ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಲೇ ಕಾರ್ಯಪ್ರವೃತ್ತರಾಗಿದ್ದಾರೆ. ಬೆಳಗಾವಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾದ ಕೆಎಸ್ಸಿಎ ನೂತನ ಅಧ್ಯಕ್ಷ ಚಿನ್ನಸ್ವಾಮಿ ಅಂಗಳದಲ್ಲಿ ಕ್ರಿಕೆಟ್ ಮರಳಿ ತರಲು ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಇವರು ಬೆಳಗಾವಿಯಲ್ಲಿ ಇರುವ ಕ್ರಿಕೆಟ್ ಸ್ಟೇಡಿಯಂಗೆ ಭೇಟಿ ನೀಡಿದರು.
ಸುವರ್ಣ ಸೌಧದಲ್ಲಿ ವೆಂಕಟೇಶ್ ಪ್ರಸಾದ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನಕ್ಕೆ ಕ್ರಿಕೆಟ್ ಮರಳಿ ತರುವ ಬಗ್ಗೆ ಚರ್ಚೆಗಳನ್ನು ನಡೆಸಿದ್ದಾರೆ. ಬಳಿಕ ಮಾಹಿತಿ ನೀಡಿರುವ ಕೆಎಸ್ಸಿಎ ಅಧ್ಯಕ್ಷ ಐಪಿಎಲ್ ಅಷ್ಟೇ ಅಲ್ಲ, ಅಂತಾರಾಷ್ಟ್ರೀಯ ಪಂದ್ಯಗಳನ್ನು ಸಹ ಮೈದಾನದಲ್ಲಿ ಆಡಿಸುವ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. ಮೈದಾನದಲ್ಲಿ ಎಲ್ಲ ಪಂದ್ಯಗಳನ್ನು ಆಡಿಸಲು ನೆರವು ನೀಡುವುದಾಗಿ ಸಿಎಂ ಡಿಸಿಎಂ ಆಶ್ವಾಸನೆ ನೀಡಿದ್ದಾರೆ. ಎಲ್ಲ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಗಲಿದೆ ಎಂದು ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಿಂದ ಪಂದ್ಯಗಳು ಕೈತಪ್ಪಬಾರದು ಎಂಬ ಉದ್ದೇಶ ವೆಂಕಟೇಶ್ ಪ್ರಸಾದ್ ಅವರ ತಂಡದ್ದಾಗಿದೆ. ಭಾನುವಾರ ನಡೆದ ಕೆಎಸ್ಸಿಎ ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಗೇಮ್ ಚೇಂಜರ್ಸ್ ತಂಡವನ್ನು ಪ್ರತಿನಿಧಿಸಿದ್ದ ವೆಂಕಟೇಶ್ ಪ್ರಸಾದ್ 749 ಮತಗಳನ್ನು ಪಡೆದು ಗೆಲುವು ದಾಖಲಿಸಿದ್ದರು. ಸಿಎಂ ಭೇಟಿಯ ವೇಳೆ ನೂತನವಾಗಿ ಆಯ್ಕೆ ಆದ ಕಾರ್ಯಕಾರಿ ಸಮಿತಿಯ ಸದಸ್ಯರು ಎಲ್ಲರೂ ಹಾಜರಿದ್ದರು.
ಈಗಾಗಲೇ ಚಿನ್ನಸ್ವಾಮಿ ಮೈದಾನದಿಂದ ಹಲವು ಪಂದ್ಯಗಳು ಕೈತಪ್ಪಿವೆ. ಮುಂದೆ ಈ ರೀತಿ ಆಗಲು ನಾವು ಬಿಡುವುದಿಲ್ಲ. ಭಾರತೀಯ ಕ್ರಿಕೆಟ್ ಮಂಡಳಿ ಸಹ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ನಡೆಸುವ ಬಗ್ಗೆ ವಿವರಣೆ ಕೇಳಿದೆ ಎಂದು ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ. ಈ ವೇಳೆ ಕೆಎಸ್ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಬೆಳಗಾವಿಯಲ್ಲಿ ಇರುವ ಕ್ರಿಕೆಟ್ ಸ್ಟೇಡಿಯಂಗೆ ಭೇಟಿ ನೀಡಿದರು. ಹಾಗೂ ಕಳೆದ ಮೂರು ನಾಲ್ಕು ವರ್ಷದಲ್ಲಿ ಈ ಮೈದಾನದಲ್ಲಿ ಪಂದ್ಯ ನಡೆಯದಕ್ಕೆ ಬೇಸರ ವ್ಯಕ್ತ ಪಡಿಸಿದರು.
ಭಾರತದ ಪರ ವೆಂಕಟೇಶ್ ಪ್ರಸಾದ್ 33 ಟೆಸ್ಟ್ ಪಂದ್ಯದಿಂದ 96 ವಿಕೆಟ್ ಕಬಳಿಸಿದ್ದರೆ, 161 ಏಕದಿನ ಪಂದ್ಯದಿಂದ 196 ವಿಕೆಟ್ ಪಡೆದಿದ್ದಾರೆ. ಅಲ್ಲದೆ 2010 ರಿಂದ 2013 ರವರೆಗೆ ಕೆಎಸ್ಸಿಎ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 12 ವರ್ಷಗಳ ಬಳಿಕ ಮತ್ತೆ ಕೆಎಸ್ಸಿಎಗೆ ವೆಂಕಟೇಶ್ ಪ್ರಸಾದ್ ಮರಳಿದ್ದಾರೆ.