ವಿಶ್ವಕಪ್ ಅಭ್ಯಾಸ ಪಂದ್ಯದ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಇಂದು ಗುವಾಹಟಿಗೆ ತಲುಪಿದೆ. ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿದ್ದಂತೆ ಸಾವಿರಾರು ಕ್ರಿಕೆಟ್ ಅಭಿಮಾನಿಗಳು ಭಾರತ ತಂಡಕ್ಕೆ ಜೈಕಾರ ಹಾಕಿ ಸ್ವಾಗತಿಸಿದ್ದಾರೆ. ಗಾಯಗೊಂಡಿರುವ ಅಕ್ಸರ್ ಪಟೇಲ್ ಬದಲಿಗೆ ವಿಶ್ವಕಪ್ ತಂಡದಲ್ಲಿ ಅಂತಿಮ ಕ್ಷಣದಲ್ಲಿ ಸೇರ್ಪಡೆಗೊಂಡಿರುವ ರವಿಚಂದ್ರನ್ ಅಶ್ವಿನ್ ಮೆನ್ ಇನ್ ಬ್ಲೂ ಪಡೆಯ ಜೊತೆ ಗುವಾಹಟಿಗೆ ಪ್ರಯಾಣ ಬೆಳೆಸಿದ್ದಾರೆ.
ಇನ್ನು ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಪಂದ್ಯದಿಂದ ವಿಶ್ರಾಂತಿ ಪಡೆದುಕೊಂಡಿದ್ದ ಶುಬ್ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ಇಂದು ತಡವಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಆಸ್ಟ್ರೇಲಿಯ ವಿರುದ್ಧ ವಿಶ್ವಕಪ್ನ ಆರಂಭಿಕ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಎರಡು ಅಭ್ಯಾಸ ಪಂದ್ಯಗಳನ್ನು ಆಡಲು ಸಜ್ಜಾಗಿದೆ. ಮೆನ್ ಇನ್ ಬ್ಲೂ ತಂಡವು ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು ಅಕ್ಟೋಬರ್ 3 ರಂದು ನೆದರ್ಲ್ಯಾಂಡ್ಸ್ ವಿರುದ್ಧ ತಮ್ಮ ಅಂತಿಮ ಅಭ್ಯಾಸ ಪಂದ್ಯವನ್ನು ಆಡಲಿದೆ. ಆ ಪಂದ್ಯ ತಿರುವನಂತಪುರದಲ್ಲಿ ಆಯೋಜನೆಯಾಗಲಿದೆ.

ಮತ್ತೊಂದೆಡೆ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡ ಕೂಡ ಇಂದು ಮುಂಬೈಗೆ ಬಂದಿಳಿದು ನಂತರ ಮಧ್ಯರಾತ್ರಿ ಗುವಾಹಟಿಯನ್ನು ತಲುಪಲಿದೆ. ಭಾರತ ಮತ್ತು ಇಂಗ್ಲೆಂಡ್ ಎರಡೂ ಕ್ರಿಕೆಟ್ ತಂಡಗಳು ಕೂಡ ರಾಡಿಸನ್ ಬ್ಲ್ಯೂ ಹೋಟೆಲ್ನಲ್ಲಿ ಉಳಿಯಲಿವೆ ಎಂದು ವರದಿಯಾಗಿದೆ.
ಗಮನಾರ್ಹ ಅಂಶವೆಂದರೆ 2023 ರ ವಿಶ್ವಕಪ್ಗೆ ಮುಂಚಿತವಾಗಿ ಟೀಮ್ ಇಂಡಿಯಾ ಅನಿವಾರ್ಯವಾಗಿ ಒಂದು ಬದಲಾವಣೆ ಮಾಡಿಕೊಂಡಿದೆ. ಆಲ್ರೌಂಡರ್ ಅಕ್ಷರ್ ಪಟೇಲ್ ಅವರ ಗಾಯದಿಂದ ಸಮಯಕ್ಕೆ ಚೇತರಿಸಿಕೊಳ್ಳಲು ವಿಫಲರಾಗಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೆ ಆರ್ ಅಶ್ವಿನ್ ತಂಡವನ್ನು ಸೇರಿಕೊಂಡಿದ್ದಾರೆ. ಅನುಭವಿ ಆಫ್ ಸ್ಪಿನ್ನರ್ ಅಶ್ವಿನ್ ಕಳೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಭಾರತ ತಂಡವನ್ನು ಸೇರಿಕೊಂಡಿದ್ದು ಎರಡು ಪಮದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನಸೆಳೆದಿದ್ದಾರೆ.
ವಿಶ್ವಕಪ್ಗೂ ಮುನ್ನ ಭಾರತ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯ್ಳ ಏಕದಿನ ಸರಣಿಯನ್ನು ಯಶಸ್ವಿಯಾಗಿ ಗೆದ್ದುಕೊಂಡಿದೆ. ಅಂತಿಮ ಪಂದ್ಯದಲ್ಲಿ ಸೋಲಿನ ಹೊರತಾಗಿಯೂ ಈ ಸರಣಿಯಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡಲು ಯಶಸ್ವಿಯಾಗಿದ್ದು 2-1 ಅಂತರದಿಂದ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಈ ಸರಣಿಯ ಮುಕ್ತಾಯದ ಬಳಿಕ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮಾತನಾಡಿದ್ದು ತಂಡದ ಪ್ರದರ್ಶನದ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ.
ರಾಜ್ಕೋಟ್ನಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾಗೆ 66 ರನ್ಗಳ ಅಂತದಿಂದ ಶರಣಾಗಿತ್ತು. ಆದರೆ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದ ಕಾರಣ ಸರಣಿಯನ್ನು ಅದಾಗಲೇ ತನ್ನ ವಶಕ್ಕೆ ಪಡೆದುಕೊಂಡಿದೆ.