ಭಾರತದಲ್ಲಿ ಸದ್ಯ ವಿಜಯ್ ಹಜಾರೆ ಏಕದಿನ ಪಂದ್ಯಗಳು ನಡೆಯುತ್ತಿವೆ. ಈ ಪಂದ್ಯಗಳಲ್ಲಿ ಸೂಪರ್ ಸ್ಟಾರ್ ಆಟಗಾರರು ಭಾಗವಹಿಸುತ್ತಿದ್ದಾರೆ. ಜನವರಿ 6 ರಿಂಧ ಆಲೂರಿನಲ್ಲಿ ದೆಹಲಿ ಹಾಗೂ ರೈಲ್ವೇಸ್ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ವಿರಾಟ್ ಕೊಹ್ಲಿ ತಂಡವನ್ನು ಸೇರಿಕೊಳ್ಳಬಹುದು ಎಂಬ ಮಾತುಗಳು ಇದ್ದವು. ಈಗ ಈ ಸುದ್ದಿಗೆ ಬಿಗ್ ಅಪ್ಡೇಟ್ ಸಿಕ್ಕಿದೆ.
ದೇಶೀಯ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ, ಇನ್ನು ಯಾವುದೇ ಪಂದ್ಯವನ್ನು ಆಡುತ್ತಿಲ್ಲ. ದೆಹಲಿ ಪರ ವಿರಾಟ್ ಕೊಹ್ಲಿ ಸೊಗಸಾದ ಆಟದ ಪ್ರದರ್ಶನ ನೀಡಿದರು. ತಾವಾಡಿದ ಮೊದಲ ಪಂದ್ಯದಲ್ಲಿ 131, ಎರಡನೇ ಪಂದ್ಯದಲ್ಲಿ 77 ರನ್ ಬಾರಿಸಿ ಅಬ್ಬರಿಸಿದರು. ಈ ಮೂಲಕ ವಿರಾಟ್ ಬಿಸಿಸಿಐ ಸೂಚನೆಯ ಪ್ರಕಾರ ಎರಡು ಪಂದ್ಯಗಳನ್ನು ಆಡಿದರು. ಇದರ ನಂತರ, ಮುಂದಿನ ಮೂರು ಪಂದ್ಯಗಳಲ್ಲಿ ಅವರು ಆಡಲು ಸಾಧ್ಯವಾಗಲಿಲ್ಲ.

ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಗೂ ಮುನ್ನ ವಿಜಯ್ ಹಜಾರೆಯಲ್ಲಿ ಆಡಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಇದು ಈಗ ಸಂಭವಿಸುವುದಿಲ್ಲ ಎಂದು ತಿಳಿದು ಬಂದಿದೆ. ಹಿಂದೂಸ್ತಾನ್ ಟೈಮ್ಸ್ ಜೊತೆ ಮಾತನಾಡಿರುವ ದೆಹಲಿ ಕೋಚ್ ಸರಣ್ದೀಪ್ ಸಿಂಗ್, ಆರನೇ ಪಂದ್ಯಕ್ಕೆ ವಿರಾಟ್ ಕೊಹ್ಲಿ ಲಭ್ಯವಿಲ್ಲ ಎಂದು ಹೇಳಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿಜಯ್ ಹಜಾರೆ ಟ್ರೋಫಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಇದಕ್ಕೂ ಮೊದಲು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಆಡಿದ 3 ಪಂದ್ಯಗಳಲ್ಲಿ 2 ಶತಕ ಸಿಡಿಸಿದ್ದಾರೆ. ರೋಹಿತ್ ಸಹ ದಕ್ಷಿಣ ಆಫ್ರಿಕಾ ವಿರುದ್ಧ ಸ್ಥಿರ ಬ್ಯಾಟಿಂಗ್ ನಡೆಸಿದ್ದಾರೆ. ಈ ಇಬ್ಬರೂ ಆಟಗಾರರು ವಿಜಯ್ ಹಜಾರೆ ಟ್ರೋಫಿಯ ಮುಂದಿನ ಪಂದ್ಯಗಳಲ್ಲಿ ಆಡುತ್ತಿಲ್ಲ. ಆದರೆ ಇವರ ಬದಲಿಗೆ ಟೀಮ್ ಇಂಡಿಯಾದ ಉಪನಾಯಕ ಶ್ರೇಯಸ್ ಅಯ್ಯರ್ ಹಾಗೂ ನಾಯಕ ಶುಭಮನ್ ಗಿಲ್ ಅವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ.
ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಅಲೆಕ್ಸ್ ಕ್ಯಾರಿ ಕ್ಯಾಚ್ ಪಡೆದು ಗಾಯಕ್ಕೆ ತುತ್ತಾಗಿದ್ದ ಶ್ರೇಯಸ್ ಅಯ್ಯರ್, ಆಸ್ಪತ್ರೆಗೆ ದಾಖಲಾಗಿದ್ದರು. ಅಗತ್ಯ ಉಪಚಾರಗಳನ್ನು ಪಡೆದು ಈಗ ಶ್ರೇಯಸ್ ಮೈದಾನಕ್ಕೆ ಇಳಿಯಲು ಸಿದ್ಧರಾಗಿದ್ದಾರೆ. ಎಲ್ಲರ ಕಣ್ಣುಗಳು ಇವರ ಮೇಲ ನೆಟ್ಟಿವೆ. ಇವರು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಅಲ್ಲದೆ ಇವರಿಗೆ ಉಪನಾಯಕನ ಪಟ್ಟವನ್ನು ಕಟ್ಟಲಾಗಿದೆ. ಗಾಯದಿಂದ ಚೇತರಿಸಿಕೊಂಡಿರುವ ಶ್ರೇಯಸ್ ಮುಂಬೈ ತಂಡಕ್ಕೆ ಆಗಮಿಸುತ್ತಿದ್ದಂತೆ ನಾಯಕನ ಪಟ್ಟವನ್ನು ಕಟ್ಟಲಾಗಿದೆ.