ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯವನ್ನಾಡಲು ಇಂದೋರ್ ಗೆ ತೆರಳಿರುವ ಟೀಂ ಇಂಡಿಯಾ ಆಟಗಾರರು, ಪುಣ್ಯಕ್ಷೇತ್ರವಾದ ಉಜ್ಜೈನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಟೀಂ ಇಂಡಿಯಾ ಆಟಗಾರರಾದ ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್ ಸೇರಿದಂತೆ ಹಲವು ಆಟಗಾರರು ಸೋಮವಾರ ಮುಂಜಾನೆ ಮಹಾಕಾಳೇಶ್ವರನ ದೇವಾಲಯಕ್ಕೆ ಭೇಟಿ ನೀಡಿದರು. ಅಲ್ಲದೆ ಪವಿತ್ರ ಭಸ್ಮ ಆರತಿಯನ್ನು ಮಾಡುವ ಮೂಲಕ ಶಿವನಲ್ಲಿ ಪ್ರಾರ್ಥನೆ ಮಾಡಿದರು.
4 ಪಂದ್ಯಗಳ ನಿಷೇಧ ಶಿಕ್ಷೆಯಿಂದ ತಪ್ಪಿಸಿಕೊಂಡ ಇಶಾನ್ ಕಿಶನ್: ಖಡಕ್ ವಾರ್ನಿಂಗ್ ಕೊಟ್ಟ ರೆಫರಿ
ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ ಬೇಗನೆ ಗುಣಮುಖರಾಗುವಂತೆ ಪ್ರಾರ್ಥನೆ ಮಾಡಿದ್ದಾಗಿ ಹೇಳಿದರು. ಆತ ಬೇಗನೆ ಫಿಟ್ ಆಗಿ ಮತ್ತೆ ಕ್ರಿಕೆಟ್ಗೆ ಮರಳುವಂತೆ ಬೇಡಿಕೊಳ್ಳಲಾಯಿತು ಎಂದು ಅವರು ಹೇಳಿದರು.
ಡಿಸೆಂಬರ್ 30 ರಂದು ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ರಿಷಬ್ ಪಂತ್ ಸದ್ಯ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲ್ವಿಚಾರಣೆಯನ್ನು ಬಿಸಿಸಿಐ ನೋಡಿಕೊಳ್ಳುತ್ತಿದ್ದು, ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. 2023ರಲ್ಲಿ ಅವರು ಕ್ರಿಕೆಟ್ ಆಡುವುದು ಅನುಮಾನ ಎನ್ನಲಾಗಿದೆ.
ತಂಡದ ಆಟಗಾರನ ಬಗ್ಗೆ ಕಾಳಜಿ
ಭಾರತೀಯ ಆಟಗಾರರು ತಮ್ಮ ತಂಡದ ಸದಸ್ಯರೊಬ್ಬರಿಗಾಗಿ ಈ ರೀತಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಮಾಡಿರುವುದಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಂಡ ಆಟಗಾರನ ಬಗ್ಗೆ ಇರುವ ಕಾಳಜಿಗಾಗಿ ಧನ್ಯವಾದ ತಿಳಿಸಿದ್ದಾರೆ.
ರಿಷಬ್ ಪಂತ್ ಅಪಘಾತದಲ್ಲಿ ಗಾಯಗೊಂಡ ಸಂದರ್ಭದಲ್ಲಿ ಕೂಡ ಟೀಂ ಇಂಡಿಯಾದ ಎಲ್ಲಾ ಆಟಗಾರರು ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. ಮೊಣಕಾಲಿನ ಶಸ್ತ್ರ ಚಿಕಿತ್ಸೆ ಬಳಿಕೆ ಟ್ವೀಟರ್ ನಲ್ಲಿ ರಿಷಬ್ ಪಂತ್ ಎಲ್ಲರಿಗೂ ಧನ್ಯವಾದ ತಿಳಿಸಿದ್ದರು. ಆದಷ್ಟು ಬೇಗನೆ ಮತ್ತೆ ಕ್ರಿಕೆಟ್ ಆಡಲು ಮರಳುವುದಾಗಿ ಹೇಳಿದ್ದರು.
ಸರಣಿ ವೈಟ್ವಾಶ್ ಮಾಡುವ ವಿಶ್ವಾಸ
ಮಂಗಳವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಸರಣಿಯ ಮೊದಲ ಎರಡೂ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಂ ಇಂಡಿಯಾ ಮೂರನೇ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ನಂಬರ್ 1 ಸ್ಥಾನಕ್ಕೇರಲಿದೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಹಲವು ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಇಂದೋರ್ ನಲ್ಲಿ ಭಾರತ ಇದುವರೆಗೂ 5 ಏಕದಿನ ಪಂದ್ಯಗಳನ್ನಾಡಿದ್ದು, ಎಲ್ಲಾ ಪಂದ್ಯಗಳಲ್ಲಿ ಕೂಡ ಜಯ ಸಾಧಿಸಿದೆ.