Umpire Manik gupta: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಕ್ರಿಕೆಟ್ ಪಂದ್ಯವೊಂದರ ವೇಳೆ ಮೈದಾನದಲ್ಲಿ ಏಕಾಏಕಿ ಜೇನುನೊಣಗಳ ಗುಂಪು ದಾಳಿ ನಡೆಸಿದ ಪರಿಣಾಮ ಅಂಪೈರ್ ಮೃತಪಟ್ಟಿದ್ದಾರೆ. ಈ ವೇಳೆ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕ್ರಿಕೆಟ್ ವಲಯದಲ್ಲಿ ಆಘಾತ ಮೂಡಿಸಿದೆ.
ಮನಿಕ್ ಗುಪ್ತಾ (65) ಜೇನು ನೊಣ ದಾಳಿಯಲ್ಲಿ ಮೃತಪಟ್ಟ ಅಂಪೈರ್. ಇವರು ಕಾನ್ಪುರ ಕ್ರಿಕೆಟ್ ಅಸೋಸಿಯೇಷನ್ಗೆ ಸೇರಿದವರಾಗಿದ್ದರು. ಘಟನೆ ಸಂಭವಿಸಿದ ವೇಳೆ ಅವರು ಕ್ರೀಡಾಂಗಣದಲ್ಲಿ ಅಂಡರ್-13 ಕ್ರಿಕೆಟ್ ಪಂದ್ಯದಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಜೇನು ನೊಣ ದಾಳಿ ನಡೆಯುತ್ತಿದ್ದಂತೆ ಅಲ್ಲಿಂದ ಆಟಗಾರರು ಹಾಗೂ ಪ್ರೇಕ್ಷಕರು ತಮ್ಮನ್ನು ರಕ್ಷಿಸಿಕೊಳ್ಳಲು ದಿಕ್ಕಪಾಲಾಗಿ ಓಡಿಹೋದರು. ಆದರೆ, ಈ ವೇಳೆ ಗುಪ್ತಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಅವರ ಸ್ಥಿತಿ ಗಂಭೀರವಾಗಿದ್ದರಿಂದ ಉನ್ನತ ವೈದ್ಯಕೀಯ ಸೌಲಭ್ಯ ಹೊಂದಿರುವ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಘಟನೆಯಲ್ಲಿ ಮತ್ತೊಬ್ಬ ಅಂಪೈರ್ ಜಗದೀಶ್ ಶರ್ಮಾ ಕೂಡ ಗಾಯಗೊಂಡಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಅದೇ ರೀತಿ ಗಾಯಗೊಂಡಿದ್ದ ಇತರ ಹಲವರ ಸ್ಥಿತಿಯೂ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಮೃತಪಟ್ಟ ಗುಪ್ತಾ ಅವರು ಸುಮಾರು 30 ವರ್ಷಗಳ ಕಾಲ ಕಾನ್ಪುರ ಕ್ರಿಕೆಟ್ ಅಸೋಸಿಯೇಷನ್ಗೆ ಸೇವೆ ಸಲ್ಲಿಸಿದ್ದರು. ಈ ಅವಧಿಯಲ್ಲಿ ಅವರು ಅನೇಕ ಪ್ರಮುಖ ಪ್ರಾದೇಶಿಕ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದರು.
2019ರಲ್ಲಿ ನಡೆದ ಇದೇ ರೀತಿಯ ಘಟನೆ ಸಂಭವಿಸಿತ್ತು. ತಿರುವನಂತಪುರಂನಲ್ಲಿ ಭಾರತ ಎ ಮತ್ತು ಇಂಗ್ಲೆಂಡ್ ಲಯನ್ಸ್ ತಂಡಗಳ ನಡುವೆ ನಡೆದ ಏಕದಿನ ಪಂದ್ಯವನ್ನು ಜೇನುನೊಣಗಳ ದಾಳಿಯ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾಯಿತು. ಆ ಸಂದರ್ಭದಲ್ಲಿ ಹಲವರು ಜೇನುನೊಣಗಳು ಕಚ್ಚಿದ್ದರಿಂದ ಗಾಯಗೊಂಡಿದ್ದು, ಯಾವುದೇ ಸಾವು ಸಂಭವಿಸಿರಲಿಲ್ಲ.