

ನವದೆಹಲಿ, ಸೆಪ್ಟೆಂಬರ್ 17: ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅವರು ಕ್ರೀಡಾ ಅತ್ಯುನ್ನತ ಗೌರವವಾದ 'ರಾಜೀವ್ ಗಾಂಧಿ ಖೇಲ್ ರತ್ನ' ಪ್ರಶಸ್ತಿ ಪಡೆದ ದೇಶದ ಮೂರನೇ ಕ್ರಿಕೆಟಿಗ ಎನಿಸಲಿದ್ದಾರೆ. ಕೊಹ್ಲಿ ಮತ್ತು ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರ ಹೆಸರು ಖೇಲ್ ರತ್ನಾ ಪ್ರಶಸ್ತಿಗೆ ಶಿಫಾರಸ್ಸಾಗಿದೆ.
ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು 2018ರ ಗೋಲ್ಡ್ ಕೋಸ್ಟ್ ಕಾಮನ್ವೆಲ್ತ್ ಗೇಮ್ಸ್ ವೇಟ್ ಲಿಫ್ಟಿಂಗ್ ನಲ್ಲಿ ಬಂಗಾರ ಗೆದ್ದಿದ್ದ ಮೀರಾಬಾಯಿ ಚಾನು ಹೆಸರು ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಕಳೆದ ಏಪ್ರಿಲ್ ನಲ್ಲಿ ಭಾರತ ತಂಡದ ಮಾಜಿ ನಾಯಕ, ಕನ್ನಡಿಗ ರಾಹುಲ್ ದ್ರಾವಿಡ್ ಅವರ ಹೆಸರನ್ನು ಬಿಸಿಸಿಐ ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸು ಮಾಡಿತ್ತು. ಈಗ ರಾಜೀವ್ ಗಾಂಧಿ ಖೇಲ್ ರತ್ನಕ್ಕೆ ಕೊಹ್ಲಿ ಹೆಸರನ್ನು ಶಿಫಾರಸು ಮಾಡಿದೆ.
ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್ ಮತ್ತು ಏಕದಿನದಲ್ಲಿ ಪ್ರಸ್ತುತ ವಿಶ್ವ ನಂ. 1 ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರಲ್ಲದೆ ಇತ್ತೀಚೆಗೆ ಮುಕ್ತಾಯಗೊಂಡ ಭಾರತ vs ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಗಮನಾರ್ಹ ಸಾಧನೆ ತೋರಿದ್ದರು. 5 ಪಂದ್ಯಗಳ ಈ ಟೆಸ್ಟ್ ಸರಣಿಯಲ್ಲಿ ಕೊಹ್ಲಿ 500ಕ್ಕೂ ಅಧಿಕ ರನ್ ಗಳಿಸಿದ್ದರು.