್ದರು. ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಶಿವಂ ದುಬೆ ಅವರಿಗೆ ಆಯ್ಕೆ ಮಾಡಲಾಗಿದೆ.
ಮೊದಲ ಟಿ20 - ಶನಿವಾರ, ಜುಲೈ 6
ಎರಡನೇ ಟಿ20 - ಭಾನುವಾರ, ಜುಲೈ 7
ಮೂರನೇ ಟಿ20 - ಬುಧವಾರ, ಜುಲೈ 10
ನಾಲ್ಕನೇ ಟಿ20 - ಶನಿವಾರ, ಜುಲೈ 13
ಐದನೇ ಟಿ20 - ಭಾನುವಾರ, ಜುಲೈ 14
ಜಿಂಬಾಬ್ವೆ ಪ್ರವಾಸದ ಭಾರತ ತಂಡ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿವಂ ದುಬೆ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್ ,ತುಷಾರ್ ದೇಶಪಾಂಡೆ.