
ಸದ್ಯ ದಕ್ಷಿಣ ಆಫ್ರಿಕಾ ನೆಲದಲ್ಲಿ ಬೀಡುಬಿಟ್ಟಿರುವ ಟೀಮ್ ಇಂಡಿಯಾ ೩ ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಹೀನಾಯ ಸೋಲನ್ನು ಅನುಭವಿಸಿದ್ದು, ಇದೀಗ ಹರಿಣಗಳ ವಿರುದ್ದ ೩ ಪಂದ್ಯಗಳ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿದೆ. ಇತ್ತಂಡಗಳ ನಡುವಿನ ಮೊದಲ ಪಂದ್ಯ ಜನವರಿ ೧೯ರ ಬುಧವಾರದಂದು ನಡೆಯಲಿದ್ದು ಟೀಮ್ ಇಂಡಿಯಾ ಈ ಸರಣಿಯಲ್ಲಿ ಗೆಲುವು ಸಾಧಿಸುವುದರ ಮೂಲಕ ಟೆಸ್ಟ್ ಸರಣಿಯ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ. ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ದಕ್ಷಿಣ ಆಫ್ರಿಕಾ ವಿರುದ್ದದ ಈ ಏಕದಿನ ಸರಣಿಯ ಮೂಲಕ ರೋಹಿತ್ ಶರ್ಮಾ ಭಾರತ ಏಕದಿನ ತಂಡದ ಪೂರ್ಣಾವಧಿ ನಾಯಕನಾಗಿ ಕಣಕ್ಕಿಳಿಯುತ್ತಿದ್ದರು. ಆದರೆ, ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳುವ ಮುನ್ನ ರೋಹಿತ್ ಶರ್ಮಾ ಗಾಯದ ಸಮಸ್ಯೆಗೊಳಗಾದ ಕಾರಣ ಸರಣಿಗಳಿಂದ ಹೊರಗುಳಿದಿದ್ದು ಇದೀಗ ನಾಯಕತ್ವದ ಜವಾಬ್ದಾರಿ ಕೆಎಲ್ ರಾಹುಲ್ ಮೇಲೆ ಬಿದ್ದಿದೆ.
ಇನ್ನು ವಿರಾಟ್ ಕೊಹ್ಲಿ ಗಾಯದ ಸಮಸ್ಯೆಗೊಳಗಾಗಿದ್ದ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದರು. ಆ ಸಂದರ್ಭದಲ್ಲಿ ತಂಡವನ್ನು ಕೆಎಲ್ ರಾಹುಲ್ ನಾಯಕನಾಗಿ ಮುನ್ನಡೆಸಿದ್ದರು. ಆದರೆ ಆ ಪಂದ್ಯದಲ್ಲಿ ಕೆಎಲ್ ರಾಹುಲ್ ನಾಯಕತ್ವದ ಟೀಮ್ ಇಂಡಿಯಾ ಸೋಲನ್ನು ಅನುಭವಿಸಿತ್ತು. ಹೀಗಾಗಿ ಕೆಎಲ್ ರಾಹುಲ್ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ತಮ್ಮ ನಾಯಕತ್ವದಲ್ಲಿ ಯಶಸ್ವಿಯಾಗಿ ಮುಂದುವರೆಸಿ ಕಮ್ ಬ್ಯಾಕ್ ಮಾಡಬೇಕಿದೆ. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ಕೆಎಲ್ ರಾಹುಲ್ ಪತ್ರಿಕಾಗೋಷ್ಠಿಯೊಂದನ್ನು ನಡೆಸಿದ್ದು ಯಾವ ಆಟಗಾರರು ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಳ್ಳಬಹುದು ಎಂಬುದರ ಕುರಿತು ಸುಳಿವು ನೀಡಿದ್ದಾರೆ.
ಈ ಬಾರಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಪ್ರಕಟವಾಗಿರುವ ಟೀಮ್ ಇಂಡಿಯಾದಲ್ಲಿ ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಿಂಚಿದ ಯುವ ಆಟಗಾರರಾದ ವೆಂಕಟೇಶ್ ಐಯ್ಯರ್ ಹಾಗೂ ರುತುರಾಜ್ ಗಾಯಕ್ವಾಡ್ ಸ್ಥಾನ ಪಡೆದುಕೊಂಡಿದ್ದಾರೆ. ಈ ಇಬ್ಬರಲ್ಲಿ ಯಾರಾದರೂ ಒಬ್ಬ ಆಟಗಾರ ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆಗಳು ಹೆಚ್ಚಿವೆ.