ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸೋಲಿನ ಬಳಿಕ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟೆಂಪಲ್ ರನ್ ಆರಂಭಿಸಿದ್ದಾರೆ. ಭಾರತದಲ್ಲಿರುವ ಕೆಲವು ಪ್ರಸಿದ್ಧ ಆಧ್ಯಾತ್ಮಿಕ ಸ್ಥಳಗಳಿಗೆ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಹಾಗು ಮಕ್ಕಳೊಂದಿಗೆ ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗೆ ವೃಂದಾವನದಲ್ಲಿ ಪ್ರೇಮಾನಂದಜಿ ಮಹಾರಾಜ್ ಅವರನ್ನು ಭೇಟಿ ಮಾಡಿದ ಸ್ಟಾರ್ ದಂಪತಿ ಆಶೀರ್ವಾದ ಪಡೆದಿದ್ದರು. ಇದೀಗ ವೃಂದಾವನ ಆಶ್ರಮದಲ್ಲಿ ರಾಧಾವಲ್ಲಭ ಲಾಲ್ ಜಿ ಅವರ ಆಶೀರ್ವಾದ ಪಡೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಕೇವಲ 190 ರನ್ ಗಳಿಸಿದ್ದು. ಪರ್ತ್ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ್ದು ಬಿಟ್ಟರೆ, ಕೊಹ್ಲಿ ಉಳಿದ ಪಂದ್ಯಗಳಲ್ಲಿ ನಿರಾಸೆ ಮೂಡಿಸಿದ್ದರು. ಇದೀಗ ಇಂಗ್ಲೆಂಡ್ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಗೂ ಮನ್ನ ವಿರಾಟ್ ಕೊಹ್ಲಿ ವೃಂದಾವನ ಆಶ್ರಮಕ್ಕೆ ಭೇಟಿ ನೀಡುವ ಮೂಲಕ ರಾಧಾವಲ್ಲಭ ಲಾಲ್ ಜಿ ಅವರ ಆಶೀರ್ವಾದವನ್ನು ಸ್ವೀಕರಿಸಿದ್ದಾರೆ.

ವಿರಾಟ್ ಕೊಹ್ಲಿ ವೃಂದಾವನ ಆಶ್ರಮಕ್ಕೆ ಭೇಟಿ ನೀಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಸಾಮಾನ್ಯರಂತೆ ಭಕ್ತಿಯಲ್ಲಿ ಮುಳಗಿ ಹೋಗಿದ್ದಾರೆ. ಈ ವೇಳೆ ವಿರಾಟ್ ಕೊಹ್ಲಿ ಜೊತೆಗೆ ಅನುಷ್ಕಾ ಶರ್ಮಾ ಕೂಡ ತಮ್ಮ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ.
ವಿರಾಟ್ ಕೊಹ್ಲಿ ಅವರ ಆಧ್ಯಾತ್ಮಿಕ ಪ್ರಯಾಣವನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಆದರೆ, ಕೆಲವರು ಮಾತ್ರ ವಿರಾಟ್ ಕೊಹ್ಲಿ ಅವರನ್ನು ಟೀಕಿಸಿದ್ದಾರೆ. ಫೋಟೋ ಮತ್ತು ವಿಡಿಯೋಗಳಿಗಾಗಿ ವಿರಾಟ್ ಕೊಹ್ಲಿ ಆಶ್ರಮಕ್ಕೆ ಭೇಟಿ ನೀಡಿದ್ದಾರೆ ಎಂದು ಕಾಮೆಂಟ್ಗಳನ್ನು ಮಾಡಿದ್ದಾರೆ.
ವಿರಾಟ್ ಕೊಹ್ಲಿ ರಣಜಿ ಟ್ರೋಫಿಯಲ್ಲಿ ದೆಹಲಿ ತಂಡದ ಪರ ಆಡಲಿದ್ದಾರೆ ಎಂದು ವರದಿಗಳು ಹೇಳಿವೆ. ಆದರೆ, ಈ ಕುರಿತು ದೆಹಲಿ ಕ್ರಿಕೆಟ್ ಯಾವುದೇ ಸ್ಪಷ್ಟತೆ ನೀಡಿಲ್ಲ. ಸ್ಟಾರ್ ವಿಕೆಟ್ಕೀಪರ್-ಬ್ಯಾಟರ್ ರಿಷಬ್ ಪಂತ್ ಮಾತ್ರ ದೆಹಲಿ ಪರ ಕಣಕ್ಕಿಳಿಯಲಿದ್ದಾರೆ ಎಂದು ಹೇಳಿದೆ. ಟ್ರೋಫಿ 2025 ಮತ್ತು ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಸರಣಿಗಳು ಸಮೀಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ತಮ್ಮ ಲಯ ಕಂಡುಕೊಳ್ಳಲು ರಣಜಿ ಟ್ರೋಫಿಯಲ್ಲಿ ಆಡುವುದು ಉತ್ತಮ ಅವಕಾಶ ಎನ್ನಬಹುದು.